
ಬೆಂಗಳೂರು: ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ, ಮಾಜಿ ಸಚಿವ ಎಚ್.ಡಿ ರೇವಣ್ಣ ಅವರಿಗೆ ನೀಡಿರುವ ಜಾಮೀನು ರದ್ದುಗೊಳಿಸುವಂತೆ ಕೋರಿ ವಿಶೇಷ ತನಿಖಾ ತಂಡ(ಎಸ್ಐಟಿ) ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಬುಧವಾರ ವಜಾಗೊಳಿಸಿದೆ. ಇದರಿಂದ ರೇವಣ್ಣಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸೆಕ್ಸ್ ವಿಡಿಯೋ ಪ್ರಕರಣದ ಸಂತ್ರಸ್ತೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ರೇವಣ್ಣ ಅವರಿಗೆ ಜನಪ್ರತಿನಿಧಿಗಳ ಕೋರ್ಟ್ ನೀಡಿದ್ದ ಜಾಮೀನು ರದ್ದು ಕೋರಿ ಎಸ್ಐಟಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು.
ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ, ರೇವಣ್ಣ ಜಾಮೀನು ರದ್ದಗೊಳಿಸಲು ನಿರಾಕರಿಸಿದೆ. ಅಲ್ಲದೆ ಪ್ರಕರಣದ ಎಲ್ಲಾ ಆರೋಪಿಗಳಿಗೂ ಜಾಮೀನು ಮಂಜೂರು ಮಾಡಿದೆ.
ಆರೋಪಿಗಳಾದ ಸತೀಶ್ ಬಾಬು, ಮಧುಗೌಡ, ಕೆ.ಎ.ರಾಜಗೋಪಾಲ್, ಹೆಚ್.ಕೆ.ಸುಜಯ್, ಹೆಚ್.ಎನ್.ಮಧು, ಎಸ್.ಟಿ.ಕೀರ್ತಿಗೆ ಜಾಮೀನು ನೀಡಿ ನ್ಯಾಯಮೂರ್ತಿ ಎಂ.ನಾಗಪ್ರಸನ್ನರಿದ್ದ ಪೀಠ ಆದೇಶ ಹೊರಡಿಸಿದೆ. ಇದೇ ಪ್ರಕರಣದಲ್ಲಿ ಆರೋಪಿಯಾಗಿರುವ ರೇವಣ್ಣ ಪತ್ನಿ ಭವಾನಿ ಕೂಡ ಈಗಾಗಲೇಜಾಮೀನು ಪಡೆದುಕೊಂಡಿದ್ದಾರೆ.
ಮೇ 13 ರಂದು, ಶಾಸಕರು/ಸಂಸದರ ವಿಶೇಷ ನ್ಯಾಯಾಲಯ ರೇವಣ್ಣ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತು ನಂತರ ಎಸ್ಐಟಿ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು.
ಮಹಿಳೆ ಅಪಹರಣಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲೆಯ ಕೆ. ಆರ್. ನಗರ ಪೊಲೀಸ್ ಠಾಣೆಯಲ್ಲಿ ಮಾಜಿ ಸಚಿವ ಎಚ್ ಡಿ ರೇವಣ್ಣ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.
Advertisement