
ಬೆಂಗಳೂರು: ನಗರದಲ್ಲಿ ವಿವಿಧೆಡೆ ಬುಧವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಜಾರ್ಖಂಡ್ ಮೂಲದ ವ್ಯಕ್ತಿ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ.
ಈ ಸಂಬಂಧ ರಾಮನಗರ ಜಿಲ್ಲೆಯ ಹಾರೋಹಳ್ಳಿ, ನಗರದ ಕೆಂಗೇರಿ ಹಾಗೂ ಹೆಬ್ಬಾಳ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕೆಂಗೇರಿ ಸಂಚಾರಿ ಪೊಲೀಸ್ ವ್ಯಾಪ್ತಿಯ ನೈಸ್ ರಸ್ತೆಯಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದ ಅಪಘಾತದಲ್ಲಿ ಬಾಗಲಕೋಟೆ ಮೂಲದ ಕನಕ ಮಾದರ (19) ಎಂಬ ಯುವಕ ಮೃತಪಟ್ಟಿದ್ದಾನೆ.
ಯುವಕ ಅತ್ತಿಬೆಲೆಯ ಮಾಯಸಂದ್ರದ ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದ, ಬೈಕ್ನಲ್ಲಿ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. ವೇಗವಾಗಿ ಬೈಕ್ ಚಲಾಯಿಸುತ್ತಿದ್ದ ಯುವಕ ಏಕಾಏಕಿ ರಸ್ತೆ ಬದಿ ನಿಂತಿದ್ದ ಟ್ರಕ್ಗೆ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ. ಘಟನೆ ಬಳಿಕ ನೈಸ್ ರಸ್ತೆಯಲ್ಲಿ ಗಸ್ತು ತಿರುಗುತ್ತಿದ್ದ ಪೊಲೀಸರು ಯುವಕನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಯುವಕ ಸಾವನ್ನಪ್ಪಿದ್ದಾನೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆರ್ ಆರ್ ನಗರದ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.
ಮತ್ತೊಂದು ಘಟನೆ ಹೆಬ್ಬಾಳದಲ್ಲಿ ನಡೆದಿದೆ. ಕಟ್ಟಡ ನಿರ್ಮಾಣ ಸ್ಥಳದಲ್ಲಿ ಸಿಮೆಂಟ್ ಬ್ಲಾಕ್ಗಳನ್ನು ಇಳಿಸಿದ ಟ್ರ್ಯಾಕ್ಟರ್ ವೊಂದರ ಚಕ್ರಕ್ಕೆ ಸಿಲುಕಿ ಕಾರ್ಮಿಕ ರಮೇಶ್ (56) ಎಂಬುವವರು ಮೃತಪಟ್ಟಿದ್ದಾರೆ. ಜಕ್ಕೂರು ಲೇಔಟ್ನಲ್ಲಿ ಮಂಗಳವಾರ ಸಂಜೆ 7 ಗಂಟೆ ಸುಮಾರಿಗೆ ಘಟನೆ ನಡೆದಿದೆ.
ಹಾರೋಹಳ್ಳಿ ಬಳಿ ಬೆಂಗಳೂರು-ಕನಕಪುರ ಮುಖ್ಯರಸ್ತೆಯಲ್ಲಿ ನಡೆದ ಹಿಟ್ ಅಂಡ್ ರನ್ ಪ್ರಕರಣದಲ್ಲಿ ಜಾರ್ಖಂಡ್ ಮೂಲದ ಎನ್ ಸರಜೂ ಪ್ರಜಾಪತಿ (36) ಎಂಬುವವರು ಮೃತಪಟ್ಟಿದ್ದಾರೆ. ಕಾರ್ಮಿಕರು ತಂಗಿದ್ದ ಶೆಡ್ ಗೆ ಹೋಗಲು ರಸ್ತೆ ದಾಟುತ್ತಿದ್ದ ವೇಳ ದುರ್ಘಟನೆ ಸಂಭವಿಸಿದೆ.
ಕನಕಪುರ ಕಡೆಯಿಂದ ನಗರದ ಕಡೆಗೆ ಬರುತ್ತಿದ್ದ ವಾಹನ ಪ್ರಜಾಪತಿ ಅವರ ಮೇಲೆ ಹರಿದಿದೆ. ಬಿಡಬ್ಲ್ಯೂಎಸ್ಎಸ್ಬಿ ಪೈಪ್ ಹಾಕುವ ಗುತ್ತಿಗೆ ಪಡೆದಿದ್ದ ಖಾಸಗಿ ಸಂಸ್ಥೆಯೊಂದರಲ್ಲಿ ಮೃತ ವ್ಯಕ್ತಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಈ ಕುರಿತು ಕಾರ್ಮಿಕ ಗುತ್ತಿಗೆದಾರ ಎಲ್ ಅಮರಿಕಾ ಪ್ರಸಾದ್ ಗುಪ್ತಾ ದೂರು ದಾಖಲಿಸಿದ್ದಾರೆ.
ಸಂತ್ರಸ್ತೆ ತನ್ನ ಕಾರ್ಮಿಕ ಶಿಬಿರಕ್ಕೆ ಹೋಗಲು ರಸ್ತೆ ದಾಟುತ್ತಿದ್ದಾಗ, ರಾತ್ರಿ 7.30 ರಿಂದ 8 ರ ನಡುವೆ ಅಪಘಾತ ಸಂಭವಿಸಿದೆ.
Advertisement