ಕಾಂಗ್ರೆಸ್‌ಗೆ ತಲೆನೋವಾದ ಡೆಪ್ಯುಟಿ ಸ್ಪೀಕರ್ ಆಯ್ಕೆ; ಉಪಸಭಾಪತಿ ಸ್ಥಾನವನ್ನು ಒಪ್ಪಿಕೊಳ್ಳಲ್ಲ: ಸಿ ಪುಟ್ಟರಂಗಶೆಟ್ಟಿ

ಕರ್ನಾಟಕ ವಿಧಾನಸಭೆಯ ಉಪಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್‌ನ ಹಿರಿಯ ನಾಯಕ ಸಿ ಪುಟ್ಟರಂಗಶೆಟ್ಟಿ ಅವರ ಹೆಸರನ್ನು ಪಕ್ಷದಿಂದ ಅಂತಿಮಗೊಳಿಸಲಾಗಿದೆ. ಆದರೆ, ಆ ಸ್ಥಾನವನ್ನು ಸ್ವೀಕರಿಸಲು ಅವರು ನಿರಾಕರಿಸಿದ್ದಾರೆ.
ಸಿ ಪುಟ್ಟರಂಗಶೆಟ್ಟಿ
ಸಿ ಪುಟ್ಟರಂಗಶೆಟ್ಟಿ

ಚಾಮರಾಜನಗರ: ಕರ್ನಾಟಕ ವಿಧಾನಸಭೆಯ ಉಪಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್‌ನ ಹಿರಿಯ ನಾಯಕ ಸಿ ಪುಟ್ಟರಂಗಶೆಟ್ಟಿ ಅವರ ಹೆಸರನ್ನು ಪಕ್ಷದಿಂದ ಅಂತಿಮಗೊಳಿಸಲಾಗಿದೆ. ಆದರೆ, ಆ ಸ್ಥಾನವನ್ನು ಸ್ವೀಕರಿಸಲು ಅವರು ನಿರಾಕರಿಸಿದ್ದಾರೆ.

ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿರುವ ಶಾಸಕರು, ತಮ್ಮ ಬೆಂಬಲಿಗರು ಮತ್ತು ಮತದಾರರು ವ್ಯಕ್ತಪಡಿಸಿದ ಅಭಿಪ್ರಾಯಗಳನ್ನು ಅನುಸರಿಸಿ ಡೆಪ್ಯುಟಿ ಸ್ಪೀಕರ್ ಸ್ಥಾನವನ್ನು ಸ್ವೀಕರಿಸದಿರಲು ನಿರ್ಧರಿಸಿರುವುದಾಗಿ ಭಾನುವಾರ ಹೇಳಿದ್ದಾರೆ.

'ನಾನು ಡೆಪ್ಯುಟಿ ಸ್ಪೀಕರ್ ಹುದ್ದೆಯನ್ನು ಸ್ವೀಕರಿಸುವುದಿಲ್ಲ. ನನ್ನ ಬೆಂಬಲಿಗರು ಮತ್ತು ಮತದಾರರು ಅದನ್ನು ಸ್ವೀಕರಿಸಬೇಡಿ ಎಂದು ಕೇಳಿಕೊಂಡಿದ್ದಾರೆ. ನಾನು ಅವರ ಮಾತನ್ನು ತೆಗೆದುಹಾಕಲು ಸಾಧ್ಯವಿಲ್ಲ. ಡೆಪ್ಯುಟಿ ಸ್ಪೀಕರ್ ಹುದ್ದೆಯನ್ನು ಒಪ್ಪಿಕೊಳ್ಳುವುದು ಅವರಿಗೆ ಇಷ್ಟವಿಲ್ಲ, ಹಾಗಾಗಿ ನಾನು ಒಪ್ಪಿಕೊಳ್ಳುವುದಿಲ್ಲ' ಎಂದು ಪುಟ್ಟರಂಗಶೆಟ್ಟಿ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ತಾವು ಉಪ್ಪಾರ ಸಮುದಾಯವನ್ನು ಪ್ರತಿನಿಧಿಸುತ್ತಿದ್ದು, ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೆ. ಒಂದು ವೇಳೆ ಉಪಸಭಾಪತಿಯ ಜವಾಬ್ದಾರಿಯನ್ನು ಸ್ವೀಕರಿಸಿದರೆ, ಜನರ ಮಧ್ಯೆ ಇರಲು ಸಾಧ್ಯವಿಲ್ಲ, ಕೆಲಸ ಮಾಡಲು ಕಷ್ಟವಾಗುತ್ತದೆ ಎಂದರು.

