ಲೋಕಸಭಾ ಚುನಾವಣೆ: ಮತದಾನದ ದಿನ ರಜೆ ನೀಡದವರ ವಿರುದ್ಧ ಕ್ರಮ- ಮನೋಜ್‌ ಕುಮಾರ್‌ ಮೀನಾ

ಮತದಾನ ಪ್ರಮಾಣ ಹೆಚ್ಚಳ ಮಾಡುವ ಉದ್ದೇಶದಿಂದ ರಾಜ್ಯದಲ್ಲಿ ಮತದಾನವಾಗುವ ದಿನಗಳಾದ ಏಪ್ರಿಲ್ 26 ಮತ್ತು ಮೇ.7 ರಂದು ಸರ್ಕಾರ ರಜೆ ಘೋಷಣೆ ಮಾಡಿದೆ. ಸರ್ಕಾರದ ಆದೇಶದ ನಡುವಲ್ಲೂ ರಜೆ ನೀಡಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರು ಎಚ್ಚರಿಕೆ ನೀಡಿದ್ದಾರೆ.
ಮನೋಜ್‌ ಕುಮಾರ್‌ ಮೀನಾ
ಮನೋಜ್‌ ಕುಮಾರ್‌ ಮೀನಾ

ಬೆಂಗಳೂರು: ಮತದಾನ ಪ್ರಮಾಣ ಹೆಚ್ಚಳ ಮಾಡುವ ಉದ್ದೇಶದಿಂದ ರಾಜ್ಯದಲ್ಲಿ ಮತದಾನವಾಗುವ ದಿನಗಳಾದ ಏಪ್ರಿಲ್ 26 ಮತ್ತು ಮೇ.7 ರಂದು ಸರ್ಕಾರ ರಜೆ ಘೋಷಣೆ ಮಾಡಿದೆ. ಸರ್ಕಾರದ ಆದೇಶದ ನಡುವಲ್ಲೂ ರಜೆ ನೀಡಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರು ಎಚ್ಚರಿಕೆ ನೀಡಿದ್ದಾರೆ.

