ಬೆಂಗಳೂರು: ಲೋಕಸಭೆ ಚುನಾವಣೆ ಪ್ರಚಾರದಲ್ಲಿ ಬ್ಯುಸಿಯಾಗಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಲೋಕಾಯುಕ್ತ ಶಾಕ್ ನೀಡಿದ್ದು, ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ನೋಟಿಸ್ ಜಾರಿ ಮಾಡಿದೆ.
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐ ತನಿಖೆಯನ್ನು ರಾಜ್ಯ ಸರ್ಕಾರ ರದ್ದು ಮಾಡಿದ್ದು, ಲೋಕಾಯುಕ್ತ ತನಿಖೆಗೆ ಆದೇಶಿಸಿತ್ತು. ಬಳಿಕ ಲೋಕಾಯುಕ್ತ ಸಂಸ್ಥೆಯಲ್ಲಿ ಡಿಕೆ ಶಿವಕುಮಾರ್ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲೆ ಒದಗಿಸುವಂತೆ ನೊಟೀಸ್ ಜಾರಿ ಮಾಡಿಲಾಗಿದೆ.
ಸಿಬಿಐಗೆ ನೀಡಿರುವ ದಾಖಲೆ ಮತ್ತು ಮಾಹಿತಿಯನ್ನು ತಮಗೆ ಒದಗಿಸುವಂತೆ ಲೋಕಾಯುಕ್ತ ಪೊಲೀಸರು ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ನೋಟಿಸ್ ನೀಡಿದ್ದಾರೆ.
ಅಕ್ಟೋಬರ್ 2020ರಲ್ಲಿ ಡಿಕೆಶಿ ವಿರುದ್ಧ ಸಿಬಿಐ ಆದಾಯ ಮೀರಿದ ಆಸ್ತಿಗಳಿಕೆ ಪ್ರಕರಣ ದಾಖಲಿಸಿತ್ತು. ಡಿ.ಕೆ.ಶಿವಕುಮಾರ್ ಮತ್ತು ಅವರ ಕುಟುಂಬದ ಸದಸ್ಯರು ₹ 74.93 ಕೋಟಿ ಮೊತ್ತದ ಆಸ್ತಿಯನ್ನು ಅಕ್ರಮವಾಗಿ ಗಳಿಸಿದ್ದಾರೆ ಎಂದು ಸಿಬಿಐ ಆರೋಪಿಸಿತ್ತು. ಮಾರ್ಚ್ 2020ರಿಂದ ಪ್ರಕರಣದ ತನಿಖೆ ನಡೆಸುತ್ತಿದ್ದ ಸಿಬಿಐ ಅಕ್ಟೋಬರ್ 5, 2020ರಲ್ಲಿ ದೆಹಲಿ, ಮುಂಬೈ ಸೇರಿದಂತೆ 14 ಸ್ಥಳಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿ, ಕಂಪ್ಯೂಟರ್ ಹಾರ್ಡ್ಡಿಸ್ಕ್, 57 ಲಕ್ಷ ರೂ. ನಗದು ಸೇರಿದಂತೆ ಹಲವು ದಾಖಲೆಗಳನ್ನು ವಶಪಡಿಸಿಕೊಂಡಿತ್ತು.
Advertisement