social_icon

ಸಂಸತ್ ಭವನ ದೇಶದ ಆಸ್ತಿ, ಬಿಜೆಪಿ-ಆರ್‌ಎಸ್‌ಎಸ್ ಕಚೇರಿಯಲ್ಲ: ಸಂಸತ್ ಭವನ ಉದ್ಘಾಟನೆಯಲ್ಲಿ ಭಾಗಿಯಾಗುತ್ತೇನೆ; ಹೆಚ್'ಡಿ.ದೇವೇಗೌಡ

ಮೇ 28 ರಂದು ನವದೆಹಲಿಯಲ್ಲಿ ನಡೆಯಲಿರುವ ಸಂಸತ್ ಭವನದ ಉದ್ಘಾಟನೆಯನ್ನು 20 ವಿರೋಧ ಪಕ್ಷಗಳು ಬಹಿಷ್ಕರಿಸಲು ನಿರ್ಧರಿಸಿದ್ದರೂ, ಮಾಜಿ ಪ್ರಧಾನಿ ಮತ್ತು ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ ಅವರು ಕಾರ್ಯಕ್ರಮಕ್ಕೆ ಹಾಜರಾಗಲು ನಿರ್ಧರಿಸಿದ್ದಾರೆ.

Published: 26th May 2023 08:41 AM  |   Last Updated: 26th May 2023 08:41 AM   |  A+A-


file photo

ಸಂಗ್ರಹ ಚಿತ್ರ

Posted By : Manjula VN
Source : The New Indian Express

ಬೆಂಗಳೂರು/ಲಖನೌ: ಮೇ 28 ರಂದು ನವದೆಹಲಿಯಲ್ಲಿ ನಡೆಯಲಿರುವ ಸಂಸತ್ ಭವನದ ಉದ್ಘಾಟನೆಯನ್ನು 20 ವಿರೋಧ ಪಕ್ಷಗಳು ಬಹಿಷ್ಕರಿಸಲು ನಿರ್ಧರಿಸಿದ್ದರೂ, ಮಾಜಿ ಪ್ರಧಾನಿ ಮತ್ತು ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ ಅವರು ಕಾರ್ಯಕ್ರಮಕ್ಕೆ ಹಾಜರಾಗಲು ನಿರ್ಧರಿಸಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಳಪೆ ಸಾಧನೆಗೆ ಕಾರಣಗಳ ಪರಿಶೀಲಿಸಲು ನಿನ್ನೆ ಜೆಡಿಎಸ್ ಸಭೆ  ನಡೆಸಿದ್ದು, ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ದೇವೇಗೌಡ ಅವರು, ತಾವು ಸಂಸತ್ ಭವನ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುತ್ತೇನೆಂದು ಹೇಳಿದರು.

ನಾನು ಹೋಗಬಾರದೆಂದು ಎಂದರೆ, ಅದೇನು ಬಿಜೆಪಿ ಅಥವಾ ಆರ್‌ಎಸ್‌ಎಸ್ ಕಚೇರಿಯೇ? ಹೊಸ ಸಂಸತ್ತಿನ ಕಟ್ಟಡ ದೇಶದ ಆಸ್ತಿಯಾಗಿದೆ ಎಂದು ಬಣ್ಣಿಸಿದರು.

ಸಂಸತ್ ಭವನ ದೇಶದ ಆಸ್ತಿ. ಯಾರೊಬ್ಬರ ವೈಯಕ್ತಿಕ ವಿಷಯಕ್ಕೆ ಸಂಬಂಧಿಸಿದ್ದು ಅದಲ್ಲ, ತೆರಿಗೆದಾರರ ಹಣದಿಂದ ಭವ್ಯವಾದ ಕಟ್ಟಡ ನಿರ್ಮಿಸಲಾಗಿದ್ದು, ಇದು ದೇಶಕ್ಕೆ ಸೇರಿದ್ದು, ಇದು ಬಿಜೆಪಿ ಅಥವಾ ಆರ್‌ಎಸ್‌ಎಸ್ ಕಚೇರಿಯಲ್ಲ. "ನಾನು ಮಾಜಿ ಪ್ರಧಾನಿಯಾಗಿ ಮತ್ತು ಭಾರತದ ಪ್ರಜೆಯಾಗಿ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುತ್ತೇನೆಂದು ಹೇಳಿದರು.

