
ಸಂಗ್ರಹ ಚಿತ್ರ
ಬೆಂಗಳೂರು: ಸಂಬಳ ನೀಡುವಂತೆ ಪತಿ ಹಾಗೂ ಅತ್ತೆ ನೀಡುತ್ತಿದ್ದ ಕಿರುಕುಳ ತಾಳಲಾರದೆ 26 ವರ್ಷದ ಸಾಫ್ಟ್ವೇರ್ ಇಂಜಿನಿಯರ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದಲ್ಲಿ ನಡೆದಿದೆ.
ಬಿ.ಪಲ್ಲವಿ ಆತ್ಮಹತ್ಯೆಗೆ ಶರಣಾದ ಮಹಿಳೆಯಾಗಿದ್ದಾರೆ. ಆಂಧ್ರಪ್ರದೇಶ ಮೂಲದವರಾದ ಇವರು ಕಳೆದ ವರ್ಷ ಫೆಬ್ರವರಿ ತಿಂಗಳಿನಲ್ಲಿ ವೃತ್ತಿಯಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿರುವ ಸುದರ್ಶನ್ ರೆಡ್ಡಿ ಅವರನ್ನು ವಿವಾಹವಾಗಿದ್ದರು.
ದಂಪತಿಗಳು ಅಮೃತಹಳ್ಳಿಯಲ್ಲಿರುವ ಅಪಾರ್ಟ್ಮೆಂಟ್ ನಲ್ಲಿ ವಾಸವಿದ್ದರು. ಆತ್ಮಹತ್ಯೆಗೂ ಮುನ್ನ ಪಲ್ಲವಿ ಅವರು ಸೂಸೈಟ್ ನೋಟ್ ಬರೆದಿಟ್ಟಿದ್ದು, ಈ ಪತ್ರದಿಂದಾಗಿ ಆತ್ಮಹತ್ಯೆಗೆ ಕಾರಣಗಳು ತಿಳಿದು ಬಂದಿದೆ.
ಇದನ್ನೂ ಓದಿ: ಬೀದಿ ನಾಯಿಗಳಿಗೆ ಆಹಾರ ನೀಡಿದ ಮಹಿಳೆ ಮೇಲೆ ಐವರಿಂದ ಹಲ್ಲೆ: ಪ್ರಕರಣ ದಾಖಲು
ಪತಿ ಹಾಗೂ ಅತ್ತೆಯ ಕಿರುಕುಳ ತಾಳಲಾರದೆ ಆತ್ಮಹತ್ಯೆಗೆ ಶರಣಾಗಿರುವುದಾಗಿ ಪಲ್ಲವಿ ಪತ್ರದಲ್ಲಿ ಹೇಳಿಕೊಂಡಿದ್ದಾರೆ.
ಪತಿ ಊರಿಗೆ ಹೋದ ಸಂದರ್ಭದಲ್ಲಿ ಅಪಾರ್ಟ್ ಮೆಂಟ್ ನಲ್ಲಿ ಪಲ್ಲವಿ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಹಲವು ಬಾರಿ ಕರೆ ಮಾಡಿದರೂ ಫೋನ್ ತೆಗೆಯದ ಹಿನ್ನೆಲೆಯಲ್ಲಿ ಪೋಷಕರು ಫ್ಲ್ಯಾಟ್ ಮಾಲೀಕರಿಗೆ ವಿಚಾರ ತಿಳಿಸಿದ್ದಾರೆ. ಈ ವೇಳೆ ಮಾಲೀಕರು ಮನೆಗೆ ತೆರಳಿದಾಗ ಘಟನೆ ಬೆಳಕಿಗೆ ಬಂದಿದೆ.
ಸುದರ್ಶನ್ ಮಾನ್ಯತಾ ಟೆಕ್ ಪಾರ್ಕ್ ನ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಈ ಹಿಂದೆ ಕೂಡ ಪಲ್ಲವಿ ಪತಿ ನೀಡುತ್ತಿದ್ದ ಕಿರುಕುಳದ ಬಗ್ಗೆ ತನ್ನ ತಾಯಿ ಮತ್ತು ಸಹೋದರಿಯ ಹೇಳಿಕೊಂಡಿದ್ದರು ಎಂದು ತಿಳಿದುಬಂದಿದೆ. ಘಟನೆ ಸಂಬಂಧ ಪಲ್ಲವಿ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ಇದೀಗ ಆರೋಪಿಯನ್ನು ಬಂಧನಕ್ಕೊಳಪಡಿಸಿರುವ ಪೊಲೀಸರು, ನ್ಯಾಯಾಂಗ ಬಂಧನದಲ್ಲಿರಿಸಿದ್ದಾರೆ. ಈ ಸಂಬಂಧ ಅಮೃತಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.