
ಬೆಂಗಳೂರು: ಖ್ಯಾತ ಪರಿಸರವಾದಿ, ಪದ್ಮ ಪ್ರಶಸ್ತಿ ಪುರಸ್ಕೃತೆ ಸಾಲುಮರದ ತಿಮ್ಮಕ್ಕ ಅವರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.
ಉಸಿರಾಟದ ತೊಂದರೆ, ಕೆಟ್ಟ ಸಮಸ್ಯೆ ಹಾಗೂ ಸೋಂಕಿನ ಸಮಸ್ಯೆಯಿಂದಾಗಿ ನವೆಂಬರ್ 30ರಂದು ಆಸ್ಪತ್ರೆಗೆ ದಾಖಲಾಗಿದ್ದು, ಇದೀಗ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎಂದು ವೈದ್ಯರು ಹೇಳಿದ್ದಾರೆ.
ಸಾಲು ಮರದ ತಿಮ್ಮಕ್ಕ ಅವರು ಗ್ಯಾಸ್ಟ್ರೋ ಇಂಟಸ್ಟೈನಲ್ ಸೋಂಕು, ಅತಿಸಾರ ಮತ್ತು ನಿರ್ಜಲೀಕರಣದಿಂದ ಬಳಲುತ್ತಿದ್ದರು. ಕೆಲವು ದಿನಗಳಿಂದ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಇದೀಗ ಅವರ ಸ್ಥಿತಿ ಸ್ಥಿರವಾಗಿದೆ. ಡಿಸೆಂಬರ್ 17 ಅಥವಾ 18 ರಂದು ಡಿಸ್ಚಾರ್ಜ್ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ತಿಮ್ಮಕ್ಕ ಅವರ ಪುತ್ರ ಉಮೇಶ್ ಮಾತನಾಡಿ, ತಾಯಿಗೆ 113 ವರ್ಷ, ಆಕೆಯ ಆರೋಗ್ಯ ಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಜಯನಗರದ ಅಪೋಲೋ ಆಸ್ಪತ್ರೆಗೆ ಕರೆದೊಯ್ದೆವು, ಈಗ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಿದ್ದಾರೆ.
ನೂರಾರು ಮರಗಳ ಪಾಲನೆ ಪೋಷಣೆ ಮೂಲಕ ವೃಕ್ಷಮಾತೆಯೆಂದೇ ಹೆಸರಾಗಿರುವ ಸಾಲುಮರದ ತಿಮ್ಮಕ್ಕ, ಈವರೆಗೆ ಲಕ್ಷಾಂತರ ಸಸಿ ನೆಟ್ಟಿದ್ದಾರೆ.
Advertisement