ಮಡಿಕೇರಿ: ಕೊಡಗು ಜಿಲ್ಲೆಯ ಶ್ರೀಮಂಗಲ ವನ್ಯಜೀವಿ ಅಭಯಾರಣ್ಯ ವ್ಯಾಪ್ತಿಯಲ್ಲಿ ಸೋಮವಾರ ಆನೆ ದಾಳಿಗೆ 63 ವರ್ಷದ ವ್ಯಕ್ತಿಯೊಬ್ಬರು ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಬೀರುಗ ಕಾಫಿ ಎಸ್ಟೇಟ್ನಲ್ಲಿ ಬೆಳಗ್ಗೆ 6.30ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅರಣ್ಯ ಇಲಾಖೆಯ ಪ್ರಕಾರ, ಅಯ್ಯಮಾಡ ಮಾದಯ್ಯ ಎಂಬುವವರು ಕಾಫಿ ಎಸ್ಟೇಟ್ ಬಳಿ ಬೆಳಗಿನ ವಾಕಿಂಗ್ ಹೋಗಿದ್ದು, ಏಕಾಏಕಿ ಎದುರಿನಿಂದ ಬಂದ ಆನೆ ದಾಳಿ ಮಾಡಿದೆ. ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಮಡಿಕೇರಿ ವನ್ಯಜೀವಿ ವಿಭಾಗದ ಶ್ರೀಮಂಗಲ ವನ್ಯಜೀವಿ ಅಭಯಾರಣ್ಯ ವ್ಯಾಪ್ತಿಯಲ್ಲಿ ಆನೆ ದಾಳಿಯಿಂದ ವ್ಯಕ್ತಿಯೊಬ್ಬರು ಸಾವಿಗೀಡಾಗಿದ್ದಾರೆ ಎಂಬ ಮಾಹಿತಿ ನಮಗೆ ಬಂದಿತು. ನಮ್ಮ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿದರು. ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಮೃತರ ಕುಟುಂಬಕ್ಕೆ 15 ಲಕ್ಷ ರೂಪಾಯಿ ಪರಿಹಾರ ನೀಡಲಾಗಿದೆ ಎಂದಿದ್ದಾರೆ.
ಈ ಪ್ರದೇಶದಲ್ಲಿ ಜನರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ತಕ್ಷಣದ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಮತ್ತು ದಾಳಿಯಲ್ಲಿ ಭಾಗಿಯಾಗಿರುವ ಆನೆಯನ್ನು ಪತ್ತೆಹಚ್ಚಲಾಗುತ್ತಿದೆ ಎಂದು ಅಧಿಕಾರಿ ಹೇಳಿದರು.
ಖಾಸಗಿ ಉದ್ಯೋಗದಿಂದ ನಿವೃತ್ತರಾಗಿದ್ದ ಮಾದಯ್ಯ ಅವರು ಇತ್ತೀಚೆಗಷ್ಟೇ ತಮ್ಮ ಗ್ರಾಮದಲ್ಲಿ ಮನೆ ಕಟ್ಟಿಸಲೆಂದು ಬೆಂಗಳೂರಿನಿಂದ ಬಂದಿದ್ದರು. ಈ ಪ್ರದೇಶದಲ್ಲಿ ಆನೆಗಳ ಚಲನವಲನದ ಬಗ್ಗೆ ಸ್ಥಳೀಯರಿಗೆ ಎಚ್ಚರಿಕೆ ನೀಡಲಾಗಿದೆ ಎಂದು ಹಿರಿಯ ಅರಣ್ಯಾಧಿಕಾರಿ ತಿಳಿಸಿದ್ದಾರೆ.
ಘಟನೆ ನಂತರ ಸ್ಥಳೀಯ ನಿವಾಸಿಗಳಲ್ಲಿ ಭಯ ಆವರಿಸಿದ್ದು, ಆನೆಗಳ ಹಾವಳಿ ಹೆಚ್ಚಿದೆ ಎಂದು ನೋವು ತೋಡಿಕೊಂಡಿದ್ದಾರೆ.
ಭವಿಷ್ಯದಲ್ಲಿ ಮಾನವ-ಪ್ರಾಣಿ ಸಂಘರ್ಷವನ್ನು ತಪ್ಪಿಸಲು ಅರಣ್ಯ ಇಲಾಖೆಯು ಈ ಪ್ರದೇಶದಲ್ಲಿ ತೀವ್ರ ಗಸ್ತು ಮತ್ತು ಹೆಚ್ಚಿನ ಕ್ಷೇತ್ರ ಸಿಬ್ಬಂದಿಯನ್ನು ನಿಯೋಜಿಸಬೇಕೆಂದು ಒತ್ತಾಯಿಸಿ ಅವರು ಪ್ರತಿಭಟನೆ ನಡೆಸಿದರು.
Advertisement