ಬೆಂಗಳೂರು: ಕೋರಮಂಗಲದ ಹುಕ್ಕಾ ಬಾರ್ ಮಡ್ಪೈಪ್ ಕೆಫೆಯಲ್ಲಿ ಅಗ್ನಿ ದುರಂತ ಸಂಭವಿಸಿದ ಬಳಿಕ ಎಚ್ಚೆತ್ತುಕೊಂಡಿರುವ ಬಿಬಿಎಂಪಿ ಅಧಿಕಾರಿಗಳು ಕಳೆದ ಮೂರು ದಿನಗಳಿಂದ ನಗರದ ಪಬ್, ಬಾರ್ ಮತ್ತು ರೆಸ್ಟೋರೆಂಟ್ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ನಿಯಮ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಮಂಗಳವಾರ 48 ಹೋಟೆಲ್, ರೆಸ್ಟೋರೆಂಟ್ ಗಳನ್ನು ಬಂದ್ ಮಾಡಿಸಿದ್ದಾರೆ.
ಪರವಾನಗಿ ನಿಯಮಗಳನ್ನು ಪಾಲಿಸದಿರುವ ಪಟ್ಟಿಯಲ್ಲಿ ಮಹದೇವಪುರ ಹಾಗೂ ಪೂರ್ವ ವಲಯ ಅಗ್ರಸ್ಥಾನದಲ್ಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಬಿಬಿಎಂಪಿ ಆರೋಗ್ಯ ಇಲಾಖೆಯ ಮುಖ್ಯ ಆರೋಗ್ಯಾಧಿಕಾರಿ ಡಾ.ಬಾಲಸುಂದರ್ ಎ.ಎಸ್ ಮಾತನಾಡಿ, ಪಾಲಿಕೆಯ ಎಂಟು ವಲಯಗಳಲ್ಲಿ ಶುಕ್ರವಾರದಿಂದ ಪರಿಶೀಲನೆ ನಡೆಸಲಾತ್ತಿದೆ. ರೆಸ್ಟೋರೆಂಟ್ಗಳು, ಹೋಟೆಲ್ಗಳು ಮತ್ತು ಕೆಫೆಗಳಲ್ಲಿ, ಅಧಿಕಾರಿಗಳು ಪರವಾನಗಿ ನಿಯಮಗಳನ್ನು ಅನುಸರಿಸುತ್ತಿದ್ದಾರೆಯೇ ಎಂದು ಪರಿಶೀಲಿಸುತ್ತಿದ್ದಾರೆ, ಇತರ ಲೋಪಗಳ ಬಗ್ಗೆ ನಿಗಾ ಇಡುತ್ತಿದ್ದು ಅದರಂತೆ ಕ್ರಮ ಕೈಗೊಳ್ಳುತ್ತಿದ್ದಾರೆಂದು ಹೇಳಿದರು.
"ಬಿಬಿಎಂಪಿ ಇದುವರೆಗೆ 600 ಕ್ಕೂ ಹೆಚ್ಚು ಹೋಟೆಲ್, ರೆಸ್ಟೋರೆಂಟ್ ಗಳಲ್ಲಿ ಪರಿಶೀಲನೆ ನಡೆಸಿದೆ. ಪರವಾನಗಿ ನಿಯಮಗಳನ್ನು ಅನುಸರಿಸದಿರುವುದು ಮತ್ತು ಇತರ ಲೋಪದೋಷಗಳು ಕಂಡು ಬಂದ ಹಿನ್ನೆಲೆಯಲ್ಲಿ ಸೋಮವಾರದವರೆಗೆ 48 ಹೋಟೆಲ್, ರೆಸ್ಟೋರೆಂಟ್ ಗಳನ್ನು ಬಂದ್ ಮಾಡಲಾಗಿದೆ.
ಇದನ್ನು ಹೊರತುಪಡಿಸಿ, 353 ಮಾಲೀಕರಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ. ನೋಟಿಸ್ ನಲ್ಲಿ ಆದಷ್ಟು ಬೇಗ ಕಾನೂನು ದಾಖಲೆಗಳನ್ನು ಸಲ್ಲಿಸುವಂತೆ ಸೂಚಿಸಲಾಗಿದ್ದು, ದಾಖಲೆ ಸಲ್ಲಿಸದಿದ್ದರೆ, ಹೋಟೆಲ್ ಗಳನ್ನು ಬಂದ್ ಮಾಡುವುದಾಗಿ ಎಚ್ಚರಿಕೆಯನ್ನೂ ನೀಡಲಾಗಿದೆ ಎಂದು ಬಿಬಿಎಂಪಿ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪೂರ್ವ ವಲಯದಲ್ಲಿ ಅತಿ ಹೆಚ್ಚು ಉಲ್ಲಂಘನೆಗಳು ಕಂಡು ಬಂದಿದ್ದು 107 ಮಾಲೀಕರಿಗೆ ನೋಟಿಸ್ಗಳನ್ನು ನೀಡಲಾಗಿದೆ. 13 ಹೋಟೆಲ್ ಹಾಗೂ ರೆಸ್ಟೋರೆಂಟ್ ಗಳನ್ನು ಬಂದ್ ಮಾಡಲಾಗಿದೆ. ಇನ್ನು ದಕ್ಷಿಣ ವಲಯದಲ್ಲಿ 59 ಮಾಲೀಕರಿಗೆ ನೋಟಿಸ್ ಜಾರಿ ಮಾಡಲಾಗಿದ್ದು, 8 ಅಂಗಡಿಗಳನ್ನು ಮುಚ್ಚಿಸಲಾಗಿದೆ ಎಂದು ಹೇಳಿದ್ದಾರೆ.
Advertisement