ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ಪ್ರಮುಖ ಆರೋಪಿ ಬಾಂಬರ್ ಮುಸ್ಸಾವಿರ್ ಹುಸೇನ್ ಶಾಜಿಬ್ ಮತ್ತು ಸ್ಫೋಟದ ಮಾಸ್ಟರ್ ಮೈಂಡ್ ಅಬ್ದುಲ್ ಮತೀನ್ ತಾಹಾನನ್ನು ನ್ಯಾಯಾಧೀಶರು 10 ದಿನಗಳ ಕಾಲ NIA ವಶಕ್ಕೆ ನೀಡಿದ್ದಾರೆ. ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟಿಸಿ ಪಶ್ಚಿಮ ಬಂಗಾಳದ ಕೊಲ್ಕತ್ತಾದಲ್ಲಿ ತಲೆಮರೆಸಿಕೊಂಡಿದ್ದ ಉಗ್ರರನ್ನು ಎನ್ಐಎ ಅಧಿಕಾರಿಗಳು ನಿನ್ನೆ ಬಂಧಿಸಿ ಬೆಂಗಳೂರಿಗೆ ಕರೆತಂದು ಮಡಿವಾಳದ ಎಫ್ಎಸ್ಎಲ್ ಸೆಂಟರ್ ಬಳಿಯಿರುವ ಇಂಟರಾಗೇಷನ್ ಸೆಲ್ನಲ್ಲಿ ವಿಚಾರಣೆ ನಡೆಸಿದರು. ಬಳಿಕ ಇಂದು ಬೆಳಿಗ್ಗೆ ಕೋರಮಂಗಲದ ರಾಷ್ಟ್ರೀಯ ಕ್ರೀಡಾ ಗ್ರಾಮ ಸಮುಚ್ಚಯದಲ್ಲಿರುವ ನಿವಾಸದಲ್ಲಿ ನ್ಯಾಯಾಧೀಶರ ಮುಂದೆ ಉಗ್ರರನ್ನು ಹಾಜರುಪಡಿಸಿದ್ದರು.
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಗಳು ಚೆಕ್ಪೋಸ್ಟ್ಗಳಲ್ಲಿ ಹದ್ದಿನ ಕಣ್ಣಿಟ್ಟಿದ್ದಾರೆ. ಬೆಂಗಳೂರಿನ ಜಯನಗರದಲ್ಲಿ ಕಾರೊಂದರಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1.40 ಕೋಟಿ ರೂಪಾಯಿ ಹಣವನ್ನು ಚುನಾವಣಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಜಯನಗರದಲ್ಲಿ ಬೆಂಜ್ ಕಾರಿನಲ್ಲಿ ಕೋಟಿ ಕೋಟಿ ಹಣವನ್ನು ಸಾಗಿಸಲಾಗುತ್ತಿದೆ ಎಂದು ಅಪರಿಚಿತರು ಕರೆ ಮಾಡಿದ ಹಿನ್ನೆಲೆಯಲ್ಲಿ ಅಧಿಕಾರಿಗಳು ಕೂಡಲೇ ಎರಡು ಐಷಾರಾಮಿ ಕಾರುಗಳನ್ನು ನಿಲ್ಲಿಸಿ ಪರಿಶೀಲನೆ ಮಾಡುವಾಗ ಕೋಟಿ ಕೋಟಿ ಹಣ ಪತ್ತೆಯಾಗಿದೆ. ಕಂತೆ ಕಂತೆ ಹಣ ಸಿಗುತ್ತಿದ್ದಂತೆ ಕಾರಿನಲ್ಲಿದ್ದ ಐವರು ನಾಪತ್ತೆಯಾಗಿದ್ದಾರೆ. ಸದ್ಯ ವಶಕ್ಕೆ ಪಡೆದಿರುವ ಹಣವನ್ನು ಜಯನಗರ ಪೊಲೀಸ್ ಠಾಣೆಗೆ ಕೊಂಡೊಯ್ಯಲಾಗಿದೆ.
ಲೋಕಸಭಾ ಚುನಾವಣೆಯಲ್ಲಿ 85 ವರ್ಷಕ್ಕಿಂತ ಮೇಲ್ಪಟ್ಟ ಮತದಾರರು ಹಾಗೂ ಅಂಗವಿಕಲ ಮತದಾರರಿಗೆ ಇಂದಿನಿಂದ ಮನೆಯಿಂದಲೇ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ಒಟ್ಟು 49,648 ಮತದಾರರು ನೋಂದಾಯಿಸಿಕೊಂಡಿದ್ದಾರೆ. ಇಂದಿನಿಂದ ಏಪ್ರಿಲ್ 18ರವರಗೆ ಮೊದಲ ಹಂತದ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ. ಈಗಾಗಲೇ ನೋಂದಾಯಿಸಿಕೊಂಡವರಿಗೆ ಮಾತ್ರ ಮನೆಯಿಂದ ಮತದಾನ ಮಾಡಲು ಅವಕಾಶ ನೀಡಲಾಗುತ್ತಿದೆ. ಚುನಾವಣಾ ಸಿಬ್ಬಂದಿ ಮನೆಗಳಿಗೆ ತೆರಳಿ ಬ್ಯಾಲೆಟ್ ಪೇಪರ್ ಮೂಲಕ ಗೌಪ್ಯ ಮತದಾನ ಮಾಡಿಸುತ್ತಾರೆ. ಕಳೆದ ಕರ್ನಾಟಕ ವಿಧಾನಸಭೆ ಚುನಾವಣೆ ವೇಳೆ 80 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನ ಮಾಡುವ ಅವಕಾಶ ಕಲ್ಪಿಸಿತ್ತು. ಇದನ್ನು ಲೋಕಸಭಾ ಚುನಾವಣೆಯಲ್ಲಿ ದೇಶದಾದ್ಯಂತ ವಿಸ್ತರಣೆ ಮಾಡಲಾಗಿದ್ದು, 85 ವರ್ಷಕ್ಕೆ ಹೆಚ್ಚಿಸಲಾಗಿದೆ.
