
ಬೆಂಗಳೂರು: ಬೆಳಗಾವಿಯಲ್ಲಿ ಮಹಾತ್ಮಾ ಗಾಂಧೀಜಿಯವರ ನೇತೃತ್ವದಲ್ಲಿ 1924ರಲ್ಲಿ ನಡೆದ ಐತಿಹಾಸಿಕ ಕಾಂಗ್ರೆಸ್ ಅಧಿವೇಶನದ ಸ್ಮರಣಾರ್ಥ "ಗಾಂಧಿ ಭಾರತ" ಹೆಸರಲ್ಲಿ ವರ್ಷವಿಡೀ ಅರ್ಥಪೂರ್ಣ ಕಾರ್ಯಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸೋಮವಾರ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಸಭೆಯ ಇನ್ನಿತರೆ ನಿರ್ಧಾರಗಳು ಇಂತಿವೆ...
ಈ ಆಚರಣೆ ಜಗತ್ತಿಗೆ ಗಾಂಧಿ ಸಂದೇಶ ಸಾರುವಂತಿರಬೇಕು. ಸ್ವಾತಂತ್ರ್ಯ ಪೂರ್ವದಲ್ಲಿ ಮಹಾತ್ಮಾ ಗಾಂಧೀಜಿ ಭೇಟಿ ನೀಡಿದ ರಾಜ್ಯದ 120 ಸ್ಥಳಗಳನ್ನು ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ ಯೋಜಿಸಿದೆ. ಜೊತೆಗೆ ರಿಚರ್ಡ್ ಅಟೆನ್ಬರೋ ಅವರ ಗಾಂಧಿ ಸಿನಿಮಾ ಕೂಡ ಕನ್ನಡದಲ್ಲಿ ನಿರ್ಮಾಣವಾಗಲಿದೆ. ಸುವರ್ಣ ವಿಧಾನಸೌಧದಲ್ಲಿ ಕಾಂಗ್ರೆಸ್ ಅಧಿವೇಶನ, ಸ್ವಾತಂತ್ರ್ಯ ಚಳವಳಿಯನ್ನು ಪ್ರತಿಬಿಂಬಿಸುವ ಛಾಯಾಚಿತ್ರ ಗ್ಯಾಲರಿ ನಿರ್ಮಾಣ ಮಾಡಲಾಗುವುದು. ಡಿ.26 ರಂದು ಗಣ್ಯ ಪ್ರತಿನಿಧಿಗಳಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಡಿ.27 ರಂದು ಸಾರ್ವಜನಿಕರಿಗೆ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸುವುದು ಮತ್ತು ಮೈಸೂರು ದಸರಾ ಮಾದರಿಯಲ್ಲಿ ಬೆಳಗಾವಿ ನಗರದ ಪ್ರಮುಖ 32 ಕಿಮೀ ಉದ್ದದ ರಸ್ತೆ ಹಾಗೂ 30 ವೃತ್ತಗಳ ದೀಪಾಲಂಕಾರ ಮಾಡಲಾಗುವುದು.
ಕಾಂಗ್ರೆಸ್ ಅಧಿವೇಶನ ನಡೆದ ಸ್ಥಳದಲ್ಲಿ ವೀರಸೌಧ ಅಭಿವೃದ್ಧಿ. ಈ ಸ್ಥಳದಲ್ಲಿ ಗ್ರಂಥಾಲಯ ಮತ್ತು ಗಾಂಧಿ ಪ್ರತಿಮೆ ಅನಾವರಣ ಮಾಡಲಾಗುವುದು. ಬೆಳಗಾವಿಯ 2.1 ಕಿ.ಮೀ ಉದ್ದದ ಕಾಂಗ್ರೆಸ್ ರಸ್ತೆಯಲ್ಲಿ ಶತಮಾನೋತ್ಸವದ ಸ್ಮಾರಕವಾಗಿ ತಾತ್ಕಾಲಿಕ ವಿರೂಪಾಕ್ಷ ಗೋಪುರ ನಿರ್ಮಾಣ, ರೈಲು ಮಾರ್ಗದ ತಡೆಗೋಡೆಯುದ್ದಕ್ಕೂ ಉಬ್ಬು ಶಿಲ್ಪಗಳ ನಿರ್ಮಾಣ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ನಿರ್ಧರಿಸಲಾಗಿದೆ.
ಕಣಬರಗಿಯಲ್ಲಿ ಗಂಗಾಧರ ರಾವ್ ದೇಶಪಾಂಡೆಯವರ ಸ್ಮಾರಕದಲ್ಲಿ ಮೂರ್ತಿ ಸ್ಥಾಪನೆ, ಮ್ಯೂಸಿಯಂ ಉದ್ಘಾಟನೆ. ಹುದಲಿಯಲ್ಲಿ ಗಾಂಧೀ ಸ್ಮಾರಕ ಹಾಗೂ ಛಾಯಾಚಿತ್ರ ಗ್ಯಾಲರಿಯ ಅಭಿವೃದ್ಧಿ ಮಾಡಲಾಗುವುದು. ಗಾಂಧೀಜಿ ಅವರು ವಿವಿಧ ಕಾಲಘಟ್ಟಗಳಲ್ಲಿ ಭೇಟಿ ನೀಡಿದ ರಾಜ್ಯದ 120 ಸ್ಥಳಗಳಲ್ಲಿ ನೆನಪಿನ ಸ್ತಂಭಗಳನ್ನು ನಿರ್ಮಿಸಲು ತೀರ್ಮಾನಿಸಲಾಗಿದೆ.
ಶತಮಾನೋತ್ಸವದ ನೆನಪಿಗೆ ವಿಶೇಷ ಅಂಚೆ ಚೀಟಿ ಬಿಡುಗಡೆಗೆ ನಿರ್ಧಾರ ಮಾಡಲಾಯಿತು. ವರ್ಷವಿಡೀ ಎಲ್ಲಾ ಶಾಲೆಗಳಲ್ಲಿ ʻಗಾಂಧಿ ಭಾರತʼ ಅಡಿಯಲ್ಲಿ ʻನಾವು ಮನುಜರುʼ ಕಾರ್ಯಕ್ರಮಗಳ ಆಯೋಜನೆ. ಮಕ್ಕಳಲ್ಲಿ ಗಾಂಧೀಜಿ ವಿಚಾರಧಾರೆ ಬಗ್ಗೆ ಅರಿವು ಮೂಡಿಸಲು ವಿವಿಧ ಸ್ಪರ್ಧಾ ಕಾರ್ಯಕ್ರಮಗಳ ಆಯೋಜನೆ ಮಾಡಲು ಸೂಚಿಸಲಾಗಿದೆ.
ಗಾಂಧೀಜಿ ಅವರು ಬೋಧಿಸಿದ ಸಪ್ತ ಪಾತಕಗಳು ಹಾಗೂ ಸಂವಿಧಾನದ ಪೀಠಿಕೆಗಳನ್ನು ಮುದ್ರಿಸಿ ಎಲ್ಲಾ ಶಾಲೆಗಳಲ್ಲಿ ವಿತರಣೆ ಮಾಡಲು ನಿರ್ಧರಿಸಲಾಗಿದೆ.
Advertisement