ಸಿಎಂ ಆಗಿ ನಾನು ಇರ್ಬೇಕೋ ಬೇಡ್ವೋ?-ಸಿದ್ದರಾಮಯ್ಯ, ಮಂಡ್ಯ ಗೌಡಿಕೆ ಬೇರೆಯವರಿಗೆ ಬಿಟ್ಟುಕೊಟ್ಟ ಇತಿಹಾಸ ಇಲ್ಲ: HDK ಗೆ DKS ಟಾಂಗ್; ಈ ದಿನದ ಪ್ರಮುಖ ಸುದ್ದಿಗಳು 01-04-2024

ಲೋಕಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಇದ್ದು, ರಾಜ್ಯದಲ್ಲಿ ನಾಮಪತ್ರ ಸಲ್ಲಿಕೆ ಆರಂಭವಾಗಿದೆ.
(ಸಂಗ್ರಹ ಚಿತ್ರ)
(ಸಂಗ್ರಹ ಚಿತ್ರ)
Updated on

ಬೆಂಗಳೂರು: ಲೋಕಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಇದ್ದು, ರಾಜ್ಯದಲ್ಲಿ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಇಂದು ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್‌ ಒಡೆಯರ್, ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪಿ.ಸಿ.ಮೋಹನ್‌, ತುಮಕೂರು ಬಿಜೆಪಿ ಅಭ್ಯರ್ಥಿ ಸೋಮಣ್ಣ, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ದಿ, ಮಂಡ್ಯ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು, ಹಾಸನ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಶ್ರೇಯಸ್ ಪಟೇಲ್ ನಾಮಪತ್ರ ಸಲ್ಲಿಸಿದ್ದು, ಈ ವರೆಗೆ ಒಟ್ಟು 59 ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಕೆ ಮಾಡಿದ್ದಾರೆ. ಮೊದಲ ಹಂತದಲ್ಲಿ ಏ.26 ರಂದು ಮತದಾನ ನಡೆಯಲಿದೆ.

(ಸಂಗ್ರಹ ಚಿತ್ರ)
ಲೋಕಸಭಾ ಚುನಾವಣೆ: ಬಿಜೆಪಿ 400 ಸ್ಥಾನ ಗಳಿಸಲ್ಲ, 'ಅಲುಗಾಡುತ್ತಿರುವ ವಿಕೆಟ್' ಎಂದ ಪ್ರಿಯಾಂಕ್ ಖರ್ಗೆ

ಲೋಕಸಭಾ ಚುನಾವಣೆಗೆ ರಾಜಕೀಯ ಪಕ್ಷಗಳ ಪ್ರಮುಖ ನಾಯಕರು ಪ್ರಚಾರ ಆರಂಭಿಸಿದ್ದಾರೆ. ಇಂದು ಮೈಸೂರು-ಚಾಮರಾಜನಗರ ಜಿಲ್ಲೆಯಲ್ಲಿ ಪಕ್ಷದ ಪರ ಪ್ರಚಾರ ಕೈಗೊಂಡು ಸಾರ್ವಜನಿಕ ಸಭೆಯಲ್ಲಿ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಸಿಎಂ ಸ್ಥಾನದಲ್ಲಿ ಇರಬೇಕೋ ಬೇಡವೋ? ನಾನು ಸಿಎಂ ಸ್ಥಾನದಲ್ಲಿರಬೇಕು ಅಂದರೇ ವರುಣಾ ಕ್ಷೇತ್ರದಲ್ಲಿ 60 ಸಾವಿರ ಲೀಡ್ ಕೊಟ್ಟು ಕಾಂಗ್ರೆಸ್ ಅಭ್ಯರ್ಥಿಯನ್ನು ಗೆ‍ಲ್ಲಿಸಿ ಎಂದು ಮತದಾರರಲ್ಲಿ ಮನವಿ ಮಾಡಿದರು. ಈಮಧ್ಯೆ, ಮಂಡ್ಯದಲ್ಲಿ ಪಕ್ಷದ ಅಭ್ಯರ್ಥಿ ಪರ ಪ್ರಚಾರ ನಡೆಸಿದ ಡಿ.ಕೆ ಶಿವಕುಮಾರ್, ಮಂಡ್ಯದ ಜನ ಹೊರಗಿನವರಿಗೆ ತಮ್ಮ ಸ್ಥಾನ, ಸ್ವಾಭಿಮಾನ ಬಿಟ್ಟುಕೊಟ್ಟಿಲ್ಲ. ಮಂಡ್ಯದ ಗೌಡಿಕೆ, ಆಡಳಿತವನ್ನು ಬೇರೆಯವರಿಗೆ ಬಿಟ್ಟುಕೊಟ್ಟ ಇತಿಹಾಸ ನಮ್ಮ ಮುಂದೆ ಇಲ್ಲ. ಇಲ್ಲಿ ಟೂರಿಂಗ್ ಟಾಕೀಸ್ ರಾಜಕಾರಣ ನಡೆಯಲ್ಲ ಎಂದು ಪರೋಕ್ಷವಾಗಿ ಎಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ವಾಗ್ದಾಳಿ ನಡೆಸಿದರು.

