ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣದ ತನಿಖೆಗೆ ಕರ್ನಾಟಕ ಸರ್ಕಾರದ ವಿಶೇಷ ತನಿಖಾ ತಂಡ (ಎಸ್ಐಟಿ) ರಚನೆಯನ್ನು ಜನತಾ ದಳ (ಜಾತ್ಯತೀತ) ಸ್ವಾಗತಿಸಿದೆ.
ಹಾಸನ ಸಂಸದ, 2024ರ ಲೋಕಸಭಾ ಚುನಾವಣೆ ಎನ್ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಮತ್ತು ವಿಡಿಯೋ ಚಿತ್ರೀಕರಣ ಪ್ರಕರಣ ದೇಶದಾದ್ಯಂತ ಭಾರೀ ಸದ್ದು ಮಾಡುತ್ತಿದ್ದು, ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ.
ಈ ಪ್ರಕರಣದಿಂದ ದೇವೇಗೌಡರ ಕುಟುಂಬ ತೀವ್ರ ಮುಜುಗರ ಅನುಭವಿಸುತ್ತಿದ್ದು, ದೌರ್ಜನ್ಯಕ್ಕೊಳಗಾದ ಸಂತ್ರಸ್ತ ಮಹಿಳೆಯೊಬ್ಬರು ಇಂದು ಮಹಿಳಾ ಆಯೋಗಕ್ಕೆ ಮೊದಲ ದೂರು ನೀಡಿದ್ದಾರೆ.
ಈ ದೂರು ದಾಖಲು ಬೆನ್ನಲ್ಲೇ ರಾಜ್ಯ ಸರ್ಕಾರ ರಾಜ್ಯ ಮಹಿಳಾ ಆಯೋಗದ ಮನವಿ ಮೇರೆಗೆ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋಗಳ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (ಎಸ್ಐಟಿ) ರಚನೆ ಮಾಡಿದೆ. ಎಸ್ಐಟಿ ರಚನೆಯಾಗುವ ಸುದ್ದಿ ಖಚಿತವಾಗುತ್ತಿದ್ದಂತೆಯೇ ಪ್ರಜ್ವಲ್ ರೇವಣ್ಣಗೆ ಬಂಧನದ ಭೀತಿ ಆರಂಭವಾಗಿದೆ.
SIT ತನಿಖೆಗೆ ಸ್ವಾಗತ, ಅಂತರ ಕಾಯ್ದುಕೊಂಡ JDS
ಅತ್ತ ರಾಜ್ಯ ಸರ್ಕಾರ ಎಸ್ ಐಟಿ ತನಿಖೆಯನ್ನು ಜೆಡಿಎಸ್ ಪಕ್ಷ ಸ್ವಾಗತಿಸಿದ್ದು, ಈ ಬಗ್ಗೆ ಮಾತನಾಡಿರುವ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಹಾಗೂ ಹಿರಿಯ ನಾಯಕ ಜಿ.ಟಿ.ದೇವೇಗೌಡ, ಈ ಬಗ್ಗೆ ಚರ್ಚಿಸಲು ಪಕ್ಷ ಸಭೆ ಕರೆಯಲಿದೆ. ಎಸ್ಐಟಿ ತನಿಖೆಗೆ ಸರ್ಕಾರವನ್ನು ದೂಷಿಸುವುದಿಲ್ಲ, ಪ್ರಜ್ವಲ್ ರೇವಣ್ಣ ವಿಚಾರದಲ್ಲಿ ಏನು ಕ್ರಮ ಕೈಗೊಳ್ಳಬೇಕು ಎಂದು ಕುಳಿತು ತೀರ್ಮಾನಿಸುತ್ತೇವೆ. ಸದ್ಯಕ್ಕೆ ಎಸ್ಐಟಿ ತನಿಖೆಯನ್ನು ಸ್ವಾಗತಿಸುತ್ತೇನೆ ಎಂದು ಹೇಳಿದ್ದಾರೆ.
ಜೆಡಿಎಸ್ ಮುಖಂಡ ಟಿ.ಎ.ಶರವಣ ಮಾತನಾಡಿ, ಎಸ್ ಐಟಿ ತನಿಖೆಯನ್ನು ನಾವು ಸ್ವಾಗತಿಸುತ್ತೇವೆ, ಈ ಬಗ್ಗೆ ವರಿಷ್ಠ ಎಚ್ .ಡಿ.ದೇವೇಗೌಡ ಹಾಗೂ ನಮ್ಮ ನಾಯಕ ಎಚ್ .ಡಿ.ಕುಮಾರಸ್ವಾಮಿ ಹಾಗೂ ಎಲ್ಲ ಪದಾಧಿಕಾರಿಗಳು ಕುಳಿತು ತೀರ್ಮಾನ ಮಾಡುತ್ತಾರೆ ಎಂದರು.
Advertisement