ಹೆಚ್ಚಿದ 'ಕಾವೇರಿ' ಕಿಚ್ಚು: ವಿವಿಧ ಸಂಘಟನೆಗಳಿಂದ ಬೆಂಗಳೂರು ಬಂದ್ ಗೆ ಕರೆ

ಕಾವೇರಿ ನೀರನ್ನು ನಂಬಿಕೊಂಡಿರುವ ಜಿಲ್ಲೆಗಳಲ್ಲಿ 'ಕಾವೇರಿ' ಕಿಚ್ಚು ಜೋರಾಗಿದೆ. ಇಂದು ಶನಿವಾರ ಮಂಡ್ಯ ಬಂದ್ ಬಹುತೇಕ ಯಶಸ್ವಿಯಾಗಿದ್ದು ಇದೀಗ ಬೆಂಗಳೂರು ಬಂದ್ ಗೂ ಕರೆ ನೀಡಲಾಗಿದೆ.
ಬಿಜೆಪಿ ನಾಯಕರ ಪ್ರತಿಭಟನೆ
ಬಿಜೆಪಿ ನಾಯಕರ ಪ್ರತಿಭಟನೆ

ಬೆಂಗಳೂರು: ಕಾವೇರಿ ನೀರನ್ನು ನಂಬಿಕೊಂಡಿರುವ ಜಿಲ್ಲೆಗಳಲ್ಲಿ 'ಕಾವೇರಿ' ಕಿಚ್ಚು ಜೋರಾಗಿದೆ. ಇಂದು ಶನಿವಾರ ಮಂಡ್ಯ ಬಂದ್ ಬಹುತೇಕ ಯಶಸ್ವಿಯಾಗಿದ್ದು ಇದೀಗ ಬೆಂಗಳೂರು ಬಂದ್ ಗೂ ಕರೆ ನೀಡಲಾಗಿದೆ.

ಸೆಪ್ಟೆಂಬರ್ 26ರಂದು ಮಂಗಳವಾರ ಬೆಂಗಳೂರು ಬಂದ್ ಗೆ ವಿವಿಧ ಸಂಘಟನೆಗಳು ಕರೆ ನೀಡಿವೆ. ಇಂದು ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ತೀವ್ರ ಪ್ರತಿಭಟನೆ ನಡೆಸಿದ ರಾಜ್ಯ ಬಿಜೆಪಿ ನಾಯಕರು ಬೆಂಗಳೂರು ಬಂದ್ ಗೆ ಸಾಥ್ ನೀಡಿದ್ದಾರೆ.

ಸೆಪ್ಟೆಂಬರ್ 26ರಂದು ಬೆಂಗಳೂರು ನಗರ ಬಂದ್​ಗೆ ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಕರೆ ಕೊಟ್ಟಿದೆ. ಫ್ರೀಡಂಪಾರ್ಕ್​ನಲ್ಲಿ ಕುರುಬೂರು ಶಾಂತಕುಮಾರ್ ಈ ಬಗ್ಗೆ ತಿಳಿಸಿದ್ದಾರೆ. ಸೆಪ್ಟೆಂಬರ್ 26ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಲಿದೆ. ಬೆಳಗ್ಗೆ 11 ಗಂಟೆಗೆ ಟೌನ್​ಹಾಲ್​ನಿಂದ ಮೈಸೂರು ಬ್ಯಾಂಕ್ ವೃತ್ತದವರೆಗೆ ರ್ಯಾಲಿ ಹಮ್ಮಿಕೊಳ್ಳಲಾಗಿದೆ. ಬೆಂಗಳೂರಿನಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಬೇಕು. ಇದು ನಮ್ಮ ಬಂದ್ ಅಲ್ಲ, ಬೆಂಗಳೂರಿನ ನಾಗರಿಕರ ಬಂದ್. ಫಿಲ್ಮ್ ಛೇಂಬರ್, ಐಟಿ ಕಂಪನಿಗಳು ಬೆಂಬಲ ಕೊಡಬೇಕು. ಸರ್ಕಾರ ವಿಶೇಷ ವಿಧಾನಮಂಡಲದ ಅಧಿವೇಶನ ಕರೆಯಬೇಕು ಎಂದು ಕುರುಬೂರು ಶಾಂತಕುಮಾರ್ ಸರ್ಕಾರವನ್ನು ಇದೇ ಸಂದರ್ಭದಲ್ಲಿ ಒತ್ತಾಯಿಸಿದರು. 

