ಲೋಕಸಭೆ ಚುನಾವಣೆ 2024: ಮುಸ್ಲಿಂ ಮೀಸಲಾತಿ ರದ್ದುಗೊಳಿಸಿದ ನಿರ್ಧಾರಕ್ಕೆ ಬಿಜೆಪಿ ಬದ್ಧ- ಬಸವರಾಜ ಬೊಮ್ಮಾಯಿ
ಹುಬ್ಬಳ್ಳಿ: ಮುಸ್ಲಿಮರಿಗೆ ನೀಡಲಾಗಿದ್ದ ಶೇ 4ರಷ್ಟು ಮೀಸಲಾತಿಯನ್ನು ರದ್ದು ಮಾಡಿರುವ ವಿಚಾರದಲ್ಲಿ ತೆಗೆದುಕೊಂಡ ನಿರ್ಧಾರಕ್ಕೆ ನಾವು ಬದ್ದರಾಗಿದ್ದೇವೆ. ಈಗ ಚಂಡು ಕಾಂಗ್ರೆಸ್ ಸರ್ಕಾರದ ಅಂಗಳದಲ್ಲಿದೆ. ಕಾಂಗ್ರೆಸ್ ಈಗ ಏನು ಮಾಡುತ್ತದೆ ಎನ್ನುವುದು ಪ್ರಶ್ನೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಶುಕ್ರವಾರ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಸ್ಲಿಂ ಕೋಟಾ ವಿಚಾರದಲ್ಲಿ ಸುಳ್ಳು ಹೇಳುತ್ತಿದ್ದಾರೆ. ಅದರಲ್ಲೂ ಈ ವಿಷಯ ಸುಪ್ರೀಂ ಕೋರ್ಟ್ನಲ್ಲಿರುವಾಗಲೂ ಸುಳ್ಳು ಹೇಳುವುದು ಸರಿಯಲ್ಲ' ಎಂದರು.
'ನಾವು ಮುಸ್ಲಿಂ ಕೋಟಾವನ್ನು ರದ್ದುಗೊಳಿಸುತ್ತೇವೆ ಅಥವಾ ಅದನ್ನು ಮುಂದುವರಿಸುತ್ತೇವೆ ಎಂದು ಸುಪ್ರೀಂ ಕೋರ್ಟ್ನಲ್ಲಿ ಹೇಳಿಲ್ಲ. ನಾವು ಕೈಗೊಂಡ ನಿರ್ಧಾರವನ್ನು ಪ್ರಶ್ನಿಸಿ ಸಿದ್ದರಾಮಯ್ಯ ಅವರ ಆಪ್ತ ರವಿವರ್ಮ ಕುಮಾರ್ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಸಿದ್ದರಾಮಯ್ಯನವರ ಆಗ್ರಹದ ಮೇರೆಗೆ ಅವರು ಹಾಗೆ ಮಾಡಿದರು. ನ್ಯಾಯಾಲಯ ಇನ್ನೂ ಈ ವಿಷಯವನ್ನು ಕೈಗೆತ್ತಿಕೊಳ್ಳಬೇಕಿದೆ. ನಮ್ಮ ವಾದವನ್ನು ನಾವು ನ್ಯಾಯಾಲಯದಲ್ಲಿ ಮಂಡಿಸುತ್ತೇವೆ' ಎಂದು ಹೇಳಿದರು.
'ನ್ಯಾಯಾಲಯದಲ್ಲಿ ವಿವಾದ ಇತ್ಯರ್ಥವಾಗುವವರೆಗೆ ಮುಸ್ಲಿಂ ಕೋಟಾವನ್ನು ರದ್ದುಗೊಳಿಸುವ ನಿರ್ಧಾರವನ್ನು ಜಾರಿಗೊಳಿಸುವುದಿಲ್ಲ ಎಂದು ಬಿಜೆಪಿ ಸರ್ಕಾರ ಸ್ಪಷ್ಟಪಡಿಸಿತ್ತು. ನಮ್ಮ ನಿಲುವಿಗೆ ನಾವು ಇಂದಿಗೂ ಬದ್ಧವಾಗಿದ್ದೇವೆ. ಆಗ ಪ್ರತಿಪಕ್ಷ ಕಾಂಗ್ರೆಸ್ ನಮ್ಮ ನಿರ್ಧಾರವನ್ನು ವಿರೋಧಿಸಿತ್ತು. ಈಗ, ಆಡಳಿತಾರೂಢ ಕಾಂಗ್ರೆಸ್ ಈ ಕೋಟಾವನ್ನು ಮುಂದುವರಿಸುತ್ತದೆಯೇ ಎಂಬುದು ಪ್ರಶ್ನೆಯಾಗಿದೆ ಎಂದು ಬೊಮ್ಮಾಯಿ ಹೇಳಿದರು.
ಧರ್ಮದ ಆಧಾರದಲ್ಲಿ ಮೀಸಲಾತಿಗೆ ಸಂವಿಧಾನದಲ್ಲಿ ಅವಕಾಶವಿಲ್ಲ. ಹೀಗಿದ್ದರೂ, ಸುಮಾರು 24 ಮುಸ್ಲಿಂ ಸಮುದಾಯಗಳನ್ನು 2A ಕೋಟಾ ಮೀಸಲಾತಿ ಪಟ್ಟಿಯಲ್ಲಿವೆ. ಆಂಧ್ರಪ್ರದೇಶದಲ್ಲಿ ಇದೇ ರೀತಿ ಆದಾಗ ಸರ್ಕಾರದ ನಿರ್ಧಾರವನ್ನು ಸುಪ್ರೀಂ ಕೋರ್ಟ್ ತಳ್ಳಿಹಾಕಿದೆ. ಆಡಳಿತಾರೂಢ ಕಾಂಗ್ರೆಸ್ ಈಗ ಸಂಕಷ್ಟ್ಕಕೆ ಸಿಲುಕಿದೆ. ಅವರು ಎಂದಿನಂತೆ ಇದನ್ನ ಬಿಜೆಪಿ ತಲೆಗೆ ಕಟ್ಟಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.