ರಾಜಕೀಯವಾಗಿ ಬಿಜೆಪಿಯನ್ನು ವಿರೋಧಿಸಲು ಹಲವು ಕಾರಣಗಳಿವೆ, ಆದರೆ ಸಂಸತ್ ಭವನದ ಉದ್ಘಾಟನೆಗೆ ರಾಜಕೀಯ ತರಲು ಇಷ್ಟಪಡುವುದಿಲ್ಲ. ಸಂಸತ್ತಿನ ಉಭಯ ಸದನಗಳ ಸದಸ್ಯನಾಗಿದ್ದು, ಸಂವಿಧಾನದ ಚೌಕಟ್ಟಿನಲ್ಲಿ ಯಾವಾಗಲೂ ಕೆಲಸ ಮಾಡುತ್ತಿದ್ದೇನೆ. ಅದರಲ್ಲಿ ರಾಜಕೀಯವನ್ನು ತರಲು ಇಷ್ಟಪಡುವುದಿಲ್ಲ. ನಾನು ಸಂವಿಧಾನಕ್ಕೆ ಬದ್ಧನಾಗಿದ್ದೇನೆ ಮತ್ತು ಅದಕ್ಕಾಗಿಯೇ ನಾನು ಸಮಾರಂಭದಲ್ಲಿ ಪಾಲ್ಗೊಳ್ಳುತ್ತಿದ್ದೇನೆಂದು ತಿಳಿಸಿದರು.

ಪಕ್ಷಕ್ಕಾಗಿ ನನ್ನ ಜೀವ ಸವೆಸಿದ್ದೇನೆ. ನಾನು ಬದುಕಿರುವಷ್ಟು ಕಾಲವೂ ಪಕ್ಷಕ್ಕಾಗಿಯೇ ಬದುಕುತ್ತೇನೆ. ನನ್ನ ಕೊನೆ ಉಸಿರು ಇರುವ ತನಕ ನಾನು ಪಕ್ಷಕ್ಕೇ ಮೀಸಲು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ಸೋತಿದೆ ಎಂಬುದಕ್ಕೆ ನನಗೆ ಬಹಳ ನೋವಿದೆ. ಅದೇ ನೋವಿನಿಂದ ಕಾಲ ದೂಡಲು ಸಾಧ್ಯವೇ? ಪುಟಿದೆದ್ದು ಪಕ್ಷ ಕಟ್ಟಬೇಕು, ಅಧಿಕಾರಕ್ಕೆ ಬರಲು ಶ್ರಮಿಸಬೇಕು ಎಂದರು.

ಸೋತಿದ್ದಕ್ಕೆ ಪ್ರಾಮಾಣಿಕವಾಗಿ ಕಾರಣಗಳನ್ನು ಹುಡುಕೋಣ. ಅವುಗಳಿಗೆ ಪರಿಹಾರಗಳನ್ನು ಕಂಡು ಹಿಡಿಯೋಣ. 1989ರಲ್ಲಿ ನಮ್ಮ ಪಕ್ಷ ಕೇವಲ ಎರಡು ಕ್ಷೇತ್ರಗಳಲ್ಲಿ ಮಾತ್ರ ಗೆದ್ದಿತ್ತು. ಅದಾದ ಮೇಲೆ ಐದು ವರ್ಷಗಳ ನಂತರ ನಮ್ಮ ಪಕ್ಷ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬಂತು. ನಾನೇ ಮುಖ್ಯಮಂತ್ರಿ ಆದೆ. ಆಮೇಲೆ ಪ್ರಧಾನಿಯೂ ಆದೆ. ಜನರ ಆಶೀರ್ವಾದದಿಂದ ಅದು ಸಾಧ್ಯವಾಯಿತು ಎಂದು ಹೇಳಿದರು.

