ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಪ್ರಮುಖ ಆರೋಪಿಗಳಾದ, ಶಂಕಿತ ಬಾಂಬರ್ ಗಳನ್ನು ಎನ್ ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಮುಸಾವಿರ್ ಹುಸೇನ್ ಶಾಜಿಬ್, ಅಬ್ದುಲ್ ಮತೀನ್ ಅಹಮದ್ ತಾಹಾ ಎಂಬ ಇಬ್ಬರನ್ನು ಪಶ್ಚಿಮ ಬಂಗಾಳದ ಕೋಲ್ಕತಾದಲ್ಲಿ ಬಂಧಿಸಲಾಗಿದೆ ಎಂದು ಎನ್ಎಐ ಮೂಲಗಳು ತಿಳಿಸಿವೆ. ಸಾಕ್ಷಿ ಸಂಗ್ರಹಕ್ಕಾಗಿ ಆರೋಪಿಗಳ ಸಹಪಾಠಿಗಳು, ಸ್ನೇಹಿತರು, ಬಂಧಿತ ಆರೋಪಿಗಳ ವಿಚಾರಣೆ ನಡೆಸಲಾಗುತ್ತಿದೆ. ಐಇಡಿ ತಂದಿದ್ದ ಮುಸಾವೀರ್ ಹಾಗೂ ಸ್ಫೋಟಕ್ಕೆ ರೂಪುರೇಷೆ ಸಿದ್ಧಪಡಿಸಿದ ಅಬ್ದುಲ್ ಮತೀನ್ ತಾಹ ಇಬ್ಬರು ತೀರ್ಥಹಳ್ಳಿಯವರು ಎಂದು ತಿಳಿದುಬಂದಿದೆ.
ಲೋಕಸಭಾ ಚುನಾವಣೆಗೆ 2 ನೇ ಹಂತದಲ್ಲಿ ಮತದಾನ ನಡೆಯುವ ಕ್ಷೇತ್ರಗಳಲ್ಲಿ ಹಲವು ಅಭ್ಯರ್ಥಿಗಳು ಇಂದು ನಾಮಪತ್ರ ಸಲ್ಲಿಸಿದರು. ಶಿವಮೊಗ್ಗದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕೆಎಸ್ ಈಶ್ವರಪ್ಪ ನಾಮಪತ್ರ ಸಲ್ಲಿಸಿದರೆ, ಬಳ್ಳಾರಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಂಡೂರು ಶಾಸಕ ತುಕಾರಾಮ್, ಕಲಬುರಗಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಧಕೃಷ್ಣ ದೊಡ್ಡಮನಿ ನಾಮಪತ್ರ ಸಲ್ಲಿಸಿದರು. 2ನೇ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳಿಗೆ ಮೇ 7ರಂದು ಮತದಾನ ನಡೆಯಲಿದೆ.
ಮಂಗಳೂರಿನಲ್ಲಿ ಅಡ್ಯಾರ್ ಎಳನೀರು ಮತ್ತು ನ್ಯಾಚುರಲ್ ಐಸ್ ಕ್ರೀಂ ಮಾರಾಟ ಸಂಸ್ಥೆಯಾದ ಬೊಂಡ ಫ್ಯಾಕ್ಟರಿ'ಯ ಎಳನೀರು ಸೇವಿಸಿ 137 ಮಂದಿ ಅಸ್ವಸ್ಥರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಫ್ಯಾಕ್ಟರಿಯನ್ನು ಬಂದ್ ಮಾಡುವಂತೆ ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ತಿಮ್ಮಯ್ಯ ಆದೇಶಿಸಿದ್ದಾರೆ. ಏಪ್ರಿಲ್ 8ರಂದು ಬೊಂಡ ಫ್ಯಾಕ್ಟರಿ ಎಳನೀರು ಖರೀದಿಸಿದ ಕಣ್ಣೂರು ಮತ್ತು ತುಂಬೆ ನಿವಾಸಿಗಳು ಮರುದಿನ ಬೆಳಿಗ್ಗೆ ವಾಂತಿ-ಭೇದಿಯಾಗಿ ತೀವ್ರವಾಗಿ ಅಸ್ವಸ್ಥರಾಗಿದ್ದರು. 