
ಬಾಗಲಕೋಟೆ: ಬಾಗಲಕೋಟೆಯ ವಿವಿಧ ಸರ್ಕಾರಿ ಇಲಾಖೆಗಳ ಹಣ ಐಡಿಬಿಐ ಬ್ಯಾಂಕ್ ಮೂಲಕ ಅಕ್ರಮವಾಗಿ ವರ್ಗಾವಣೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧ ತನಿಖಾ ಇಲಾಖೆ (ಸಿಐಡಿ) ತನಿಖೆ ಆರಂಭಿಸಿದೆ.
ಜಿಲ್ಲೆಯ ಪ್ರವಾಸೋದ್ಯಮ, ಅಲ್ಪಸಂಖ್ಯಾತ, ಕಾರ್ಮಿಕ, ಕೈಮಗ್ಗ-ಜವಳಿ, ಹಿಂದುಳಿದ ವರ್ಗಗಳ ಇಲಾಖೆಗಳಲ್ಲಿ 6 ಕೋಟಿ 8 ಲಕ್ಷ ರೂ. ಹಣವನ್ನು ವಿವಿಧ ಖಾತೆಗಳಿಗೆ ಬ್ಯಾಂಕ್ ಸಿಬ್ಬಂದಿಯಿಂದ ಅಕ್ರಮ ವರ್ಗಾವಣೆ ಮಾಡಲಾಗಿತ್ತು. ಇಲಾಖೆಗಳ ಹಣ ಒಟ್ಟು 33 ವಿವಿಧ ಖಾತೆಗಳಿಗೆ ವರ್ಗಾವಣೆ ಆಗಿತ್ತು. ಪ್ರಕರಣ ಸಂಬಂಧ ಇದೂವರೆಗೆ ಬ್ಯಾಂಕ್ನ 9 ಸಿಬ್ಬಂದಿ. ಇಬ್ಬರು ಸರ್ಕಾರಿ ಅಧಿಕಾರಿಗಳು ಸೇರಿ ಒಟ್ಟು 21 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. 3 ಕೋಟಿ ರೂ. ಹೆಚ್ಚು ಅವ್ಯವಹಾರ ಹಿನ್ನೆಲೆ ಪ್ರಕರಣ ಸಿಐಡಿಗೆ ಹಸ್ತಾಂತರ ಮಾಡಲಾಗಿತ್ತು.
ಪ್ರಕರಣದ ತನಿಖೆಗಾಗಿ ಪೊಲೀಸ್ ವರಿಷ್ಠಾಧಿಕಾರಿ ವೈ ಅಮರನಾಥ ರೆಡ್ಡಿ ಅವರು ಸರ್ಕಲ್ ಪೊಲೀಸ್ ಇನ್ಸ್ಪೆಕ್ಟರ್ ಎಂ ನಾಗರೆಡ್ಡಿ ನೇತೃತ್ವದಲ್ಲಿ ವಿಶೇಷ ತಂಡವನ್ನು ರಚಿಸಿದರು.
ಇದರಂತೆ ಸಿಐಡಿ ತಂಡ ಮಂಗಳವಾರ ನಗರಕ್ಕೆ ಭೇಟಿ ನೀಡಿದ್ದು, ಸಿಇಎನ್ ಪೊಲೀಸ್ ಠಾಣೆಯಿಂದ ದಾಖಲೆಗಳನ್ನು ಸಂಗ್ರಹಿಸಿ, ಬೆಳಗಾವಿಯಲ್ಲಿ ಪೊಲೀಸ್ ಮಹಾನಿರೀಕ್ಷಕ ವಿಕಾಸಕುಮಾರ್ ಅವರನ್ನು ಭೇಟಿ ಮಾಡಿದೆ.
ಇಲ್ಲಿಯವರೆಗೆ ಅಕ್ರಮವಾಗಿ ವರ್ಗಾವಣೆಯಾದ 6.08 ಕೋಟಿ ರೂ.ಗಳಲ್ಲಿ 4.79 ಕೋಟಿ ರೂ.ಗಳನ್ನು ವಸೂಲಿ ಮಾಡಿ ಆಯಾ ಇಲಾಖೆಯ ಖಾತೆಗಳಿಗೆ ಮರು ಜಮಾ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
Advertisement