ಬೆಂಗಳೂರು: ರಾಮನವಮಿಯ ದಿನ ಕಾರಿಲ್ಲಿ ಜೈ ಶ್ರೀರಾಮ್ ಎಂದು ಕೂಗಿದ ಮೂವರು ಹಿಂದೂಗಳ ವಿರುದ್ಧ ಅನ್ಯಕೋಮಿನ ಕೆಲವರು ಹಲ್ಲೆ ನಡೆಸಿರುವ ಘಟನೆಗೆ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಗುರುವಾರ ಸರ್ಕಾರದ ವಿರದ್ಧ ಪ್ರತಿಭಟನೆ ನಡೆಸಿತು.
ಘಟನೆಯನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಹಾಗೂ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಗುರುವಾರ ಬೆಳಗ್ಗೆ ವಿದ್ಯಾರಣ್ಯಪುರ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು. ಈ ವೇಳೆ ಸಂತ್ರಸ್ತರೂ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಈಶಾನ್ಯ ವಿಭಾಗದ ಡಿಸಿಪಿಗೆ ಮನವಿ ಪತ್ರ ಸಲ್ಲಿಸಿದ ಪ್ರತಿಭಟನಾಕಾರರು, ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ, ಪ್ರತಿಭಟನೆ ಹಿಂಪಡೆದರು.
ಪ್ರತಿಭಟನೆ ನೇತೃತ್ವ ವಹಿಸಿದ್ದ ಬಿಜೆಪಿ ಮುಖಂಡ ತಮ್ಮೇಶ್ ಗೌಡ ಮಾತನಾಡಿ, ಇಂತಹ ಘಟನೆಗಳಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಉಪ ಸಿಎಂ ಡಿ.ಕೆ.ಶಿವಕುಮಾರ್ ಅವರೇ ಹೊಣೆ. ಎಂಎಸ್ ಪಾಳ್ಯದಲ್ಲಿ ವ್ಯಾಪಕವಾಗಿ ಗಾಂಜಾ ದಂಧೆ ನಡೆಯುತ್ತಿದ್ದು, ಕೆಲವು ಆಸ್ತಿ ಮಾಲೀಕರು ತಮ್ಮ ಆಸ್ತಿಯನ್ನು ಮಾರಾಟಕ್ಕೆ ಇಟ್ಟಿದ್ದಾರೆಂದು ಹೇಳಿದ್ದಾರೆ.
ಈ ನಡುವೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಾಲ್ವರು ಆರೋಪಿಗಳ ಪೈಕಿ ಇಬ್ಬರು ಮದ್ಯದ ಅಮಲಿನಲ್ಲಿದ್ದವರು ಎಂದು ತಿಳಿದುಬಂದಿದೆ.
ಎಲ್ಲಾ ಆರೋಪಿಗಳನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಮಾದಕ ದ್ರವ್ಯ ಸೇವಿಸಿದ್ದಾರೆಯೇ ಎಂಬುದನ್ನೂ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಈ ಮಧ್ಯೆ, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಬುಧವಾರ ರಾತ್ರಿ ಸಂತ್ರಸ್ತರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ, ಘಟನೆಯನ್ನು ಖಂಡಿಸಿದರು.
ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ವಿದ್ಯಾರಣ್ಯಪುರ ಪೊಲೀಸರು ಫರ್ಮಾನ್, ಸಮೀರ್ ಮತ್ತು ಇಬ್ಬರು ಅಪ್ರಾಪ್ತರನ್ನು ಬುಧವಾರ ಬಂಧಿಸಿದ್ದು, ಆರೋಪಿಗಳು ಕೊಡಿಗೇಹಳ್ಳಿ ನಿವಾಸಿಗಳು ಎಂದು ಹೇಳಲಾಗುತ್ತಿದೆ.
Advertisement