'ಇದನ್ನು ನಾನು ಸಿದ್ದರಾಮಯ್ಯ (ಮುಖ್ಯಮಂತ್ರಿ) ಅವರಿಗೂ ತಿಳಿಸಿದ್ದೇನೆ. ಅವರು ಆ ಹುದ್ದೆಯನ್ನು ಒಪ್ಪಿಕೊಳ್ಳಬೇಕು ಎಂದು ಒತ್ತಾಯಿಸಿದರು. ಆದರೆ, ನಾನು ನನ್ನ ಜನರಲ್ಲಿ ಕೇಳಿ ನಿರ್ಧರಿಸುತ್ತೇನೆ ಎಂದು ಹೇಳಿದ್ದೆ. ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಲು ನನಗೆ ಕಷ್ಟವಾಗುತ್ತದೆ ಮತ್ತು ನಾನು ಈ ಭಾಗದ ಜನರೊಂದಿಗೆ ಸಂಪರ್ಕವನ್ನು ಕಳೆದುಕೊಳ್ಳಬಹುದು. ಏಕೆಂದರೆ, ನಾನು ದೀರ್ಘಕಾಲ ಇಲ್ಲಿಂದ ದೂರ ಉಳಿಯಬೇಕಾಗಬಹುದು' ಎಂದು ಅವರು ಹೇಳಿದರು.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಪುಟ್ಟರಂಗಶೆಟ್ಟಿ, ತಮಗೆ ಸಚಿವ ಸ್ಥಾನ ಸಿಗುವ ಭರವಸೆ ಇದ್ದು, ದೆಹಲಿಗೆ ಹೋಗಿದ್ದೆ. ಆದರೆ, ಬೆಂಗಳೂರು ತಲುಪಿದಾಗ ನನಗೆ ಸಚಿವ ಸ್ಥಾನ ಸಿಕ್ಕಿಲ್ಲ ಎಂಬುದು ಗೊತ್ತಾಯಿತು. ಕಾರಣ ಏನು ಎಂಬುದು ನನಗೆ ಗೊತ್ತಿಲ್ಲ, ಸಿದ್ದರಾಮಯ್ಯ ವಿವರಿಸಬಲ್ಲರು ಎಂದು ಅಸಮಾಧಾನ ವ್ಯಕ್ತಪಡಿಸಿದರು. ತಮಗೆ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದ ಅವರ ಬೆಂಬಲಿಗರು ಶಾಸಕರಾಗಿ ಕಾರ್ಯನಿರ್ವಹಿಸುವಂತೆ ಮನವಿ ಮಾಡಿದ್ದಾಗಿ ತಿಳಿಸಿದರು.

ಪುಟ್ಟರಂಗಶೆಟ್ಟಿ ಅವರ ಉಪಸಭಾಪತಿ ಸ್ಥಾನಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಒಪ್ಪಿಗೆ ನೀಡಿದ್ದಾರೆ ಎಂದು ಪಕ್ಷ ಇತ್ತೀಚೆಗಷ್ಟೇ ಹೇಳಿತ್ತು. ಹಿಂದಿನ ಸರ್ಕಾರದಲ್ಲಿ ಸಚಿವರಾಗಿದ್ದ ಬಿಜೆಪಿಯ ವಿ. ಸೋಮಣ್ಣ ಅವರನ್ನು ಸೋಲಿಸಿ ಚಾಮರಾಜನಗರದಿಂದ ಪುಟ್ಟರಂಗಶೆಟ್ಟಿ ಅವರು ಗೆದ್ದಿದ್ದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ 24 ಹೊಸ ಸಚಿವರನ್ನು ಸೇರ್ಪಡೆಗೊಳಿಸುವ ಮೂಲಕ ತಮ್ಮ ಸಂಪುಟವನ್ನು ವಿಸ್ತರಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com