ಒಳ ಮೀಸಲಾತಿ: ರಾಜ್ಯದ ವಿವಿಧೆಡೆ ಬಂಜಾರ ಸಮುದಾಯದಿಂದ ರಸ್ತೆ ತಡೆ, ಟಯರ್ ಗೆ ಬೆಂಕಿ ಹಚ್ಚಿ ಆಕ್ರೋಶ!

ಬಂಜಾರ ಸಮುದಾಯದ ಒಳಮೀಸಲಾತಿ ವಿರೋಧಿ ಪ್ರತಿಭಟನೆ ಮಂಗಳವಾರ ರಾಜ್ಯದ ವಿವಿಧ ಕಡೆಗಳಲ್ಲಿ ನಡೆಯಿತು. ಶಿವಮೊಗ್ಗ ತಾಲೂಕಿನ ಕುಂಚೇನಹಳ್ಳಿ, ಬಾಗಲಕೋಟೆಯ ಹಲವು ತಾಂಡಾಗಳಲ್ಲಿ ಬಂಜಾರ ಸಮುದಾಯದ ಆಕ್ರೋಶ ಸ್ಫೋಟಗೊಂಡಿತು. 
ಬಂಜಾರ ಸಮುದಾಯದಿಂದ ಪ್ರತಿಭಟನೆ ಚಿತ್ರ
ಬಂಜಾರ ಸಮುದಾಯದಿಂದ ಪ್ರತಿಭಟನೆ ಚಿತ್ರ

ಶಿವಮೊಗ್ಗ: ಬಂಜಾರ ಸಮುದಾಯದ ಒಳಮೀಸಲಾತಿ ವಿರೋಧಿ ಪ್ರತಿಭಟನೆ ಮಂಗಳವಾರ ರಾಜ್ಯದ ವಿವಿಧ ಕಡೆಗಳಲ್ಲಿ ನಡೆಯಿತು. ಶಿವಮೊಗ್ಗ ತಾಲೂಕಿನ ಕುಂಚೇನಹಳ್ಳಿ, ಬಾಗಲಕೋಟೆಯ ಹಲವು ತಾಂಡಾಗಳಲ್ಲಿ ಬಂಜಾರ ಸಮುದಾಯದ ಆಕ್ರೋಶ ಸ್ಫೋಟಗೊಂಡಿತು. 

ಶಿವಮೊಗ್ಗದ ಕುಂಚೇನಹಳ್ಳಿಯಲ್ಲಿ ಬಂಜಾರ ಸಮುದಾಯದ ಪ್ರತಿಭಟನಾಕಾರರು ರಸ್ತೆ ತಡೆ ನಡೆಸಿ ಹಾಗೂ ಟಯರ್‌ಗಳಿಗೆ ಬೆಂಕಿ ಹಚ್ಚಿದ್ದಾರೆ.  ಸರ್ಕಾರ ನ್ಯಾಯಮೂರ್ತಿ ಸದಾಶಿವ ವರದಿ ಆಯೋಗ ಸಂಪೂರ್ಣ ಜಾರಿ ಮಾಡಿಲ್ಲ ಎಂದು ಸ್ಪಷ್ಟನೆ ನೀಡಿದ್ದರೂ ಬಂಜಾರ ಸಮುದಾಯದವರ ಆಕ್ರೋಶ ತಣಿದಿಲ್ಲ .

ಕುಂಚೇನಹಳ್ಳಿಯಲ್ಲಿ ರಸ್ತೆ ತಡೆ ನಡೆಸಿ ಧರಣಿ ನಡೆಸಿದ ಪ್ರತಿಭಟನಾಕಾರರು ಟಯರ್‌ಗಳಿಗೆ ಬೆಂಕಿ ಹಚ್ಚಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ಶಿವಮೊಗ್ಗ-ಶಿಕಾರಿಪುರ ರಾಜ್ಯ ಹೆದ್ದಾರಿಯಲ್ಲಿ ರಸ್ತೆ ತಡೆ ನಡೆಸಿ ರಸ್ತೆ ಮಧ್ಯೆ ಟಯರ್‌ಗೆ ಬೆಂಕಿ ಹಚ್ಚಿ ನಡೆಸಿದ ಪ್ರತಿಭಟನೆಯಿಂದ ಹೆದ್ದಾರಿಯಲ್ಲಿ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತ್ತು. ರಸ್ತೆಯ ಎರಡೂ ಕಡೆಗಳಲ್ಲಿ ನೂರಾರು ವಾಹನಗಳು ಸಾಲುಗಟ್ಟಿ ನಿಂತವು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪ್ರತಿಭಟನಾ ನಿರತರ ಜತೆ ಮಾತುಕತೆ ನಡೆಸಿ ಮನವೊಲಿಸಿದ ನಂತರ ಗ್ರಾಮಸ್ಥರು ಪ್ರತಿಭಟನೆ ಸ್ಥಗಿತಗೊಳಿಸಿದರು.

ಬಾಗಲಕೋಟೆ ಜಿಲ್ಲೆಯಾದ್ಯಂತ ಪ್ರತಿಭಟನೆ: 

ಒಳ ಮೀಸಲಾತಿ ಪ್ರಮಾಣ ಕಡಿತಗೊಳಿಸಲಾಗಿದೆ ಎಂದು ಖಂಡಿಸಿ ಬಾಗಲಕೋಟೆ ಜಿಲ್ಲೆಯಾದ್ಯಂತ ವಿವಿಧೆಡೆ ಬಂಜಾರ ಸಮುದಾಯದವರು ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ಹೊರ ಹಾಕಿದರು.

ಬೀಳಗಿ ತಾಲೂಕಿನ ಸುನಗ ತಾಂಡಾ, ಬಾಗಲಕೋಟ ತಾಲೂಕಿನ ಮುಚಖಂಡಿ ತಾಂಡಾ, ಹುನಗುಂದ ತಾಲೂಕಿನ ಅಮಿನಗಡ ತಾಂಡಾ, ಕಮತಗಿ ತಾಂಡಾ, ಅಚನೂರ ತಾಂಡಾ, ನೀಲಾನಗರ ತಾಂಡಾ, ಲವಳೇಶ್ವರ ತಾಂಡಾ, ಜಡ್ರಾಮನಕುಂಟೆ, ಶಿರಗುಪ್ಪಿ ತಾಂಡಾ ಮತ್ತಿತರ ಕಡೆಗಳಲ್ಲಿ ತೀವ್ರ ಪ್ರತಿಭಟನೆಗಳು ನಡೆದವು. ಮನೆಗಳ ಮೇಲೆ, ವಿದ್ಯುತ್ ಕಂಬಗಳ ಮೇಲೆ ಕಟ್ಟಲಾಗಿದ್ದ ಬಿಜೆಪಿ ಬಾವುಟಗಳನ್ನು ಕಿತ್ತೆಸೆದ ಪ್ರತಿಭಟನಾಕಾರರು ಧಿಕ್ಕಾರದ ಘೋಷಣೆಗಳನ್ನು ಕೂಗಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com