137 ಮಂದಿ ಪೈಕಿ 84 ಮಂದಿ ಹೊರರೋಗಿಗಳಾಗಿ ಚಿಕಿತ್ಸೆ ಪಡೆದರೆ 53 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಲ್ಲಿಯವರೆಗೆ ಸುಮಾರು 23 ರೋಗಿಗಳನ್ನು ಡಿಸ್ಚಾರ್ಜ್ ಮಾಡಲಾಗಿದೆ. ಎಲ್ಲಾ ರೋಗಿಗಳ ಆರೋಗ್ಯ ಸ್ಥಿರವಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರು ಸೇರಿದಂತೆ ರಾಜ್ಯದ ಇತರ ಭಾಗಗಳಲ್ಲಿನ ನೀರಿನ ಬಿಕ್ಕಟ್ಟು ತಲೋರಿದ್ದು, ಪರಿಸ್ಥಿತಿ ನಿಭಾಯಿಸಲು ರಾಜ್ಯ ಸರ್ಕಾರ ಸಂಸ್ಕರಿಸಿದ ನೀರಿನ ಬಳಕೆಗೆ ಮಾರ್ಗಸೂಚಿಗಳನ್ನು ರೂಪಿಸಿದೆ. ವಸತಿ ಸಮುಚ್ಚಯಗಳು ಕನಿಷ್ಠ ಶೇ.50 ಸಂಸ್ಕರಿಸಿದ ನೀರನ್ನು ಬಳಕೆ ಮಾಡಬೇಕು. ಉಳಿದ ನೀರನ್ನು ವಾಣಿಜ್ಯ ಉದ್ದೇಶಗಳಿಗೆ ಬಳಕೆ ಮಾಡಬಹುದು ಎಂದು ಹೇಳಿದೆ. ಸಂಸ್ಕರಿಸಿದ ನೀರನ್ನು ನಿರ್ಮಾಣ, ಕೈಗಾರಿಕೆ, ತೋಟಗಾರಿಕೆ ಮತ್ತಿತರ ಉದ್ದೇಶಗಳಿಗೆ ಬಳಸಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಈ ಸಂಬಂಧ ಏಪ್ರಿಲ್ 3 ರಂದು ಗೆಜೆಟ್ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ.
ವಿಧಾನ ಪರಿಷತ್ ಸದಸ್ಯ ಟಿ.ಎ. ಶರವಣ ಅವರಿಗೆ ಲಘು ಹೃದಯಾಘಾತವಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಶರವಣ ಅವರು ಚಿಕಿತ್ಸೆ ಪಡೆಯುತ್ತಿದ್ದು, ಅಭಿಮಾನಿಗಳೂ ಹಾಗೂ ಆತ್ಮೀಯರು ಆತಂಕ ಪಡುವ ಅಗತ್ಯವಿಲ್ಲವೆಂದು ಟ್ವೀಟ್ ಮೂಲಕ ಟಿ.ಎ.ಶರವಣ ತಿಳಿಸಿದ್ದಾರೆ. ಮತ್ತೊಂದೆಡೆ, ನಗರದ ನಾಯಂಡಹಳ್ಳಿ ಫ್ಲೈಓವರ್ ಮೇಲಿನಿಂದ ಜಿಗಿದು ನವ ವಿವಾಹಿತನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ವರದಿಯಾಗಿದೆ. ಮೃತ ನವೀನ್ ಜ್ಞಾನಭಾರತಿ ನಿವಾಸಿಯಾಗಿದ್ದು, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL)ದಲ್ಲಿ ಗುತ್ತಿಗೆ ನೌಕರನಾಗಿದ್ದ. ನವೀನ್ ಇಂದು ಬೆಳಗ್ಗೆ 8:20ರ ಸುಮಾರಿಗೆ ಫ್ಲೈಓವರ್ ಮೇಲೆ ಬೈಕ್ ಪಾರ್ಕ್ ಮಾಡಿ, ಏಕಾಏಕಿ ಕೆಳಗೆ ಜಿಗಿದಿದ್ದಾನೆ.
ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 12.5 ಕೋಟಿ ಮೌಲ್ಯದ ಚಿನ್ನ, ಮೌಲ್ಯಯುತ ವಸ್ತುಗಳನ್ನು ದಾವಣಗೆರೆಯಲ್ಲಿ ವಶಪಡಿಸಿಕೊಂಡಿದ್ದಾರೆ. ನಗರದ ಲೋಕಿಕೆರೆ ಚೆಕ್ಪೋಸ್ಟ್ ಬಳಿ ಅಪಾರ ಪ್ರಮಾಣದ ಚಿನ್ನಾಭರಣಗಳನ್ನು ಜಪ್ತಿ ಮಾಡಲಾಗಿದೆ. ಅಲ್ಲದೆ, ರಾಮನಗರದಲ್ಲಿ 30 ಕೆಜಿಗೂ ಅಧಿಕ ಪ್ರಮಾಣದ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ. ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ವಾಹನಗಳನ್ನು ತಪಾಸಣೆ ನಡೆಸುತ್ತಿದ್ದ ವೇಳೆ ಮಲಬಾರ್ ಗೋಲ್ಡ್ & ಡೈಮಂಡ್ ಕಂಪನಿಗೆ ಸೇರಿದ್ದು ಎನ್ನಲಾದ ವಾಹನದಲ್ಲಿ ಚಿನ್ನ, ಬೆಳ್ಳಿ ಪತ್ತೆಯಾಗಿದೆ.
Advertisement