ಸಾಲ ಮಾಡಿ ಅದ್ಧೂರಿ ಮದುವೆ ಮಾಡುವುದು ನಿಲ್ಲಿಸಿ; ಚಾಮರಾಜನಗರಕ್ಕೆ ಭೇಟಿ ನೀಡಿ ಮೌಢ್ಯ ತೊರೆದಿದ್ದೇನೆ: ಸಿಎಂ ಸಿದ್ದರಾಮಯ್ಯ

ಸಾಲ ಮಾಡಿ ಅದ್ಧೂರಿ ಮದುವೆ ಮಾಡುವುದು ಬಿಟ್ಟು ಸಾಲ ಮಾಡಿ ವ್ಯವಸಾಯ ಮಾಡಿ ಜೀವನ ರೂಪಿಸಿಕೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜನತೆಗೆ ಕರೆ ನೀಡಿದ್ದಾರೆ. 
ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಲೆ ಮಹದೇಶ್ವರ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ, ಬಳಿಕ ಮಾದೇಶ್ವರನ ಬೆಳ್ಳಿ ರಥೋತ್ಸವದಲ್ಲಿ ಭಾಗಿಯಾದರು
ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಲೆ ಮಹದೇಶ್ವರ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ, ಬಳಿಕ ಮಾದೇಶ್ವರನ ಬೆಳ್ಳಿ ರಥೋತ್ಸವದಲ್ಲಿ ಭಾಗಿಯಾದರು
Updated on

ಚಾಮರಾಜನಗರ : ಸಾಲ ಮಾಡಿ ಅದ್ಧೂರಿ ಮದುವೆ ಮಾಡುವುದು ಬಿಟ್ಟು ಸಾಲ ಮಾಡಿ ವ್ಯವಸಾಯ ಮಾಡಿ ಜೀವನ ರೂಪಿಸಿಕೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜನತೆಗೆ ಕರೆ ನೀಡಿದ್ದಾರೆ. 

ಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ದೇವಸ್ಥಾನದ ರಂಗಮಂದಿರದ ಆವರಣದಲ್ಲಿ ಆಯೋಜಿಸಿದ್ದ ಸಾಮೂಹಿಕ ಸರಳ ವಿವಾಹದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬಡವರು ಮತ್ತು ಮಧ್ಯಮ ವರ್ಗದವರ ಪಾಲಿಗೆ ಅದ್ದೂರಿ ಮದುವೆಗಳು ಬಹಳ ದೊಡ್ಡ ಹೊರೆಯಾಗುತ್ತವೆ. ಜೀವನ ಪರ್ಯಂತ ಸಾಲ ತೀರಿಸುತ್ತಾ ಕೂರಬೇಕಾಗುತ್ತದೆ. ಆದ್ದರಿಂದ ಸರಳ ಮತ್ತು ಸಾಮೂಹಿಕ ವಿವಾಹಗಳು ಹೆಚ್ಚೆಚ್ಚು ನಡೆಯಬೇಕು ಎಂದರು.

ಮಹದೇಶ್ವರನ ಬೆಟ್ಟ ಅಧ್ಯಾತ್ಮಿಕ ಮಹತ್ವ ಇರುವ ಪುಣ್ಯ ಸ್ಥಳ. ಶೂದ್ರರು, ಶ್ರಮಿಕರು, ಬಡವರು, ಎಲ್ಲಾ ಜಾತಿಯವರ ಅಧ್ಯಾತ್ಮಿಕ ಕೇಂದ್ರವಾಗಿದೆ. ಈ ಕಾರಣಕ್ಕೇ ನನಗೆ ಈ ಕ್ಷೇತ್ರದ ಬಗ್ಗೆ ಅತ್ಯಂತ ಶ್ರದ್ದೆ ಮತ್ತು ಗೌರವ ಇದೆ. ನಾನು ಮೊದಲ ಬಾರಿ ಮುಖ್ಯಮಂತ್ರಿಯಾದಾಗ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರ ರಚಿಸಿದೆ. ಈಗ ಪ್ರಾಧಿಕಾರದ ಆದಾಯವೂ ಹೆಚ್ಚಾಗಿದೆ. ಶಕ್ತಿ ಯೋಜನೆಯ ಪರಿಣಾಮ ಭಕ್ತರು, ಅದರಲ್ಲೂ ಮಹಿಳಾ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಮಲೆ ಮಹದೇಶ್ವರನ ದರ್ಶನ ಪಡೆಯುತ್ತಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದರು.

ಇಲ್ಲಿ ಕುಡಿಯುವ ನೀರು ಮತ್ತು ಶುಚಿತ್ವಕ್ಕೆ ಹೆಚ್ಚಿನ ಆದ್ಯತೆ ನೀಡಿ ಎಂದು ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಾಷ್ಟ್ರಪತಿ ಭವನ ಹೆಸರು ಇನ್ನು ತಪೋಭವನ: ಮಲೆ ಮಹದೇಶ್ವರ ಬೆಟ್ಟದಲ್ಲಿರುವ ರಾಷ್ಟ್ರಪತಿ ಭವನದ ಹೆಸರು ಬದಲಾಗಿದೆ. ಇನ್ನು ಮುಂದೆ ಇದು ತಪೋಭವನ. ಮಾದೇಶ್ವರ ತಪಸ್ಸು ಮಾಡಿದ ಶಕ್ತಿ ಕೇಂದ್ರ ಇದು. ಆದ್ದರಿಂದ ಇದನ್ನು ನಾವು ತಪೋಭವನ ಎಂದು ಕರೆಯಬೇಕು.ಶಿವರಾತ್ರಿ ದೇಶೀಕೇಂದ್ರ ಮಹಾ ಸ್ವಾಮಿಗಳ ಸಲಹೆಯಂತೆ ತಪೋಭವನ ಎಂದು ಬದಲಾಯಿಸಿದ್ದೇವೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಮೌಢ್ಯ ತೊಡೆದಿದ್ದೇನೆ: ಚಾಮರಾಜನಗರ ಜಿಲ್ಲೆಗೆ ಅಂಟಿದ್ದ ಮೌಡ್ಯ ತೊಡೆದು ಹಾಕಿರುವೆ, ಕಳೆದ ಬಾರಿ ಮುಖ್ಯಮಂತ್ರಿಯಾಗಿದ್ದಾಗ 12 ಬಾರಿ ಭೇಟಿ ನೀಡಿ 5 ವರ್ಷ ಗಟ್ಟಿಯಾಗಿ ಆಡಳಿತ ನಡೆಸಿದ್ದೆ. ಈಗ ಮತ್ತೆ ಬಂದಿದ್ದೇನೆ ಎಂದರು. 

ಎರಡನೇ ಬಾರಿ ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿದ ಅವರು ಇಂದು ಬುಧವಾರ ಬೆಳಗ್ಗೆ ಮಲೆ ಮಹದೇಶ್ವರನ ದರ್ಶನ ಪಡೆದರು. ಈ ವೇಳೆ ರಾಜ್ಯದ ಸಂಕಷ್ಟದ ಪರಿಸ್ಥಿತಿ ನಿವಾರಣೆ ಆಗಲಿ, ಉತ್ತಮ ಮಳೆ ಆಗಲಿ, ರೈತರಿಗೆ ಒಳ್ಳೆಯದಾಗಲಿ ಎಂದು ಮಹದೇಶ್ವರನನ್ನು ಪ್ರಾರ್ಥಿಸಿದ್ದೇನೆ ಎಂದು ಹೇಳಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com