ಕೊಪ್ಪಳ: ಶಾಲೆಯಲ್ಲಿ ಬಿಸಿಯೂಟ ಸೇವಿಸಿ 35 ಮಕ್ಕಳು ಅಸ್ವಸ್ಥರಾಗಿರುವ ಘಟನೆ ಕೊಪ್ಪಳ ಜಿಲ್ಲೆಯ ಸಂಗಾಪುರ ಗ್ರಾಮದಲ್ಲಿ ಬುಧವಾರ ನಡೆದಿದೆ.
ಆಹಾರ ಸೇವನೆ ಮಾಡಿದ ಬಳಿಕ ಮಕ್ಕಳಿಗೆ ವಾಂತಿ, ಭೇದಿ ಕಾಣಿಸಿಕೊಂಡು ಅಸ್ವಸ್ಥರಾಗಿದ್ದಾರೆ. ತೀವ್ರವಾಗಿ ಅಸ್ವಸ್ಥರಾಗಿದ್ದ ಮಂದಿಯನ್ನು ಗಂಗಾವತಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಿಸಿಯೂಟದ ಬಿಸಿಯಿಂದಾಗಿ ಮಕ್ಕಳು ಅಸ್ವಸ್ಥರಾಗಿದ್ದಾರೆಯೇ ಹೊರತು ಅವರಿಗೆ ಬಡಿಸಿದ ಆಹಾರದಿಂದಲ್ಲ ಎಂದು ಶಾಲೆಯ ಸಿಬ್ಬಂದಿ ಹೇಳಿದ್ದಾರೆ.
ಮಕ್ಕಳಿಗೆ ಅನ್ನ, ತರಕಾರಿ ಸಾಂಬರ್ ಬಡಿಸಲಾಗಿತ್ತು. ಆಹಾರ ತಿಂದ 30 ನಿಮಿಷಗಳ ನಂತರ ಮಕ್ಕಳಲ್ಲಿ ಹೊಟ್ಟೆ ನೋವು ಕಾಣಿಸಿಕೊಂಡು, ವಾಂತಿ ಮಾಡಲು ಪ್ರಾರಂಭಿಸಿದ್ದರು. 15 ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎಲ್ಲರ ಸ್ಥಿತಿ ಸ್ಥಿರವಾಗಿದೆ. ಅವರ ಪೋಷಕರಿಗೂ ಮಾಹಿತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಶಾಲೆಯ ಅಡುಗೆ ಕೋಣೆಯನ್ನು ಸ್ವಚ್ಛಗೊಳಿಸಲಾಗಿದ್ದು, ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಮೆನುವಿನಲ್ಲಿ ಬದಲಾವಣೆ ಮಾಡಲಾಗುವುದು’ ಎಂದು ಶಿಕ್ಷಕರೊಬ್ಬರು ಹೇಳಿದ್ದಾರೆ.
ಬೇಸಿಗೆ ಹಿನ್ನೆಲೆಯಲ್ಲಿ ಮಕ್ಕಳಿಗೆ ದ್ರವಾಹಾರ ನೀಡುವಂತೆ ಶಾಲೆಗಳಿಗೆ ಸೂಚಿಸಲಾಗಿದೆ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಶಾಲೆಗಳು ಏಪ್ರಿಲ್ 10 ರವರೆಗೆ ತೆರೆದಿರುತ್ತವೆ. ಇಲಾಖೆಯ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದೆ. ತನಿಖಾ ವರದಿ ಆಧರಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
Advertisement