ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅನುಮತಿ ಕಡ್ಡಾಯ: ಪೊಲೀಸ್ ಆಯುಕ್ತ ಬಿ.ದಯಾನಂದ್

ಸಾರ್ವಜನಿಕ ಗಣೇಶೋತ್ಸವ ಆಚರಣೆಗೂ ಮುನ್ನ ಸಂಬಂಧಪಟ್ಟ ಇಲಾಖೆಗಳಿಂದ ಅನುಮತಿ ಪಡೆಯಬೇಕು ಎಂದು ಪೊಲೀಸ್ ಆಯುಕ್ತ ಬಿ ದಯಾನಂದ್ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ಸಾರ್ವಜನಿಕ ಗಣೇಶೋತ್ಸವ ಆಚರಣೆಗೂ ಮುನ್ನ ಸಂಬಂಧಪಟ್ಟ ಇಲಾಖೆಗಳಿಂದ ಅನುಮತಿ ಪಡೆಯಬೇಕು ಎಂದು ಪೊಲೀಸ್ ಆಯುಕ್ತ ಬಿ ದಯಾನಂದ್ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಗಣೇಶ ಚತುರ್ಥಿ ಮತ್ತು ಈದ್ ಮಿಲಾದ್ ನಿಮಿತ್ತ ಗುರುವಾರ ಪುರಭವನದಲ್ಲಿ ಶಾಂತಿ ಸೌಹಾರ್ದ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ಪೊಲೀಸ್ ಆಯುಕ್ತರು, ಈಗಾಗಲೇ ನಗರದ ಎಲ್ಲಾ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಗಣೇಶೋತ್ಸವ ಸಮಿತಿಗಳು, ಸಂಘಟಕರು, ಸಂಘ, ಸಂಸ್ಥೆಗಳ ಮುಖಂಡರೊಂದಿಗೆ ಶಾಂತಿ ಸೌಹಾರ್ದ ಸಭೆಗಳನ್ನು ನಡೆಸಲಾಗಿದೆ. ಗಣೇಶೋತ್ಸವ ಸಂದರ್ಭಗಳಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರ ವಹಿಸಬೇಕು. ಸಂಬಂಧ ಇಲಾಖೆಗಳು ನೀಡುವ ಸಲಹೆ, ಸೂಚನೆಗಳನ್ನು ಪಾಲನೆ ಮಾಡಬೇಕೆಂದು ಸೂಚನೆ ನೀಡಿದರು.

 ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಯಾವುದೇ ಅಚಾತುರ್ಯ ನಡೆಯದಂತೆ ನೋಡಿಕೊಳ್ಳಬೇಕು. ನಿಗದಿತ ಮಾರ್ಗಗಳಲ್ಲಿ ಮೆರವಣಿಗೆ, ಸೂಚಿಸಿದ ಸ್ಥಳಗಳಲ್ಲೇ ಗಣೇಶ ವಿಗ್ರಹಗಳ ವಿಸರ್ಜಿಸಬೇಕೆಂದು ಹೇಳಿದರು.

ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮಾತನಾಡಿ, ಹಬ್ಬವನ್ನು ಸುಗಮವಾಗಿ ನಡೆಸಲು ನಗರಸಭೆಯ 63 ಉಪವಿಭಾಗಗಳು ಬಿಬಿಎಂಪಿ, ಬೆಸ್ಕಾಂ ಮತ್ತು ಅಗ್ನಿಶಾಮಕ ಇಲಾಖೆಯ ಪ್ರತಿನಿಧಿಗಳೊಂದಿಗೆ ಏಕಗವಾಕ್ಷಿ ವ್ಯವಸ್ಥೆಯನ್ನು ಜಾರಿಗೆ ತರುತ್ತಿದೆ. ಈ ಕೇಂದ್ರಗಳು ಗಣೇಶ ಮೂರ್ತಿಗಳನ್ನು ಇಡಲು ಪರವಾನಿಗೆ ನೀಡಲು ಅನುಕೂಲ ಮಾಡಿಕೊಡುತ್ತವೆ. ಈ ಕೇಂದ್ರಗಳಲ್ಲಿ ಸಂಘಟಕರು ಅನುಮತಿ ಪತ್ರ ಪಡೆಯಬಹುದು. ಅರ್ಜಿ ಸಲ್ಲಿಸಿದ 48 ಗಂಟೆ ದಾಟಿದರೂ ಅನುಮತಿ ಸಿಗದಿದ್ದಲ್ಲಿ ಅನುಮತಿ ಸಿಕ್ಕಿದೆ ಎಂದು ಭಾವಿಸಬಹುದು.

