ಅಂಗಾಂಗ ದಾನ ಮಾಡುವವರಿಗೆ ಅಂತ್ಯಕ್ರಿಯೆ ವೇಳೆ ಸರ್ಕಾರಿ ಗೌರವ: ಹೊಸ ನೀತಿ ಜಾರಿಗೆ ಸರ್ಕಾರ ಮುಂದು!

ಪ್ರತಿಫಲಾಪೇಕ್ಷೆ ಇಲ್ಲದೆ ಅಂಗಾಂಗ ದಾನ ಮಾಡುವ ವ್ಯಕ್ತಿಗಳ ಅಂತ್ಯಕ್ರಿಯೆ ವೇಳೆ ಸರ್ಕಾರಿ ಗೌರವ ನೀಡುವ ಕುರಿತಂತೆ ನೀತಿ ರೂಪಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ಪ್ರತಿಫಲಾಪೇಕ್ಷೆ ಇಲ್ಲದೆ ಅಂಗಾಂಗ ದಾನ ಮಾಡುವ ವ್ಯಕ್ತಿಗಳ ಅಂತ್ಯಕ್ರಿಯೆ ವೇಳೆ ಸರ್ಕಾರಿ ಗೌರವ ನೀಡುವ ಕುರಿತಂತೆ ನೀತಿ ರೂಪಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ.

ಸಾಮಾಜಿಕ ಜಾಲತಾಣ ಎಕ್ಸ್ (ಟ್ವಿಟರ್) ಖಾತೆಯಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಮಾನವೀಯ ನೆಲೆಯಲ್ಲಿ ಅಂಗಾಂಗ ದಾನ ಮಾಡಿ ಇನ್ನೊಬ್ಬರ ಜೀವ ಉಳಿಸಲು ನೆರವಾಗುವ ವ್ಯಕ್ತಿಗಳು ಮತ್ತು ಕುಟುಂಬದವರನ್ನು ಗುರುತಿಸಿ ಗೌರವಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಹೇಳಿದ್ದಾರೆ.

ಅಂಗಾಂಗ ದಾನ ಮಾಡುವ ವ್ಯಕ್ತಿ ಅಥವಾ ಕುಟುಂಬಗಳಿಗೆ ಪ್ರಮಾಣಪತ್ರಗಳನ್ನು ನೀಡಿ ಗೌರವಿಸುವ ಹಾಗು ತಮಿಳುನಾಡು ಮಾದರಿಯಲ್ಲಿ ಅಂಗಾಂಗ ದಾನಿಗಳ ಅಂತ್ಯಕ್ರಿಯೆಯನ್ನು ಸರ್ಕಾರಿ ಗೌರವಗಳೊಂದಿಗೆ ನಡೆಸುವ ಬಗ್ಗೆಯೂ ಸರ್ಕಾರ ಪರಿಶೀಲಿಸುತ್ತಿದೆ ಎಂದು ತಿಳಿಸಿದ್ದಾರೆ.

ಈ ಮೂಲಕ ಸರ್ಕಾರ ಅಂಗಾಂಗ ದಾನದ ಮಹತ್ವವನ್ನು ಸಾರಲು ಮತ್ತು ಮತ್ತಷ್ಟು ಜನರಿಗೆ ಅಂಗಾಂಗ ದಾನ ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಪ್ರೇರೇಪಿಸಲು ಶೀಘ್ರದಲ್ಲೇ ನೀತಿಯೊಂದನ್ನು ರೂಪಿಸಲಿದೆ ಎಂದಿದ್ದಾರೆ.

ಅಂಗಾಂಗಗಳ ವೈಫಲ್ಯದಿಂದ ಪ್ರತಿನಿತ್ಯ ಸಾವನ್ನಪ್ಪುವವರ ಸಂಖ್ಯೆ ಹೆಚ್ಚಾಗುತ್ತಿದೆ. ಸಾವು ಅನಿವಾರ್ಯವಾದಾಗ ಸಕ್ರಿಯ ಹಾಗು ಉತ್ತವ ಸ್ಥಿತಿಯಲ್ಲಿರುವ ಅಂಗಾಂಗ ದಾನದಿಂದ ಬಹಳಷ್ಟು ಜೀವಗಳ ರಕ್ಷಣೆ ಸಾಧ್ಯವಾಗುತ್ತದೆ. ಪ್ರಸ್ತುತ ಸಂದರ್ಭದಲ್ಲಿ ಅಂಗಾಂಗಗಳ ಬೇಡಿಕೆ ಮತ್ತು ಪೂರೈಕೆ ನಡುವೆ ಅಜಗಜಾಂತರ ವ್ಯತ್ಯಾಸವಿದ್ದು, ಅದನ್ನು ಸರಿದೂಗಿಸಲು ಸರ್ಕಾರ ಸಾಕಷ್ಟು ಪ್ರಯತ್ನಗಳನ್ನು ನಡೆಸುತ್ತಿದೆ. ಈ ನಿಟ್ಟಿನಲ್ಲಿ ಅಂಗಾಂಗಗಳ ದಾನಿಗಳ ಅಂತ್ಯಕ್ರಿಯೆ ವೇಳೆ ಸರ್ಕಾರಿ ಗೌರವ ನೀಡುವ ನಿರ್ಣಯ ಮಹತ್ವದ ಉತ್ತೇಜನ ನೀಡಲಿದೆ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com