ಗುಜರಾತ್ ನಲ್ಲಿ ಅಪೌಷ್ಟಿಕತೆ ಏಕೆ ಹೆಚ್ಚುತ್ತಿದೆ?: ಪ್ರಧಾನಿ ಮೋದಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಪ್ರಧಾನಿ ತವರು ರಾಜ್ಯ ಗುಜರಾತ್ ಮತ್ತು ದೇಶದಲ್ಲಿ ಏಕೆ ಅಪೌಷ್ಟಿಕತೆ ಹೆಚ್ಚುತ್ತಿದೆ ಎಂಬುದಕ್ಕೆ ಅವರೇ ಉತ್ತರಿಸಬೇಕು ಎಂದು ಬುಧವಾರ ಹೇಳಿದ್ದಾರೆ.
ಗುಜರಾತ್ ಮಾದರಿ ಎಂದು ಹೊಗಳುವವರು ಪ್ರಧಾನಿ ತವರು ರಾಜ್ಯದಲ್ಲಿ ಅಪೌಷ್ಟಿಕತೆ ಸೂಚ್ಯಂಕ ಏಕೆ ಹೆಚ್ಚುತ್ತಿದೆ ಎಂಬುದನ್ನು ತಿಳಿಸಬೇಕು ಮತ್ತು "ಇದು ಇಡೀ ದೇಶಕ್ಕೆ ಮಾದರಿಯಾಗಬಹುದೇ?" ಎಂದು ಸಿಎಂ ಪ್ರಶ್ನಿಸಿದರು.
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಸಾರ್ವಜನಿಕ ಆರೋಗ್ಯ ಕಾರ್ಯಕ್ರಮ ‘ರಕ್ತ ಹೀನತೆ ಮುಕ್ತ ಪೌಷ್ಠಿಕ ಕರ್ನಾಟಕ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಿದ್ದರಾಮಯ್ಯ, ಬಡತನ ಮತ್ತು ಅನಕ್ಷರತೆ ನಿರ್ಮೂಲನೆಯಾಗದೆ ಎಲ್ಲರಿಗೂ ಉತ್ತಮ ಆರೋಗ್ಯ ಸಿಗುವುದಿಲ್ಲ ಎಂದರು.
ಪ್ರತಿಯೊಬ್ಬರ ಮನೆ ಬಾಗಿಲಿಗೆ ಆರೋಗ್ಯ ಸವಲತ್ತು ತಲುಪಿಸುವುದು ನಮ್ಮ ಸರ್ಕಾರದ ಉದ್ದೇಶವಾಗಿದೆ ಮತ್ತು ಅದಕ್ಕೆ ಬೇಕಾದ ಹಣ ನೀಡಲು ಸರ್ಕಾರ ಸಿದ್ಧವಿದೆ ಎಂದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ಸರ್ಕಾರದ ಗುರಿಯನ್ನು ಈಡೇರಿಸಲು ಮತ್ತು "ನಮ್ಮ ರಾಜ್ಯದ ಮಕ್ಕಳು ಸೇರಿದಂತೆ ಎಲ್ಲರೂ ಆರೋಗ್ಯವಾಗಿರಲು" ಒಟ್ಟಾಗಿ ಕೆಲಸ ಮಾಡುವಂತೆ ಮುಖ್ಯಮಂತ್ರಿಗಳು ಕರೆ ನೀಡಿದರು.
ರಕ್ತಹೀನತೆಯ ಬಗ್ಗೆ ಜನರಿಗೆ ಸ್ಪಷ್ಟ ಮಾಹಿತಿ ಇಲ್ಲ ಮತ್ತು ಅದರ ಬಗ್ಗೆ ಕಾಳಜಿ ಇಲ್ಲ. ಹಿಮೋಗ್ಲೋಬಿನ್ ಕಡಿಮೆಯಾದಾಗ ರಕ್ತಹೀನತೆ ಶುರುವಾಗುತ್ತದೆ. ಇದಕ್ಕೆ ಪ್ರಮುಖ ಕಾರಣ ಪೌಷ್ಟಿಕಾಂಶದ ಕೊರತೆ. ಕಬ್ಬಿಣದ ಕೊರತೆಯಿಂದ ಹಿಮೋಗ್ಲೋಬಿನ್ ಕಡಿಮೆಯಾಗುತ್ತದೆ. ಇದರಿಂದ ನಮ್ಮ ದೈಹಿಕ ಮತ್ತು ಮಾನಸಿಕ ಬೆಳವಣಿಗೆ ಕುಂಟಿತವಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