ಹೆಚ್ಚು ಜನಸಂದಿ ಇರುವ ಕಡೆ ಸಿಸಿಟಿವಿ ಕ್ಯಾಮೆರಾಗಳ ಅಳವಡಿಸಬೇಕು. ಕೋಮು ಸೌಹಾರ್ದತೆಯನ್ನು ಖಚಿತಪಡಿಸಿಕೊಳ್ಳಬೇಕು. ಪಾಲಿಕೆ ವ್ಯಾಪ್ತಿಯಲ್ಲಿ ಈ ಬಾರಿಯೂ ಗಣೇಶೋತ್ಸವ ಸಂದರ್ಭದಲ್ಲಿ ಏರಿಯಾಗಳಲ್ಲಿ ಫ್ಲೆಕ್ಸ್, ಬ್ಯಾನರ್ ಅಳವಡಿಕೆಗೆ ಅವಕಾಶ ನೀಡಲಾಗುವುದಿಲ್ಲ. ಪರಿಸರ ರಕ್ಷಣೆಯನ್ನು ಗಮನದಲ್ಲಿಟ್ಟುಕೊಂಡು, ಪರಿಸರಸ್ನೇಹಿ ಗಣೇಶ ಮೂರ್ತಿಗಳನ್ನು ಜನತೆ ಬಳಕೆ ಮಾಡಬೇಕೆಂದು ಮನವಿ ಮಾಡಿಕೊಂಡರು.

ಗಣೇಶ ಮೂರ್ತಿ ವಿಸರ್ಜನೆಗೆ ಸ್ಯಾಂಕಿ ಕೆರೆ, ಹಲಸೂರು ಕೆರೆ, ಯಡಿಯೂರು ಕೆರೆ, ಹೆಬ್ಬಾಳ ಕೆರೆ ಹಾಗೂ ಇತರೆ ಪ್ರಮುಖ ಕೆರೆ/ಕಲ್ಯಾಣಿಗಳಲ್ಲಿ ಸೂಕ್ತ ವ್ಯವಸ್ಥೆ ಕಲ್ಪಿಸಲಾಗುವುದು. ಪ್ರಮುಖ ಸ್ಥಳ, ಜಂಕ್ಷನ್ ಹಾಗೂ ಅವಶ್ಯಕತೆ ಇರುವ ಕಡೆ ವಾರ್ಡ್ ವಾರು ತಾತ್ಕಾಲಿಕವಾಗಿ ಸಂಚಾರಿ ವಿಸರ್ಜನಾ ಘಟಕಗಳನ್ನು ವ್ಯವಸ್ಥೆ ಮಾಡಲಾಗುವುದು. ಕೆರೆ-ಕಲ್ಯಾಣಿಗಳ ಬಳಿ ಪೊಲೀಸ್ ವ್ಯವಸ್ಥೆಯ ಜೊತೆಗೆ ಸಿಸಿಟಿವಿ, ವಿದ್ಯುತ್ ದೀಪ, ನುರಿತ ಈಜುಗಾರರ ವ್ಯವಸ್ಥೆ, ಕ್ರೇನ್ ಸೌಲಭ್ಯ ಕಲ್ಪಿಸಲಾಗುವುದು ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com