ಲೋಕಸಭಾ ಚುನಾವಣೆಯ ಅಂಗವಾಗಿ ಬೆಂಗಳೂರು ಪ್ರೆಸ್ ಕ್ಲಬ್ ಭಾನುವಾರ ಆಯೋಜಿಸಿದ್ದ ಮಾಧ್ಯಮ ಸಂವಾದದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯದ ಸರಾಸರಿ ಮತದಾನಕ್ಕಿಂತ ಕಡಿಮೆ ಮತದಾನವಾಗಿರುವ ಕ್ಷೇತ್ರಗಳಲ್ಲಿ ಮನೆ ಮನೆಗೆ ತೆರಳಿ ಮತದಾನದ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಐಟಿ-ಬಿಟಿ ಪ್ರಮುಖ ಸಂಸ್ಥೆಗಳಿಗೂ ಸಿಬ್ಬಂದಿಗೆ ರಜೆ ನೀಡಿ ಮತದಾನಕ್ಕೆ ಪ್ರೋತ್ಸಾಹ ನೀಡುವಂತೆ ಕೋರಲಾಗಿದೆ. ಈ ಸಂಸ್ಥೆಗಳು ಎರಡು ಮತದಾನದ ದಿನದಂದು ರಜೆ ನೀಡದಿರುವುದು ಕಂಡುಬಂದರೆ ಕಾರ್ಮಿಕ ಕಾಯ್ದೆ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾರ್ತಿಯಲ್ಲಿಯಲ್ಲಿ 1,800 ಮತಗಟ್ಟೆಗಳ ಮತ್ತು 35% ಅಥವಾ ಅದಕ್ಕಿಂತ ಕಡಿಮೆ ಮತದಾನವಾಗಿರುವ ರಾಜ್ಯ ವ್ಯಾಪ್ತಿಯಲ್ಲಿ 5,000 ಮತಗಟ್ಟೆಗಳನ್ನು ಗುರುತಿಸಿದ್ದೇವೆ. ಎಲ್ಲಾ ಕಂಪನಿಗಳ ಮುಖ್ಯಸ್ಥರಿಗೆ ತಮ್ಮ ಸಿಬ್ಬಂದಿಗೆ ಮತ ಚಲಾಯಿಸುವಂತೆ ತಿಳಿಸಲು ಹಾಗೂ ಅಗತ್ಯವಿದ್ದರೆ ವ್ಯವಸ್ಥೆ ಮಾಡಲು ಮನವಿ ಮಾಡುತ್ತಿದ್ದೇವೆ. ಕಂಪನಿಗಳು ಮನೆಯಿಂದ ಕೆಲಸ ಮಾಡಲು ಸಿಬ್ಬಂದಿಗಳಿಗೆ ಸೂಚಿಸಬಾರದು. ರಜೆ ಎಂದರೆ ರಜೆ. ಸರಕಾರದ ಆದೇಶವನ್ನು ಯಾರಾದರೂ ಉಲ್ಲಂಘಿಸಿರುವುದು ಕಂಡು ಬಂದರೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಮನೆ ಮನೆಗೆ ತೆರಳ ಮತದಾನದ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ಗಳು ಮತ್ತು ರೆಸಿಡೆಂಟ್ ವೆಲ್‌ಫೇರ್ ಅಸೋಸಿಯೇಷನ್‌ಗಳೊಂದಿಗೆ ನಿಕಟವಾಗಿ ಕೆಲಸ ಮಾಡುತ್ತಿದ್ದೇವೆ. ಮತದಾನ ಒಬ್ಬ ವ್ಯಕ್ತಿಯ ಜವಾಬ್ದಾರಿಯಾಗಿದೆ. ಮತದಾನ ಮಾಡಲೇಬೇಕೆಂದು ನಾವು ಯಾರನ್ನೂ ಒತ್ತಾಯಿಸಲು ಸಾಧ್ಯವಿಲ್ಲ. ಆದ್ದರಿಂದ ಮೊದಲು ಮತದಾನ ಮಾಡಿ ನಂತರ ರಜೆ ಆನಂದಿಸುವಂತೆ ಜನರಲ್ಲಿ ಮನವಿ ಮಾಡುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಮಾಲ್‌ಗಳು, ಥಿಯೇಟರ್‌ಗಳು ಮತ್ತು ಜನಸಂದಣಿ ಇರುವ ಇತರ ಸ್ಥಳಗಳಿಗೆ ಭೇಟಿ ನೀಡಿ ಮತದಾನದ ಬಗ್ಗೆ ಜಾಗೃತಿ ಮೂಡಿಸಲು ಬ್ಯಾನರ್‌ಗಳನ್ನು ಹಾಕುತ್ತೇವೆ. ವಿದ್ಯುತ್ ಸರಬರಾಜು ನಿಗಮಗಳು (ಎಸ್ಕಾಮ್‌ಗಳು) ಮತ್ತು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯುಎಸ್‌ಎಸ್‌ಬಿ) ನಂತಹ ನೀರು ಸರಬರಾಜು ಏಜೆನ್ಸಿಗಳಿಗೆ ಗ್ರಾಹಕರಿಗೆ ಮತದಾನದ ಬಗ್ಗೆ ಸಂದೇಶಗಳನ್ನು ಕಳುಹಿಸುವಂತೆ ಮನವಿ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.

ಮನೋಜ್‌ ಕುಮಾರ್‌ ಮೀನಾ
ಚುನಾವಣೆ ಎಂಬುದು ಅತಿದೊಡ್ಡ ಪ್ರಕ್ರಿಯೆ: ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ (ಸಂದರ್ಶನ)

ಇದೇ ವೇಳೆ ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಚುನಾವಣೆ ಬಹಿಷ್ಕರಿಸುವುದಾಗಿ ಕೆಲವರು ಹೇಳುತ್ತಿರುವ ವಿಚಾರದ ಕುರಿತು ಮಾತನಾಡಿದ ಅವರು, ಇಂತಹ ಸಮಸ್ಯೆಗಳು ಗಮನಕ್ಕೆ ಬಂದರೆ ತಕ್ಷಣವೇ ತಂಡವನ್ನು ಸ್ಥಳಕ್ಕೆ ಕಳುಹಿಸಲಾಗುತ್ತದೆ. ಅಧಿಕಾರಿಗಳು ಜನರೊಂದಿಗೆ ಮಾತನಾಡುತ್ತಾರೆ. ಮತದಾನ ಬಹಿಷ್ಕಾರದಿಂದ ಏನೂ ಪ್ರಯೋಜನವಾಗುವುದಿಲ್ಲ ಎಂಬುದನ್ನು ವಿವರಿಸಲಾಗುತ್ತದೆ. ನಾಗರಿಕರಿಗೆ ಮತದಾನದ ಶಕ್ತಿಯ ಬಗ್ಗೆಯೂ ತಿಳಿಸಲಾಗಿದೆ. ಸಂಬಂಧಪಟ್ಟ ಏಜೆನ್ಸಿಗಳೊಂದಿಗೂ ಮಾತುಕತೆ ನಡೆಸಲಾಗುತ್ತದೆ. ಈ ವೇಳೆ ಜನರ ಸಮಸ್ಯೆಗಳನ್ನು ಪರಿಹರಿಸಲು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ. ನಂತರ ಜನರು ನಮ್ಮ ಮನಸ್ಸು ಬದಲಾಯಿಸುತ್ತಾರೆಂದರು.

