ಕಾವೇರಿ ವಿವಾದ: ಕೇಂದ್ರ ಮಧ್ಯಸ್ಥಿಕೆ ವಹಿಸಿ, ರಾಜ್ಯಕ್ಕೆ ಪರಿಹಾರ ನೀಡಲಿ; ದೆಹಲಿಗೆ ಹೋಗುತ್ತೇನೆ ಎಂದ ಡಿಕೆ ಶಿವಕುಮಾರ್

ತಮಿಳುನಾಡಿಗೆ ನೀರು ಬಿಡುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯವು ಅತಂತ್ರ ಸ್ಥಿತಿಯಲ್ಲಿದ್ದು, ಕೇಂದ್ರ ಸರ್ಕಾರವು ಮಧ್ಯಸ್ಥಿಕೆ ವಹಿಸಬೇಕು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಂಗಳವಾರ ಒತ್ತಾಯಿಸಿದರು.
ಡಿ.ಕೆ ಶಿವಕುಮಾರ್
ಡಿ.ಕೆ ಶಿವಕುಮಾರ್
Updated on

ಬೆಂಗಳೂರು: ತಮಿಳುನಾಡಿಗೆ ನೀರು ಬಿಡುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯವು ಅತಂತ್ರ ಸ್ಥಿತಿಯಲ್ಲಿದ್ದು, ಕೇಂದ್ರ ಸರ್ಕಾರವು ಮಧ್ಯಸ್ಥಿಕೆ ವಹಿಸಬೇಕು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಂಗಳವಾರ ಒತ್ತಾಯಿಸಿದರು.

ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಕಠಿಣ ಪರಿಸ್ಥಿತಿಯಲ್ಲಿದ್ದೇವೆ. ನಮಗೇ ನೀರಿದಿದ್ದರೂ, ನಾವು ಅಧಿಕಾರಿಗಳ ನಿರ್ಧಾರವನ್ನು ಗೌರವಿಸಬೇಕಾಗಿದೆ. ಆದರೆ, ನಾವು ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುತ್ತಿದ್ದೇವೆ ಮತ್ತು ನಾನು ನವದೆಹಲಿಗೆ ಹೋಗುತ್ತಿದ್ದೇನೆ ಎಂದರು.

'ನಾನು ಸಂಸತ್ ಸದಸ್ಯರನ್ನು ಭೇಟಿ ಮಾಡುತ್ತೇನೆ. ನಾವು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಕಾವತ್ ಅವರ ಬಳಿಗೂ ನಿಯೋಗವನ್ನು ಕೊಂಡೊಯ್ಯುತ್ತೇವೆ ಮತ್ತು ನಾವು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲು ಸಮಯ ಕೇಳುತ್ತಿದ್ದೇವೆ' ಎಂದು ಹೇಳಿದರು.

'ನಮಗೆ ಸಹಾಯ ಮಾಡಲು ಮತ್ತು ಮಧ್ಯಸ್ಥಿಕೆ ವಹಿಸುವಂತೆ ನಾವು ಅವರಿಗೆ (ಕೇಂದ್ರಕ್ಕೆ) ಮನವಿ ಮಾಡುತ್ತೇವೆ. ಅಣೆಕಟ್ಟುಗಳಿಗೆ ಒಳಹರಿವು ಇಲ್ಲ, ನಾವು ತುಂಬಾ ಕಷ್ಟಪಡುತ್ತಿದ್ದೇವೆ ಮತ್ತು ಕೇಂದ್ರ ಸರ್ಕಾರ ನಮಗೆ ಸಹಾಯ ಮಾಡಬೇಕು. ಕರ್ನಾಟಕವನ್ನು ಉಳಿಸಲು ಬಿಜೆಪಿ ಕೈಜೋಡಿಸಬೇಕು' ಎಂದು ಅವರು ಒತ್ತಾಯಿಸಿದರು.

'ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಸಲಹೆಯನ್ನು ಪರಿಗಣಿಸುತ್ತೇನೆ. ಅವರು ತಮಿಳುನಾಡಿಗೆ ಹರಿಸುತ್ತಿರುವ ನೀರು ನಿಲ್ಲಿಸಲು ಮತ್ತು ಕಾನೂನು ಹೋರಾಟ ನಡೆಸುವಂತೆ ಸೂಚಿಸಿದ್ದರು. ನಾಡಿದ್ದು ನಾವು ನ್ಯಾಯಾಲಯಕ್ಕೆ ಹೋಗುತ್ತೇವೆ. ನಾವು ನೀರು ಬಿಡಲು ಬಯಸುವುದಿಲ್ಲ. ಆದರೂ, ನ್ಯಾಯಾಲಯದ ಆದೇಶವನ್ನು ಮನಸ್ಸಿನಲ್ಲಿಟ್ಟುಕೊಳ್ಳಬೇಕಾದ ಪರಿಸ್ಥಿತಿ ಎದುರಾಗಿದೆ' ಎಂದರು.

'ನಾನು ದೆಹಲಿಗೆ ಹೋಗಿ ಎಲ್ಲಾ ಸಂಸದರನ್ನು ಭೇಟಿಯಾಗುತ್ತಿದ್ದೇನೆ. ಮಧ್ಯಸ್ಥಿಕೆ ವಹಿಸುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುತ್ತೇವೆ. ನೀರು ಬಿಡುವಂತೆ ಕೋರ್ಟ್‌ ಆದೇಶ ನೀಡಿದಾಗ ನನಗಾಗಲಿ, ಬೊಮ್ಮಾಯಿಗಾಗಲಿ ಬೇರೆ ಆಯ್ಕೆ ಏನಿದೆ? ರಾಜ್ಯದ ಹಿತಾಸಕ್ತಿ ಕಾಪಾಡಲು ಸಹಕರಿಸಬೇಕು. ಸದ್ಯದ ಪರಿಸ್ಥಿತಿಯನ್ನು ಸುಪ್ರೀಂ ಕೋರ್ಟ್‌ನ ಗಮನಕ್ಕೆ ತರಲಾಗುವುದು' ಎಂದು ಶಿವಕುಮಾರ್ ವಿವರಿಸಿದರು.

'ರಾಜಕೀಯವನ್ನು ಬದಿಗೊತ್ತಿ ಪ್ರಧಾನಿ ನರೇಂದ್ರ ಮೋದಿ ಮಧ್ಯಸ್ಥಿಕೆ ವಹಿಸುವಂತೆ ಬಸವರಾಜ ಬೊಮ್ಮಾಯಿ ಒತ್ತಾಯಿಸಲಿ. ಕಾವೇರಿ ವಿವಾದವನ್ನು ನ್ಯಾಯಾಲಯದ ಹೊರಗೆ ಇತ್ಯರ್ಥ ಮಾಡಿಕೊಳ್ಳುವಂತೆ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರು ನೀಡಿರುವ ಪ್ರಸ್ತಾಪವನ್ನು ಪರಿಗಣಿಸುತ್ತೇವೆ' ಎಂದು ಹೇಳಿದರು.

ಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯುಸೆಕ್ ನೀರನ್ನು ಹರಿಸಬೇಕು ಎಂಬ ಕಾವೇರಿ ನೀರು ನಿಯಂತ್ರಣ ಸಮಿತಿಯ ಶಿಫಾರಸನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಎತ್ತಿ ಹಿಡಿದಿದೆ. ಸೆ. 13ರಿಂದ ಮುಂದಿನ 15 ದಿನಗಳವರೆಗೆ ತಮಿಳುನಾಡಿಗೆ 5 ಸಾವಿರ ಕ್ಯುಸೆಕ್ ನೀರು ಹರಿಸಬೇಕು ಎಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶಿಸಿದೆ. 

ಸೋಮವಾರ ನಡೆದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ, ಕರ್ನಾಟಕವು ತಮಿಳುನಾಡಿಗೆ ನೀರು ಹರಿಸಬೇಕು ಎಂದು ಆದೇಶಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com