ಸೋತಾಗ ನಿರಾಶೆ, ನೋವು ಸಹಜ. ನಾನು ಈ ಎಲ್ಲಾ ಹಂತಗಳನ್ನು ದಾಟಿಕೊಂಡು ಮುಂದೆ ಬಂದಿದ್ದೇನೆ. ಪಕ್ಷವನ್ನು ಕಟ್ಟಿ ಬೆಳೆಸಿದ್ದೇನೆ. ಈ ಪಕ್ಷವನ್ನು ಉಳಿಸುವ ಕೆಲಸ ನಾನು ಮಾಡಿಯೇ ಮಾಡುತ್ತೇನೆ ಎಂದು ತಿಳಿಸಿದರು.

ಸಂಸತ್ ಭವನ ಉದ್ಘಾಟನೆಗೆ ಜೆಡಿಎಸ್ ಜೊತೆಗೆ ಶಿರೋಮಣಿ ಅಕಾಲಿದಳ, ಜಗನ್ ಮೋಹನ್ ರೆಡ್ಡಿಯ ಯುವಜನ ಶ್ರಮಿಕ ರೈತ ಕಾಂಗ್ರೆಸ್ ಪಕ್ಷ, ತೆಲುಗು ದೇಶಂ ಪಕ್ಷ, ಎಐಎಡಿಎಂಕೆ ಮತ್ತು ನವೀನ್ ಪಟ್ನಾಯಕ್ ನೇತೃತ್ವದ ಬಿಜು ಜನತಾ ದಳ ಸೇರಿದಂತೆ ಇತರ ಕೆಲವು ಬಿಜೆಪಿಯೇತರ ಪಕ್ಷಗಳು ಕಾರ್ಯಕ್ರಮದಲ್ಲಿ ಭಾಗಿಯಾಗಲಿವೆ ಎಂದು ತಿಳಿದುಬಂದಿದೆ.

ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಂದ ಸಂಸತ್ ಭವನ ಉದ್ಘಾಟನೆಗೆ ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮತ್ತು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮಾಯಾವತಿ ಅವರು ಬೆಂಬಲ ವ್ಯಕ್ತಪಡಿಸಿದ್ದಾರೆ. ವಿಪಕ್ಷಗಳು ಕಾರ್ಯಕ್ರಮ ಬಹಿಷ್ಕರಿಸುವುದು ಅನ್ಯಾಯವಾಗಿದೆ ಎಂದು ಮಾಯಾವತಿಯವರು ಹೇಳಿದ್ದಾರೆ.

ಕೇಂದ್ರ ಸರ್ಕಾರ ಸಂಸತ್ ಭವನವನ್ನು ನಿರ್ಮಿಸಿದ್ದು, ಅದನ್ನು ಅನಾವರಣಗೊಳಿಸುವ ಹಕ್ಕು ಕೇಂದ್ರಕ್ಕೆ ಇದೆ ಎಂದು ತಿಳಿಸಿದ್ದಾರೆ.

ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷದ ಸರ್ಕಾರವಾಗಲಿ ಅಥವಾ ಈಗಿರುವ ಬಿಜೆಪಿಯಾಗಲಿ, ರಾಜಕೀಯಕ್ಕಿಂತ ಮೇಲಿರುವ ದೇಶ ಮತ್ತು ಸಾರ್ವಜನಿಕ ಹಿತಾಸಕ್ತಿಗಳಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಬಿಎಸ್‌ಪಿ ಯಾವಾಗಲೂ ಕೇಂದ್ರದ ಬೆಂಬಲಕ್ಕಿರುತ್ತದೆ ಎಂದಿದ್ದಾರೆ.

ಮೋದಿ ಅವರು ಅಧ್ಯಕ್ಷ ದ್ರೌಪದಿ ಮುರ್ಮು ಅವರನ್ನು ಬದಿಗಿಟ್ಟಿದ್ದಾರೆ ಮತ್ತು ಇದು ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೇಲಿನ ದಾಳಿ ಎಂದು ವಿರೋಧ ಪಕ್ಷಗಳು ಆರೋಪಿಸಿವೆ.


Stay up to date on all the latest ರಾಜ್ಯ news
Poll
New parliament building

ಹೊಸ ಸಂಸತ್ ಕಟ್ಟಡದ ಉದ್ಘಾಟನೆಯನ್ನು ಬಹಿಷ್ಕರಿಸುವ ಹಲವಾರು ವಿರೋಧ ಪಕ್ಷಗಳ ನಿರ್ಧಾರವು ಸಮರ್ಥನೀಯವೇ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp