ಹುಬ್ಬಳ್ಳಿ: ವಿದ್ಯಾರ್ಥಿನಿ ನೇಹಾ ಹಿರೇಮಠ್ ಹತ್ಯೆ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಬಿಐಗೆ ವಹಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಂಗಳವಾರ ಒತ್ತಾಯಿಸಿದರು. ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ್ ಅವರ ಕುಟುಂಬವನ್ನು ಭೇಟಿ ಮಾಡಿ ಸಾಂತ್ವನ ಹೇಳಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಈ ಪ್ರಕರಣವನ್ನು ನಡೆಸುತ್ತಿರುವ ರೀತಿ ಅವರಿಗೂ ಸಂತಸವಿಲ್ಲ, ಸರ್ಕಾರ ಪ್ರಕರಣವನ್ನು ಸಿಐಡಿಗೆ ವಹಿಸಿದೆ, ಆದರೆ ಒಬ್ಬರನ್ನು ಮಾತ್ರ ಬಂಧಿಸಲಾಗಿದೆ. ನಾವು ಇಲ್ಲಿ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರುತ್ತಿಲ್ಲ. ಆದರೆ ದುರದೃಷ್ಟವಶಾತ್, ಇದರಲ್ಲಿ ಭಾಗಿಯಾಗಿರುವ ಇತರ ವ್ಯಕ್ತಿಗಳನ್ನು ಯಾರನ್ನೂ ತನಿಖೆಗೆ ಕರೆದಿಲ್ಲ ಎಂದು ಹೇಳಿದರು.
ಇಂತಹ ದುರಂತದಲ್ಲಿ ವೈಯಕ್ತಿಕ ಕಾರಣದಿಂದ ಕೊಲೆ ನಡೆದಿದೆ ಎಂದು ಸಿಎಂ ಹೇಳುವುದು ಹೇಗೆ?, ಗೃಹ ಸಚಿವರು ಬೇರೇನೋ ಹೇಳಿಕೆ ನೀಡಿ, ಜಿಲ್ಲಾ ಉಸ್ತುವಾರಿ ಸಚಿವರು ಪರೋಕ್ಷವಾಗಿ ಅಲ್ಪಸಂಖ್ಯಾತರನ್ನು ಬೆಂಬಲಿಸುತ್ತಾರೆ ಎಂದು ಕಿಡಿಕಾರಿದರು. ಅಲ್ಪಸಂಖ್ಯಾತ ಅಥವಾ ಬಹುಸಂಖ್ಯಾತ ಎಂಬ ಪ್ರಶ್ನೆ ಏಲ್ಲಿದೆ? ಇದು ಹಾಡಹಗಲೇ ನಡೆದಿರುವ ಕೊಲೆ, ಮಹಿಳೆಯರ ಸುರಕ್ಷತೆ ಬಗ್ಗೆ ದೊಡ್ಡ ಪ್ರಶ್ನೆ ಮೂಡುವಂತಾಗಿದೆ ಎಂದರು.
ಕಳೆದ ಗುರುವಾರ ಬಿವಿಬಿ ಕಾಲೇಜಿನ ಆವರಣದಲ್ಲಿ ನೇಹಾ ಹಿರೇಮಠ (23) ಎಂಬುವರನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿತ್ತು. ಬಳಿಕ ಸ್ಥಳದಿಂದ ಪರಾರಿಯಾಗಿದ್ದ ಆರೋಪಿ ಫಯಾಜ್ ಖೋಂಡುನಾಯ್ಕನನ್ನು ಪೊಲೀಸರು ಬಂಧಿಸಿದ್ದಾರೆ. ನೇಹಾ ಮೊದಲ ವರ್ಷದ ಮಾಸ್ಟರ್ ಆಫ್ ಕಂಪ್ಯೂಟರ್ ಅಪ್ಲಿಕೇಷನ್ಸ್ ವಿದ್ಯಾರ್ಥಿನಿ ಮತ್ತು ಫಯಾಜ್ ಮೊದಲು ಆಕೆಯ ಸಹಪಾಠಿಯಾಗಿದ್ದ ಎನ್ನಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಪ್ರಕರಣವನ್ನು ಸಿಐಡಿಗೆ ವಹಿಸಿ ಘೋಷಿಸಿದ್ದರು. ಪ್ರಕರಣದ ಶೀಘ್ರ ಇತ್ಯರ್ಥಕ್ಕೆ ತ್ವರಿತ ನ್ಯಾಯಾಲಯ ಸ್ಥಾಪನೆ ಮಾಡುವುದಾಗಿ ಹೇಳಿದ್ದರು. ಆದರೆ, ಮುಖ್ಯಮಂತ್ರಿ, ಗೃಹ ಸಚಿವರು ಸೇರಿದಂತೆ ಕಾಂಗ್ರೆಸ್ ಸರ್ಕಾರ ಘಟನೆಯನ್ನು ಗಂಭೀರವಾಗಿ ಪರಿಗಣಿಸಿಲ್ಲ, ಅವರು ಪರೋಕ್ಷವಾಗಿ ಮುಸ್ಲಿಂರನ್ನು ರಕ್ಷಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ ವಿಜಯೇಂದ್ರ, ಸಿಐಡಿಯಿಂದ ತನಿಖೆ ಮಾಡಿಸುವ ಮೂಲಕ ಸಮಯ ವ್ಯರ್ಥ ಮಾಡುವ ಬದಲು ಸಿಬಿಐ ತನಿಖೆಗೆ ವಹಿಸಬೇಕು ಎಂದು ಒತ್ತಾಯಿಸಿದರು.
Advertisement