ಮಾರ್ಚ್ 16 ರಂದು ಚುನಾವಣಾ ನೀತಿ ಸಂಹಿತೆ (ಎಂಸಿಸಿ) ಘೋಷಿಸಿದಾಗಿನಿಂದ ಚುನಾವಣಾ ಅಕ್ರಮ ತಡೆ ಕಾರ್ಯಾಚರಣೆಯಲ್ಲಿ ರೂ345 ಕೋಟಿ ಮೌಲ್ಯದ ನಗದು, ಚಿನ್ನಾಭರಣ ಮತ್ತು ಇತರ ಸ್ವತ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಪೈಕಿ ಶೇಕಡ 49ರಷ್ಟು ಮೌಲ್ಯದ ಸ್ವತ್ತುಗಳನ್ನು ಸೂಕ್ತ ದಾಖಲೆಗಳನ್ನು ಆಧರಿಸಿ ವಾರಸುದಾರರಿಗೆ ಹಿಂದಿರುಗಿಸಲಾಗಿದೆ ಎಂದರು.

2023ರ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಮಾದರಿ ನೀತಿಸಂಹಿತೆ ಉಲ್ಲಂಘನೆ ಆರೋಪದಡಿ ದಾಖಲಿಸಿದ್ದ ಪ್ರಕರಣಗಳ ಪೈಕಿ ಶೇ 90ರಷ್ಟರಲ್ಲಿ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಲಾಗಿದೆ. ಶೇ 40ರಷ್ಟು ಪ್ರಕರಣಗಳಲ್ಲಿ ಆರೋಪಿಗಳಿಗೆ ಶಿಕ್ಷೆಯಾಗಿದೆ ಎಂದು ತಿಳಿಸಿದರು.

ಮತದಾನದ ದಿನ ನೆರೆಯ ರಾಜ್ಯಗಳಿಗೆ ಹೊಂದಿಕೊಂಡಿರುವ ರಾಜ್ಯದ ಗಡಿಗಳನ್ನು ಮುಚ್ಚಲಾಗುವುದು. ಏ. 19ರಂದು ತಮಿಳುನಾಡಿನಲ್ಲಿ ಮತದಾನ ನಡೆಯಲಿದ್ದು, ಆ ದಿನ ಕೂಡ ತಮಿಳುನಾಡಿಗೆ ಹೊಂದಿಕೊಂಡಿರುವ ಗಡಿಗಳನ್ನು ಮುಚ್ಚಲಾಗುವುದು ಎಂದರು.

ಮನೋಜ್‌ ಕುಮಾರ್‌ ಮೀನಾ
2023ರ ಜನವರಿ 5ಕ್ಕೆ ಮತದಾರರ ಅಂತಿಮ ಪಟ್ಟಿ ಬಿಡುಗಡೆ: ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ

ಮತದಾನ ಗೌಪ್ಯತೆ ಉಲ್ಲಂಘನೆಯಾಗಿಲ್ಲ

ಹಿರಿಯ ನಾಗರಿಕರ ಮತದಾನದ ವೇಳೆ ಗೌಪ್ಯತೆ ಮತ್ತು ಮತದಾರರಿಗೆ ಪ್ರಭಾವ ಬೀರುವ ಯಾವುದೇ ಚಟುವಟಿಕೆ ನಡೆದಿಲ್ಲ ಎಂದು ಇದೇ ವೇಳೆ ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳು ಸ್ಪಷ್ಟಪಡಿಸಿದರು.

ಶನಿವಾರ ರಾಜಾಜಿನಗರದ ಶ್ರೀರಾಮಮಂದಿರ ವಾರ್ಡ್ ವ್ಯಾಪ್ತಿಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರ ಮತದಾನದ ವೇಳೆ ಮತದಾನದ ಗೌಪ್ಯತೆ ಕಾಪಾಡಿಕೊಳ್ಳಲಾಗಿಲ್ಲ ಮತ್ತು ಮತದಾರರಿಗೆ ಪ್ರಭಾವ ಬೀರಲಾಗಿದೆ ಎಂದು ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯ ಏಜೆಂಟರು ದೂರು ನೀಡಿದ್ದರು.

