ವಿಜಯಪುರ: ರಾಜ್ಯದಲ್ಲಿನ ನೀರಾವರಿ ಯೋಜನೆ ಪೂರ್ಣಗೊಳಿಸಲು ಕಟ್ಟಿಬದ್ಧವಾಗಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಜಿಲ್ಲಾಡಳಿತ ಹಾಗೂ ಸರ್ಕಾರದ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಮುದ್ದೇಬಿಹಾಳದ ನಾಲತಾವಾಡದಲ್ಲಿ ವಿವಿಧ ಅಭಿವೃದ್ಧಿ ಕಾಮಕಾರಿಗಳ ಶಿಲಾನ್ಯಾಸ ಹಾಗೂ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಕೆರೆ ತುಂಬಿಸುವ ಯೋಜನೆಗಳನ್ನು ಸಂಪೂರ್ಣಗೊಳಿಸಲಾಗುತ್ತಿದೆ. ರೇವಣ ಸಿದ್ದೇಶ್ವರ ಏತ ನೀರಾವರಿಗೆ ಅಡಿಗಲ್ಲು ಹಾಕಲಾಗಿದೆ. ರಾಜ್ಯದ ಪಾಲಿನ ನೀರನ್ನು ಸದ್ಬಳಕೆ ಮಾಡಲು ನಮ್ಮ ಸರ್ಕಾರ ಆದ್ಯತೆ ನೀಡಿದೆ. ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಗಾಗಿ ಕಿತ್ತೂರು ಅಭಿವೃದ್ಧಿ ಮಂಡಳಿ ರಚಿಸಿ ಅನುದಾನ ನೀಡಲಾಗಿದೆ ಎಂದರು.
ಜಲ ಜೀವನ್ ಮಿಷನ್ ಅಡಿಯಲ್ಲಿ ದೇಶದಲ್ಲಿ 12 ಕೋಟಿ ಮನೆಗಳಿಗೆ ನೀರು ಒದಗಿಸಲಾಗಿದೆ. ಮೂರು ವರ್ಷಗಳಲ್ಲಿ 40 ಲಕ್ಷ ಮನೆಗಳಿಗೆ ಕುಡಿಯುವ ನೀರಿನ ಸಂಪರ್ಕ ಒದಗಿಸಲಾಗಿದೆ. ಮುಂದಿನ ವರ್ಷ 25 ಲಕ್ಷ ಮನೆಗಳಿಗೆ ನೀರು ಒದಗಿಸಲಾಗುತ್ತಿದೆ ವಿಜಯಪುರ ಜಿಲ್ಲೆಯಲ್ಲಿ 4.64 ಲಕ್ಷ ಮನೆಗಳಿಗೆ ಕುಡಿಯುವ ನೀರು ಒದಗಿಸುವ ಗುರಿಯಿದ್ದು, ಈಗಾಗಲೇ 2.87 ಸಾವಿರ ಮನೆಗಳಿಗೆ ನೀರು ಒದಗಿಸಲಾಗಿದೆ .ಜಲಧಾರೆಯಲ್ಲಿ ನಗರ ಪ್ರದೇಶಗಳಲ್ಲಿ3000 ಕೋಟಿ ರೂ.ಗಳನ್ನು ಒಡಗಿಸಿದ್ದು, ಮುಂದಿನ ದಿನಗಳಲ್ಲಿ ಎಲ್ಲಾ ಪ್ರದೇಶಗಳಲ್ಲಿ ನೀರು ಒದಗಿಸಲು ಚಿಂತಿಸಲಾಗಿದೆ ಎಂದು ಅವರು ತಿಳಿಸಿದರು.
ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಚಿಮ್ಮನಗಿ, ಮುಳವಾಡಿ, ಗುತ್ತಿ ಬಸವಣ್ಣ, ಕೊಪ್ಪಳ ಏತ ನೀರಾವರಿ ಸೇರಿದಂತೆ ಒಟ್ಟು 9 ನೀರಾವರಿಯ ಪ್ರಕ್ರಿಯೆಗೆ ವೇಗ ನೀಡಲಾಯಿತು. 2009 ತಿಂಗಳಿನಲ್ಲಿ ಚಿಮ್ಮಲಗಿ ಏತನೀರಾವರಿ, ಮುಳವಾಡದ 2 ನೇ ಹಂತದ ಏತ ನೀರಾವರಿಗೆ ಅನುಮೋದನೆ ಪಡೆಯಲಾಯಿತು. ವಿಜಯಪುರ ಜಿಲ್ಲೆಗೆ ಐದು ನದಿಗಳು ಹರಿದರೂ ಬರ ತಪ್ಪಲಿಲ್ಲ. ವಿಜಯಪುರ ಜಿಲ್ಲೆಯ ಎಲ್ಲಾ ಕ್ಷೇತ್ರಗಳ ನೀರಾವರಿಯಾಗುವವರೆಗೂ ಸುಮಾರು 5 ಲಕ್ಷ ಹೆಕ್ಟೇರಿಗೆ ನೀರಾವರಿಯಾಗುವವರೆಗೂ ನಾವು ವಿಶ್ರಮಿಸುವುದಿಲ್ಲ ಎಂದರು.
ಸ್ತ್ರೀ ಶಕ್ತಿ ಸಂಘಗಳಿಗೆ ಸ್ವಯಂ ಉದ್ಯೋಗಕ್ಕಾಗಿ 20 ಸಾವಿರ ಹಣ ಬಿಡುಗಡೆ ಮಾಡಲಾಗುತ್ತಿದೆ. ಸ್ವಾಮಿ ವಿವೇಕಾನಂದ ಯೋಜನೆಯನ್ನು 23 ರಂದು 13 ಸಾವಿರ ಯುವಶಕ್ತಿ ಕೇಂದ್ರಗಳಿಗೆ ಅನುದಾನ ಬಿಡುಗಡೆ ಮಾಡಲಾಗುವುದು. ಈ ಮೂಲಕ ಕಾಯಕ ಕ್ರಾಂತಿ ಮಾಡಬೇಕು ಎಂದರು. ಎಸ್.ಸಿ.ಎಸ್ .ಟಿ ಗಳಿಗೆ ಮೀಸಲಾತಿ ಹೆಚ್ವಿಸಿ ಸಾಮಾಜಿಕ ನ್ಯಾಯಕ್ಕೆ ಒತ್ತು ನೀಡಲಾಗಿದೆ. ಎಲ್ಲಾ ವರ್ಗಕ್ಕೆ ನ್ಯಾಯ ನೀಡುವ ಕೆಲಸ ಮಾಡಿದ್ದೇವೆ. ಮುದ್ದೇಬಿಹಾಳ ಮಾದರಿ ಯಾಗುವಂತೆ ಕೆಲಸ ಮಾಡಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.
Advertisement