ನಮ್ಮ ಶಾಸಕರಿಗೆ 50 ಕೋಟಿ ರೂ, ಸಚಿವ ಸ್ಥಾನದ ಆಮಿಷ: ಕಾಂಗ್ರೆಸ್ ಶಾಸಕ ಗಣಿಗ ರವಿ
ದಾವಣಗೆರೆ: ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನಿಸಲಾಗುತ್ತಿದೆ ಎಂಬ ಆರೋಪಗಳ ನಡುವೆ ಸ್ವತಃ ಕಾಂಗ್ರೆಸ್ ಶಾಸಕ ಗಣಿಗ ರವಿ ಇದಕ್ಕೆ ಪೂರಕವಾಗುವಂತಹ ಮಾಹಿತಿ ಬಹಿರಂಗಪಡಿಸಿದ್ದಾರೆ.
ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ನಮ್ಮ ಶಾಸಕರಿಗೆ 50 ಕೋಟಿ ರೂಪಾಯಿ ಹಾಗೂ ಸಚಿವ ಸ್ಥಾನದ ಆಮಿಷವೊಡ್ಡಲಾಗುತ್ತಿದೆ ಎಂದು ಗಣಿಗ ರವಿ ಆರೋಪಿಸಿದ್ದಾರೆ.
ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ರವಿ, ಬಿಜೆಪಿಯ ಹೆಸರು ಉಲ್ಲೇಖಿಸದೇ, ಅವರು ಅದಾಗಲೇ ಕಾಂಗ್ರೆಸ್ ನ 4 ಶಾಸಕರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ ಎಂದು ಹೇಳಿದ್ದಾರೆ. ಯಡಿಯೂರಪ್ಪ ಅವರ ಮಾಜಿ ಆಪ್ತ ಕಾರ್ಯದರ್ಶಿ ಎನ್ ಆರ್ ಸಂತೋಷ್ ಶಾಸಕರನ್ನು ಸಂಪರ್ಕಿಸಿ ಈ ಆಮಿಷವೊಡ್ಡುತ್ತಿದ್ದಾರೆ ಎಂದು ಗಣಿಗ ರವಿ ತಿಳಿಸಿದ್ದಾರೆ.
ಕಾಂಗ್ರೆಸ್-ಜೆಡಿಎಸ್ ಸರ್ಕಾರದಲ್ಲಿ ಅಸಮಾಧಾಗೊಂಡಿದ್ದ ಶಾಸಕರನ್ನು ಸಂಪರ್ಕಿಸಿ ಸರ್ಕಾರ ಅಸ್ಥಿರಗೊಳಿಸುವಲ್ಲಿಯೂ ಸಂತೋಷ್ ಪ್ರಮುಖ ಪಾತ್ರ ವಹಿಸಿದ್ದರು.
ಆಗ ಬಿಜೆಪಿ ಅತಿ ಹೆಚ್ಚು ಶಾಸಕರನ್ನು ಹೊಂದಿದ್ದ ಏಕೈಕ ಪಕ್ಷವಾಗಿತ್ತು ಆದರೆ ಈಗ 66 ಶಾಸಕರನ್ನು ಮಾತ್ರ ಹೊಂದಿದೆ.
ಕಾಂಗ್ರೆಸ್ ಪಕ್ಷ 136 ಸ್ಥಾನಗಳನ್ನು ಗಳಿಸಿದ. ಸಂತೋಷ್ ಜೆಡಿಎಸ್ ನಿಂದ ಚುನಾವಣೆಗೆ ಸ್ಪರ್ಧಿಸಿ ಸೋತಿದ್ದಾರೆ. ಆದರೂ ಇನ್ನೂ ಪಾಠ ಕಲಿತಿಲ್ಲ. ಆತ ಶಾಸಕರನ್ನು ಖರೀದಿಸಿ ಸರ್ಕಾರ ಬೀಳಿಸುವ ಮಾತನ್ನಾಡುತ್ತಿದ್ದಾರೆ. ಅಂತೆಯೇ ಅದಕ್ಕೆ ತಕ್ಕಂತೆ ಪ್ರಯತ್ನಗಳೂ ನಡೆಯುತ್ತಿವೆ ಈ ಕುರಿತ ವೀಡಿಯೋಗಳೂ ನಮ್ಮ ಬಳಿ ಇವೆ. ಈ ಕುರಿತ ಬೆಳವಣಿಗೆಗಳನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಗಮನಕ್ಕೆ ತಂದಿದ್ದೇವೆ. ಸೂಕ್ತ ಸಮಯದಲ್ಲಿ ದಾಖಲೆ ಬಿಡುಗಡೆ ಮಾಡುತ್ತೇವೆ ಎಂದು ಶಾಸಕ ರವಿ ಹೇಳಿದ್ದಾರೆ.
ನಮ್ಮ ಪಕ್ಷದ ಪ್ರಾಮಾಣಿಕ ಶಾಸಕರು ಈ ಮಾಹಿತಿಯನ್ನು ಪಕ್ಷದೊಂದಿಗೆ ಹಂಚಿಕೊಂಡಿದ್ದಾರೆ. ಸರ್ಕಾರ ಅಸ್ಥಿರಗೊಳಿಸುವುದಕ್ಕೆ ಹಿರಿಯ ಶಾಸಕರು, ಹೊಸ ಶಾಸಕರನ್ನೂ ಸಂಪರ್ಕಿಸಲಾಗಿದೆ. ಆದರೆ ಯಾವೊಬ್ಬ ಶಾಸಕರೂ ಆಮಿಷಕ್ಕೆ ಬಲಿಯಾಗಿಲ್ಲ. ಆಮಿಷವೊಡ್ಡುವ ಈ ಬೆಳವಣಿಗೆ ಪ್ರಜಾಪ್ರಭುತ್ವಕ್ಕೆ ಒಳ್ಳೆಯದಲ್ಲ. ಈ ಸಂಬಂಧ ಇರುವ ವೀಡಿಯೋ ಹಾಗೂ ದಾಖಲೆಗಳನ್ನು ಶೀಘ್ರವೇ ಬಿಡುಗಡೆ ಮಾಡುತ್ತೇವೆ ಎಂದು ಶಾಸಕರು ಹೇಳಿದ್ದಾರೆ.
50 ಕೋಟಿ ರೂಪಾಯಿ ಹಾಗೂ ಸಚಿವ ಸ್ಥಾನದ ಆಮಿಷವೊಡ್ಡಲಾಗುತ್ತಿದೆ. ಶಾಸಕರನ್ನು ದೆಹಲಿಗೆ ಕಳಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಸಭೆ ಏರ್ಪಡಿಸುವುದಾಗಿ ಹೇಳಲಾಗುತ್ತಿದೆ ಎಂದು ಶಾಸಕರು ಆರೋಪಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