ಕಾರಿನಲ್ಲಿ ಹೋಗುತ್ತಿದ್ದ ಯುವತಿಯೊಬ್ಬರನ್ನು ಹಿಂಬಾಲಿಸಿ ಕಿರುಕುಳ ನೀಡಿದ ಇಬ್ಬರು ಬೈಕ್‌ ಸವಾರರನ್ನು ಬಂಧಿಸಲಾಗಿದೆ. ಮಡಿವಾಳ-ಕೋರಮಂಗಲ ರಸ್ತೆಯಲ್ಲಿ ನಿನ್ನೆ ರಾತ್ರಿ ಈ ಘಟನೆ ನಡೆದಿದೆ. ತೇಜಸ್ ಮತ್ತು ಜಗನ್ನಾಥ್ ಬಂಧಿತ ಆರೋಪಿಗಳಾಗಿದ್ದು, ಮೂರನೇ ಆರೋಪಿ ಕಣ್ಣನ್ ಇನ್ನೂ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ. ಕಿಡಿಗೇಡಿಗಳು ಮಡಿವಾಳ, ಸೆಂಟ್ ಜಾನ್ಸ್ ನಿಂದ ಕೋರಮಂಗಲವರೆಗೂ ಹಿಂಬಾಲಿಸಿಕೊಂಡು ಬಂದಿದ್ದಾರೆ. ಇದರಿಂದ ಆತಂಕಗೊಂಡ ಯುವತಿ ಸಹಾಯಕ್ಕಾಗಿ ಕೂಡಲೇ 112 ಸಹಾಯವಾಣಿಗೆ ಕರೆ ಮಾಡಿದ್ದಾರೆ. ವಿಚಾರ ತಿಳಿಯುತ್ತಿದ್ದಂತೆ ಅಲರ್ಟ್‌ ಆದ ಪೊಲೀಸರು ಯುವತಿ ಇದ್ದ ಜಾಗಕ್ಕೆ ಬಂದಿದ್ದಾರೆ. ಪೊಲೀಸರನ್ನು ಕಂಡೊಡನೆ ಪುಂಡರು ಪರಾರಿಯಾಗಿದ್ದರು.

(ಸಂಗ್ರಹ ಚಿತ್ರ)
ಬಳ್ಳಾರಿ: ಜಿಲ್ಲೆಯಲ್ಲಿ ಬಿಸಿಗಾಳಿ ಅಬ್ಬರ; 10 ವರ್ಷದೊಳಗಿನ 20ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

