ಹೃದಯ ಶಸ್ತ್ರಚಿಕಿತ್ಸೆ ಬಳಿಕ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಗ್ಯದಲ್ಲಿ ಚೇತರಿಕೆ

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆಯಲ್ಲಿ ಇತ್ತೀಚೆಗೆ ಪರಿಧಮನಿಯ ಬೈಪಾಸ್ ಗ್ರಾಫ್ಟಿಂಗ್ (ಸಿಎಬಿಜಿ) ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಇದೀಗ ಅವರು ಚೇತರಿಸಿಕೊಳ್ಳುತ್ತಿದ್ದಾರೆ.
ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಡಿಕೆ ಶಿವಕುಮಾರ್
ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಡಿಕೆ ಶಿವಕುಮಾರ್

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆಯಲ್ಲಿ ಇತ್ತೀಚೆಗೆ ಪರಿಧಮನಿಯ ಬೈಪಾಸ್ ಗ್ರಾಫ್ಟಿಂಗ್ (ಸಿಎಬಿಜಿ) ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಇದೀಗ ಅವರು ಚೇತರಿಸಿಕೊಳ್ಳುತ್ತಿದ್ದಾರೆ.

ಆಸ್ಪತ್ರೆಯ ಅಧಿಕೃತ ಹೇಳಿಕೆ ಪ್ರಕಾರ, ಪ್ರಾಥಮಿಕ ಆರೋಗ್ಯ ತನಿಖೆಯಲ್ಲಿ ಬೊಮ್ಮಾಯಿ ಅವರ ಹೃದಯದಲ್ಲಿ ಅನೇಕ ತೊಂದರೆ ಇರುವುದು ಕಂಡುಬಂತು. ನಂತರ ಅವರನ್ನು ಅಕ್ಟೋಬರ್ 15 ರಂದು ಹೃದ್ರೋಗ ತಜ್ಞ ಡಾ. ವಿವೇಕ್ ಜವಳಿ ನೇತೃತ್ವದಲ್ಲಿ ಸಂಪೂರ್ಣ ತಪಾಸಣೆಗಾಗಿ ಫೋರ್ಟಿಸ್ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಆಂಜಿಯೋಗ್ರಾಮ್ ಸೇರಿದಂತೆ ವಿವಿಧ ಪರೀಕ್ಷೆಗಳನ್ನು ನಡೆಸಿದಾಗ ಪರಿಧಮನಿಯಲ್ಲಿ ಸಮಸ್ಯೆ ಇರುವುದು ಪತ್ತೆಯಾಯಿತು. ಇದು ಮುಂದಿನ ದಿನಗಳಲ್ಲಿ ಸಂಭವನೀಯ ಹೃದಯಾಘಾತಕ್ಕೆ ಕಾರಣವಾಗುತ್ತಿತ್ತು. ಇದನ್ನು ಬೈಪಾಸ್ ಮಾಡಲು, ಡಾ. ಜವಳಿ ನೇತೃತ್ವದ ತಂಡವು ಸಿಎಬಿಜಿ ಶಸ್ತ್ರಚಿಕಿತ್ಸೆಯನ್ನು ನಡೆಸಿತು.

ಸದ್ಯ ಬೊಮ್ಮಾಯಿ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಆಸ್ಪತ್ರೆಯ ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ. ಅವರು ಮುಂದಿನ ಒಂದೆರಡು ವಾರಗಳಲ್ಲಿ ಸಂಪೂರ್ಣ ಗುಣಮುಖರಾಗುವ ಸಾಧ್ಯತೆ ಇದ್ದು, ದೈನಂದಿನ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬಹುದು ಎನ್ನಲಾಗಿದೆ.

ಆಸ್ಪತ್ರೆಗೆ ಡಿಕೆ ಶಿವಕುಮಾರ್ ಭೇಟಿ

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಪ್ರತ್ಯೇಕವಾಗಿ ಆಸ್ಪತ್ರೆಗೆ ತೆರಳಿ ಬೊಮ್ಮಾಯಿ ಅವರ ಆರೋಗ್ಯ ವಿಚಾರಿಸಿದರು. ಇದಕ್ಕೂ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಆಸ್ಪತ್ರೆಗೆ ತೆರಳಿ ಬೊಮ್ಮಾಯಿ ಅವರ ಯೋಗಕ್ಷೇಮ ವಿಚಾರಿಸಿದರು. 

ಮುಖ್ಯಮಂತ್ರಿಗಳೊಂದಿಗೆ ಗೃಹ ಸಚಿವ ಜಿ. ಪರಮೇಶ್ವರ ಮತ್ತು ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಇದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com