ಬೆನ್ನಿಗಾನಹಳ್ಳಿ ನಿಲ್ದಾಣದ ನಮ್ಮ ಮೆಟ್ರೋ ಸ್ಕೈವಾಕ್'ನಲ್ಲಿ ಕುಡಿದ ಮತ್ತಿನಲ್ಲಿದ್ದ ವ್ಯಕ್ತಿಯೊಬ್ಬ ಕಾಲೇಜು ಯುವತಿಯೊಂದಿಗೆ ಅನುಚಿತವಾಗಿ ವರ್ತಿಸಿರುವ ಘಟನೆ ನಡೆದಿದೆ. 32 ವರ್ಷದ ವ್ಯಕ್ತಿ ಕಾಲೇಜು ವಿದ್ಯಾರ್ಥಿನಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ. ವಿದ್ಯಾರ್ಥಿನಿ ಮೆಟ್ರೋ ಪ್ರವೇಶ ದ್ವಾರದ ಬಳಿ ಬಂದು ಮೆಟ್ರೋ ಭದ್ರತಾ ಸಿಬ್ಬಂದಿಗೆ ಮಾಹಿತಿ ನೀಡಿದ್ದಾಳೆ. ಈ ವೇಳೆ ಮೆಟ್ರೋ ಸಿಬ್ಬಂದಿಗಳು ಆತನನ್ನು ಹಿಡಿದಿದ್ದು, ರಾಮಮೂರ್ತಿ ನಗರ ಠಾಣೆಗೆ ಒಪ್ಪಿಸಿದ್ದರು. ಈ ಸಂಬಂಧ ವಿದ್ಯಾರ್ಥಿನಿ ರಾಮಮೂರ್ತಿ ನಗರದ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಆದರೆ ಎಫ್ಐಆರ್ ಬೇಡ ಎಂದು ವಿದ್ಯಾರ್ಥಿನಿ ಹೇಳಿದ ಹಿನ್ನೆಲೆಯಲ್ಲಿ ಎಚ್ಚರಿಕೆ ನೀಡಿ ಆರೋಪಿಯನ್ನು ಬಿಡುಗಡೆ ಮಾಡಲಾಗಿದೆ.
ಬೆಂಗಳೂರಿನಲ್ಲಿ ಭಿಕ್ಷಾಟನೆ ಮಾಡುವವರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿರುವ ಸಿಸಿಬಿ ಪೊಲೀಸರು, 47 ಮಕ್ಕಳನ್ನು ರಕ್ಷಿಸಿ, 37 ಮಂದಿ ಮಹಿಳೆಯರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಸಿಸಿಬಿಯ ಮಹಿಳಾ ಸಂರಕ್ಷಣಾ ದಳ, ವಿಶೇಷ ವಿಚಾರಣ ದಳ, ಪುಲಕೇಶಿ ನಗರ ಉಪ ವಿಭಾಗದ ಪೊಲೀಸರು ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಜಂಟಿಯಾಗಿ ಈ ಕಾರ್ಯಾಚರಣೆ ನಡೆಸಿದ್ದಾರೆ. ಪುಲಕೇಶಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಹಜೀಸರ್ ಇಸ್ಮಾಯಿಲ್ ಸೈಟ್ ಮಜೀದ್ ಬಳಿ ಸೇರಿದಂತೆ ಸುತ್ತಮತ್ತಲ ಸ್ಥಳಗಳ ಬೀದಿ ಬದಿಯಲ್ಲಿ ಈ ಮಕ್ಕಳು ಭಿಕ್ಷಾಟಣೆಯಲ್ಲಿ ತೊಡಗಿದ್ದರು. ಮಕ್ಕಳನ್ನು ಭಿಕ್ಷಾಟನೆಯಲ್ಲಿ ತೊಡಗಿಸಿದ್ದ 37 ಮಹಿಳೆಯರನ್ನು ವಶಕ್ಕೆ ಪಡೆದು ಮಕ್ಕಳ ಕಲ್ಯಾಣ ಸಮಿತಿ ಎದುರು ಹಾಜರುಪಡಿಸಲಾಗಿದೆ.
ವಿಜಯಪುರದ ಬಬಲೇಶ್ವರ ತಾಲೂಕಿನ ಅರ್ಜುಣಗಿ ಗ್ರಾಮದ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತರನ್ನು ರವಿನಾಥ ಸುನಿಲಾಲ್ ಪತ್ತಾರ, ಅರ್ಜುನ್ ಕುಶಾಲ್ ಸಿಂಗ್ ರಜಪೂತ, ಪುಷ್ಪಾ ಹಾಗೂ ಮೇಘರಾಜ್ ರಜಪೂತ ಎಂದು ಗುರುತಿಸಲಾಗಿದೆ. ಅರ್ಜುನ್ ಸಿಂಗ್ ಕುಟುಂಬದೊಂದಿಗೆ ಕಾರಿನಲ್ಲಿ ವಿಜಯಪುರದಿಂದ ಜಮಖಂಡಿಗೆ ತೆರಳುತ್ತಿದ್ದರು. ಈ ವೇಳೆ ಜಮಖಂಡಿಯಿಂದ ಬರುತ್ತಿದ್ದ ಟ್ರಕ್ಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಟ್ರಕ್ ಗುದ್ದಿದ ರಭಸಕ್ಕೆ ಕಾರಿನಲ್ಲಿದ್ದ ನಾಲ್ವರೂ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
Advertisement