ಬಿಜೆಪಿ ಅಭ್ಯರ್ಥಿ ಆಡಿಯೋ ವೈರಲ್: ಸತ್ಯಾಸತ್ಯತೆ ಬಗ್ಗೆ ತನಿಖೆ ನಡೆಸುತ್ತೇವೆ ಎಂದ ಸಿಎಂ ಬೊಮ್ಮಾಯಿ
ಹುಬ್ಬಳ್ಳಿ: ಬಿಜೆಪಿ ಅಭ್ಯರ್ಥಿ ಆಡಿಯೋ ವೈರಲ್ ಆಗಿದ್ದು, ಈ ಕುರಿತು ಸತ್ಯಾಸತ್ಯತೆಗಳ ಬಗ್ಗೆ ತನಿಖೆ ನಡೆಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶನಿವಾರ ಹೇಳಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ಕುಟುಂಬಸ್ಥರ ಕುರಿತು ಮಣಿಕಂಠ ರಾಥೋಡ್ ಅವರು ಮಾತನಾಡಿದ್ದಾರೆ ಎನ್ನಲಾದ ಆಡಿಯೋವೊಂದು ವೈರಲ್ ಆಗಿದ್ದು, ಈ ಆಡಿಯೋ ಹಿಡಿದು ಬಿಜೆಪಿ ವಿರುದ್ಧ ಕಾಂಗ್ರೆಸ್ ಕಿಡಿಕಾರುತ್ತಿದೆ.
ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ಈ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಆಡಿಯೋ ತಿರುಚಲಾಗಿದೆಯೋ ಎಂಬುದರ ಬಗ್ಗೆ ಪರಿಶೀಲನೆ ನಡೆಸಬೇಕಿದೆ. ಆಡಿಯೋ ಬಗ್ಗೆ ಪ್ರಕರಣ ದಾಖಲಿಸಿ ಸತ್ಯಾಸತ್ಯತೆ ಬಗ್ಗೆ ತನಿಖೆ ನಡೆಸುತ್ತೇವೆ. ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತೇವೆಂದು ಹೇಳಿದ್ದಾರೆ.
ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ ಅವರು ಲಿಂಗಾಯತ ಮತಗಳು ಬೇಡ ಎಂದು ಹೇಳಿದ್ದಾರೆನ್ನುವುದು ಸುಳ್ಳು ಸುದ್ದಿಯಾಗಿದೆ. ಈಗಾಗಲೇ ಈ ಬಗ್ಗೆ ದೂರು ಕೂಡ ದಾಖಲು ಮಾಡಲಾಗಿದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