ರಾಜ್ಯದ ಆಡಳಿತ ಶಕ್ತಿ ಕೇಂದ್ರವಾಗಿರುವ ಬೆಂಗಳೂರಿನಲ್ಲಿ ಪ್ರತಿಭಟನೆ, ಬಂದ್ ನಡೆಸಿದರೆ ರಾಜ್ಯ ಸರ್ಕಾರದ ಗಮನವನ್ನು ಹೆಚ್ಚಿನ ಮಟ್ಟಿಗೆ ಸೆಳೆದು ಕೇಂದ್ರದ ಮೇಲೆ ಮತ್ತು ಕಾನೂನಾತ್ಮಕವಾಗಿ ಕಾವೇರಿ ನೀರಿಗಾಗಿ ಮುಂದಿನ ದಿನಗಳಲ್ಲಿ ಹೆಚ್ಚು ಪರಿಣಾಮಕಾರಿಯಾಗಿ ಹೋರಾಟ ನಡೆಸಲು ಉತ್ತಮ ಎಂದು ವಿವಿಧ ಸಂಘಟನೆಗಳು ಬೆಂಗಳೂರು ಬಂದ್ ಗೆ ಕರೆ ನೀಡಲು ತೀರ್ಮಾನಿಸಿವೆ.

ಮೈಸೂರು ಬ್ಯಾಂಕ್ ವೃತ್ತದಲ್ಲಿ ಬಿಜೆಪಿ ಹೋರಾಟ: ಕಾವೇರಿ ನೀರಿಗಾಗಿ, ಕಾವೇರಿ ಜಲವನ್ನು ತಮಿಳು ನಾಡಿಗೆ ಹರಿಸಬಾರದು, ಸರ್ಕಾರ ಸುಪ್ರೀಂ ಕೋರ್ಟ್ ಮಲ್ಲಿ ಮಧ್ಯಂತರ ಅರ್ಜಿ ಸಲ್ಲಿಸಬೇಕೆಂದು ಆಗ್ರಹಿಸಿ ಮಾಜಿ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಸೇರಿದಂತೆ ಬಿಜೆಪಿಯ ನಾಯಕರು, ಶಾಸಕರು, ಮುಖಂಡರು ಇಂದು ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಈ ವೇಳೆ ಮಾತನಾಡಿದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ನಿಮಗೆ ಯೋಗ್ಯತೆ ಇದ್ದರೆ ಸಮಸ್ಯೆ ಪರಿಹಾರ ಮಾಡಿ. ಇಲ್ಲದಿದ್ದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಿ. ಎಲ್ಲರೂ ಸೇರಿ ನಾವು ಬೆಂಗಳೂರಿನಲ್ಲಿ ದೊಡ್ಡ ಹೋರಾಟ ಮಾಡುತ್ತೇವೆ. ಸುಪ್ರೀಂ ಕೋರ್ಟ್ ಗೆ ಮನವರಿಕೆ ಮಾಡಿಕೊಡಬೇಕು ಎಂದು ದೇವೇಗೌಡರು ಕೂಡಾ ಹೇಳಿದ್ದಾರೆ. ಕಾಂಗ್ರೆಸ್ ಮುಖಂಡರು ತಮಿಳುನಾಡು ಏಜೆಂಟರಂತೆ ವರ್ತನೆ ಖಂಡನೀಯ ಎಂದು ಆಕ್ರೋಶ ಹೊರ ಹಾಕಿದರು. ಬಿಎಸ್​ ಯಡಿಯೂರಪ್ಪರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕಾವೇರಿ ನದಿ ವಿಚಾರದಲ್ಲಿ ರಾಜ್ಯ ಸರ್ಕಾರ ಸೂಕ್ತ ವಾದ ಮಂಡಿಸಿಲ್ಲ ಎಂದು ಹುಬ್ಬಳ್ಳಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸರ್ಕಾರ ನಮ್ಮ ಹಾಗೂ ತಮಿಳುನಾಡು ಡ್ಯಾಮ್​ಗಳ ಮಾಹಿತಿ ಪಡೆಯಬೇಕಿತ್ತು. ಎರಡೂ ರಾಜ್ಯಗಳ ಡ್ಯಾಮ್​​​​​​ಗಳ ಸ್ಥಿತಿ ಬಗ್ಗೆ ಸೂಕ್ತ ವಾದ ಮಂಡಿಸಿಲ್ಲ. ಕಾವೇರಿ ಪ್ರಾಧಿಕಾರದ ಸಭೆಗೆ ನಮ್ಮವರು ವರ್ಚುವಲ್​ ಮೂಲಕ ಹಾಜರಾಗಿದ್ದರು. ಕಾವೇರಿ ನದಿ ವಿಚಾರದಲ್ಲಿ ಕೇಂದ್ರದಿಂದ ಎಲ್ಲ ರೀತಿಯ ಸಹಕಾರ ನೀಡಿದ್ದೇವೆ. ಮುಂದೆಯೂ ಸಹಕಾರ ನೀಡುತ್ತೇವೆ ಎಂದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com