ಈ ಕುರಿತು ತುರ್ತಾಗಿ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ನಗರ ಜಿಲ್ಲಾ ಚುನಾವಣಾಧಿಕಾರಿಗೆ ಸೂಚನೆ ನೀಡಲಾಗಿತ್ತು. ಇದನ್ನಾಧರಿಸಿ ಪರಿಶೀಲನೆ ನಡೆಸಿರುವ ಜಿಲ್ಲಾ ಚುನಾವಣಾಧಿಕಾರಿಗಳು ವರದಿಯನ್ನು ಸಲ್ಲಿಸಿದ್ದರು. ಇದರಲ್ಲಿ ವಿಡಿಯೋ ಚಿತ್ರಿಕರಣ, ಛಾಯಾಚಿತ್ರಗಳ ಪರಿಶೀಲನೆ ಹಾಗೂ ಮೈಕ್ರೋ ಅಬ್ಸರ್ವರ್ ವರದಿಯ ಆಧರಿಸಿ ಮತದಾನದ ಗೌಪ್ಯತೆ ಉಲ್ಲಂಘನೆ ಆಗಿಲ್ಲ ಎಂಬುದಾಗಿ ತಿಳಿಸಿದರು.

ಒಂದು ಮನೆಯಿಂದ ಇನ್ನೊಂದು ಮನೆಗೆ ಮತದಾನದ ಪ್ರಕ್ರಿಯೆ ಮಾಡುವಾಗ ಪಿಆರ್‌ಒ ಚುನಾವಣಾ ಗುರುತಿನ ಚೀಟಿ ಕಳೆದುಹೋಗಿದ್ದು, ಇನ್ನುಳಿದ ಪೋಲಿಂಗ್ ಅಧಿಕಾರಿಗಳು ಗುರುತಿನ ಚೀಟಿಯನ್ನು ಧರಿಸಿಕೊಂಡು ಕರ್ತವ್ಯ ನಿರ್ವಹಿಸಿದ್ದಾರೆ. ಪಿಆರ್‌ಒಗೆ ತಕ್ಷಣ ಮತ್ತೊಂದು ಚುನಾವಣಾ ಗುರುತಿನ ಚೀಟಿಯನ್ನು ವಿತರಿಸಲಾಗಿದೆ. ಅಂದು ನಡೆದ ಮತದಾನದ ಸಂದರ್ಭದಲ್ಲಿ ಚುನಾವಣಾ ಕರ್ತವ್ಯಗಳನ್ನು ನಿಯಮಾನುಸಾರ ನಿರ್ವಹಿಸಿ, ಯಾವುದೇ ರೀತಿಯ ಮತದಾನ ಗೌಪ್ಯತೆಯನ್ನು ಉಲ್ಲಂಘನೆ ಮಾಡಿಲ್ಲ. ಯಾವುದೇ ಪಕ್ಷದ ಚುನಾವಣೆ ಅಭ್ಯರ್ಥಿಗಳ ಏಜೆಂಟರ್‌ಗಳ ಜೊತೆಗೂಡಿ ಮತದಾರರಿಗೆ ಪ್ರಭಾವ ಬೀರುವಂತಹ ಪ್ರಕ್ರಿಯೆಗಳು ನಡೆಯದೇ ಇರುವುದನ್ನ ವಿಡಿಯೋ ತುಣುಕುಗಳಿಂದ ಖಚಿತಪಡಿಸಿಕೊಳ್ಳಲಾಗಿದೆ ಎಂದರು.

ಈ ಹಿನ್ನಲೆಯಲ್ಲಿ ದೂರುದಾರರು ಹೇಳಿರುವಂತೆ ಯಾವುದೇ ಮತದಾನದ ಅಧಿಕಾರಿ/ನೌಕರರು ಹಾಗೂ ಕಂದಾಯ ನಿರೀಕ್ಷಕರು ಹಾಗೂ ಮೈಕ್ರೋ ಅಬ್ಸರ್‌ವರ್ ವಿರುದ್ದ ಕ್ರಮ ತಗೆದುಕೊಳ್ಳುವ ಅಂಶ ಕಂಡು ಬರದೇ ಇರುವುದರಿಂದ ದೂರುದಾರರ ದೂರ ಅರ್ಜಿಯನ್ನು ಮುಕ್ತಾಯಗೊಳಿಸಿದೆ ಎಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com