ಬೆಂಗಳೂರು: ದೇಶ ವಿರೋಧಿ ಶಕ್ತಿಗಳನ್ನು ಮಟ್ಟ ಹಾಕಲು ದೇಶದ ಎಲ್ಲಾ ರಾಜ್ಯಗಳು ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಕರೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಇಂದು ನಡೆದ ದಕ್ಷಿಣ ಭಾರತ ಡಿಜಿಪಿಗಳ ಸಮನ್ವಯ ಸಮಾವೇಶ ಉದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ಸೈಬರ್ ಕ್ರೈಂ ಸೇರಿದಂತೆ ವಿವಿಧ ಅಪರಾಧಗಳು ಹೆಚ್ಚು ಬೆಳಕಿಗೆ ಬರುತ್ತಿದ್ದು, ದೇಶ ವಿರೋಧಿ ಶಕ್ತಿಗಳು ಕರ್ನಾಟಕ, ಕೇರಳ ಸೇರಿದಂತೆ ಇತರ ರಾಜ್ಯಗಳಲ್ಲಿದ್ದು, ಭಯೋತ್ಪಾದನೆ ವಿಷಯದಲ್ಲಿ ಎಲ್ಲಾ ರಾಜ್ಯಗಳು ಒಗ್ಗಟ್ಟಾಗಿ ಕೆಲಸ ಮಾಡಬೇಕಾಗಿದೆ” ಎಂದರು.
ಭಯೋತ್ಪಾದನೆಯನ್ನು ನಿಭಾಯಿಸಲು ಒಗ್ಗಟ್ಟಿನಿಂದ ಕೆಲಸ ಮಾಡಲು ಕಾನೂನು ಅಡೆತಡೆಗಳನ್ನು ನಿವಾರಿಸಬೇಕು ಎಂದ ಸಿಎಂ, ಈ ನಿಟ್ಟಿನಲ್ಲಿ ಜಾಗೃತಿ ಮೂಡಿಸಬೇಕು ಮತ್ತು ಉತ್ತಮ ಭದ್ರತೆಯನ್ನು ಖಚಿತಪಡಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.
ವಿವಿಧ ರೀತಿಯ ಅಪರಾಧಗಳು ನಮ್ಮ ಖಾಸಗಿತನದ ಮೇಲೆ ಪರಿಣಾಮ ಬೀರುತ್ತಿವೆ. ಉಗ್ರರು ಒಂದು ರಾಜ್ಯದಲ್ಲಿ ದೇಶವಿರೋಧಿ ಚಟುವಟಿಕೆಗಳನ್ನು ನಡೆಸುತ್ತಾರೆ ಮತ್ತು ಇತರ ರಾಜ್ಯಗಳಲ್ಲಿ ತಲೆಮರೆಸಿಕೊಳ್ಳುತ್ತಾರೆ. ಇದನ್ನು ಕೊನೆಗೊಳಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಪ್ರಸ್ತುತ ದಿನಮಾನದಲ್ಲಿ ಸೈಬರ್ ಕ್ರೈಂಗಳು ಮತ್ತು ಇತರ ರೀತಿಯ ಅಪರಾಧಗಳು ಹೆಚ್ಚು ವರದಿಯಾಗುತ್ತಿವೆ. ಅಧಿಕಾರಿಗಳು ಅಪರಾಧಿಗಳಿಗಿಂತ ಒಂದು ಹೆಜ್ಜೆ ಮುಂದೆ ಹೋಗಿ ಕೆಲಸ ಮಾಡಬೇಕಾಗಿದೆ. ಸಮಾಜವನ್ನು ರಕ್ಷಿಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಮಾಡುತ್ತಿರುವ ಕಾರ್ಯ ಶ್ಲಾಘನೀಯ ಮತ್ತು ಇದು ನಮ್ಮ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತಿದೆ ಎಂದರು.
ಬೆಂಗಳೂರಿನಲ್ಲಿ ನಡೆಯುತ್ತಿರುವ ಸಮಾವೇಶದಲ್ಲಿ ದೇಶದ ಪ್ರಮುಖ ಅಧಿಕಾರಿಗಳು ಭಾಗವಹಿಸುತ್ತಿರುವುದಕ್ಕೆ ಹೆಮ್ಮೆಯಾಗುತ್ತಿದೆ. ತಮಿಳುನಾಡು, ತೆಲಂಗಾಣ, ಆಂಧ್ರಪ್ರದೇಶ, ಪುದುಚೇರಿ, ಅಂಡಮಾನ್-ನಿಕೋಬಾರ್ ದ್ವೀಪಗಳ ಅಧಿಕಾರಿಗಳು, ಎನ್ಐಎ, ಸಿಆರ್ಪಿಎಫ್, ಸಿಐಎಸ್ಎಫ್ ಅಧಿಕಾರಿಗಳು ಒಟ್ಟಾಗಿ ಸಭೆಯಲ್ಲಿ ಭಾಗವಹಿಸಿದ್ದಾರೆ. ನಾವೆಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದರು.
Advertisement