ತೀವ್ರ ಬಿಸಿಲಿನ ಝಳಕ್ಕೆ ಬಳ್ಳಾರಿ ಜಿಲ್ಲೆ ತತ್ತರಿಸಿದ್ದು ಎರಡು ದಿನಗಳಲ್ಲಿ 10 ವರ್ಷದೊಳಗಿನ 20ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಳ್ಳಾರಿ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ 40 ಡಿಗ್ರಿ ಸೆಲ್ಸಿಯಸ್‌ಗೂ ಅಧಿಕ ತಾಪಮಾನ ಕಂಡು ಬರುತ್ತಿದೆ. ಆಸ್ಪತ್ರೆಗೆ ದಾಖಲಾಗಿರುವ ಮಕ್ಕಳು ನಿರ್ಜಲೀಕರಣ, ಜ್ವರ ಮತ್ತು ವಾಂತಿಯಿಂದ ಬಳಲುತ್ತಿದ್ದಾರೆ. ಈ ವರ್ಷ ಗರಿಷ್ಠ ತಾಪಮಾನ 45 ಡಿಗ್ರಿ ಸೆಲ್ಸಿಯಸ್‌ಗೆ ತಲುಪಬಹುದು ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಸಿದೆ. ಹವಾಮಾನ ಇಲಾಖೆಯು ಕಳೆದ ವಾರ, ಬರದಿಂದಾಗಿ ತೀವ್ರ ಬಿಸಿಲ ಧಗೆ ಕಂಡುಬರುತ್ತಿರುವ ಬಳ್ಳಾರಿ ಜಿಲ್ಲೆ ಸೇರಿದಂತೆ ಉತ್ತರ ಕರ್ನಾಟಕದಾದ್ಯಂತ ಬಿಸಿಗಾಳಿಯ ಎಚ್ಚರಿಕೆ ನೀಡಿತ್ತು. ಬಳ್ಳಾರಿ ಜಿಲ್ಲಾಡಳಿತ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದು, ನಾಗರಿಕರು, ವಿಶೇಷವಾಗಿ ಮಕ್ಕಳು ಮತ್ತು ವೃದ್ಧರು ಮಧ್ಯಾಹ್ನ 1 ರಿಂದ ಸಂಜೆ 4 ರವರೆಗೆ ಯಾವುದೇ ರಕ್ಷಣೆಯಿಲ್ಲದೆ ನೇರ ಸೂರ್ಯನ ಬೆಳಕಿನಲ್ಲಿ ಹೊರಬರದಂತೆ ತಿಳಿಸಲಾಗಿದೆ. ಕಲಬುರಗಿಯಲ್ಲಿ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ದಾಟಿದೆ.

(ಸಂಗ್ರಹ ಚಿತ್ರ)
ಕರ್ನಾಟಕ ಲೋಕಸಭೆ ಚುನಾವಣೆ: ಅಭ್ಯರ್ಥಿಗಳ ಉಮೇದುವಾರಿಕೆ; ಯದುವೀರ್, ಸೋಮಣ್ಣ, ಮೋಹನ್ ನಾಮಪತ್ರ ಸಲ್ಲಿಕೆ

ಕರ್ನಾಟಕ ರಾಜ್ಯ ವಿದ್ಯುತ್​ಚ್ಛಕ್ತಿ ನಿಯಂತ್ರಣ ಆಯೋಗ ವಿದ್ಯುತ್​ ದರ ಇಳಿಕೆ ಮಾಡಿದ್ದು, ಇಂದಿನಿಂದ ಜಾರಿಗೆ ಬಂದಿದೆ. 100 ಯುನಿಟ್​ಗಿಂತ ಹೆಚ್ಚು ಬಳಸುವವರಿಗೆ ಪ್ರತಿ ಯುನಿಟ್​ಗೆ 1.10 ರೂ. ಕಡಿಮೆ ಮಾಡಲಾಗಿದೆ. ಗೃಹ ಬಳಕೆಯಲ್ಲಿ 100 ಯುನಿಟ್​​ಗಿಂತ ಹೆಚ್ಚು ವಿದ್ಯುತ್​​ ಬಳಕೆ ಮಾಡುವವರಿಗೆ ಪ್ರತಿ ಯುನಿಟ್​ಗೆ 1.10 ರೂ. ಕಡಿಮೆ ಮಾಡಲಾಗಿದೆ. ಈ ಮೂಲಕ 15 ವರ್ಷಗಳ ಬಳಿಕ ರಾಜ್ಯದಲ್ಲಿ ವಿದ್ಯುತ್ ದರ ಇಳಿಕೆಯಾಗಿದೆ. ಎಲ್ಲಾ ಎಸ್ಕಾಂಗಳಿಗೂ ಏಕರೂಪದ ಗೃಹಬಳಕೆ ವಿದ್ಯುತ್​ ದರ ನಿಗದಿ ಮಾಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com