
ಬೆಂಗಳೂರು: ಕರ್ನಾಟಕದಲ್ಲಿ ಬಾಣಂತಿಯರ ಸಾವು ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಇತ್ತ ರಾಜಧಾನಿ ಬೆಂಗಳೂರಿನಲ್ಲೇ ಮತೋರ್ವ ಬಾಣಂತಿ ಸಾವು ವರದಿಯಾಗಿದೆ.
ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಬಾಣಂತಿಯರ ಸಾವು ಪ್ರಕರಣಗಳು ಹೆಚ್ಚುತ್ತಿರುವ ಸಂದರ್ಭದಲ್ಲೇ ಮತ್ತೋರ್ವ ಬಾಣಂತಿ ಮೃತಪಟ್ಟಿದ್ದಾರೆ. ಬಳ್ಳಾರಿ, ರಾಯಚೂರು, ಬೆಳಗಾವಿಯ ಬಳಿಕ ಇದೀಗ ಬೆಂಗಳೂರಿನಲ್ಲಿಯೂ ಬಾಣಂತಿಯೊಬ್ಬರ ಸಾವಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಕಡೂರಿನ ಮಹಿಳೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮಹಿಳೆ ಸಾವಿಗೆ ಖಾಸಗಿ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ.
ಬೆಂಗಳೂರಿನ ನಾಗರಬಾವಿಯ ಖಾಸಗಿ ಆಸ್ಪತ್ರೆಯಲ್ಲಿ ಬಾಣಂತಿ ಅನುಷಾ ಮೃತಪಟ್ಟಿದ್ದು, ವೈದ್ಯರ ನಿರ್ಲಕ್ಷ್ಯದಿಂದ ಸಾವಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಒಂದು ತಿಂಗಳ ಹಿಂದೆ ಗಂಡು ಮಗುವಿಗೆ ಜನ್ಮ ನೀಡಿದ್ದ ಅನುಷಾ, ಅನಾರೋಗ್ಯದಿಂದಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಶಿವಮೊಗ್ಗ ಆಸ್ಪತ್ರೆ ವೈದ್ಯರ ವಿರುದ್ಧ ಆರೋಪ
ಮೂಲಗಳ ಪ್ರಕಾರ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಗರ್ಜೆ ಗ್ರಾಮದ ನಿವಾಸಿ ಅನುಷಾಗೆ ತರೀಕೆರೆಯ ರಾಜ್ ನರ್ಸಿಂಗ್ ಹೋಂನಲ್ಲಿ ಸಹಜ ಹೆರಿಗೆ ಆಗಿತ್ತು. ಡೆಲಿವರಿಗೂ ಮುನ್ನ ಸ್ಕ್ಯಾನಿಂಗ್ ಮಾಡಿದಾಗ ಕಲ್ಲು ಇದೆ ಎಂದು ವೈದ್ಯರು ತಿಳಿಸಿದ್ದರು. ಅದೇ ಸ್ಕ್ಯಾನಿಂಗ್ ವರದಿ ಆಧಾರದ ಮೇಲೆ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು.
ಡೆಲಿವರಿಯಾದ ಒಂದೇ ತಿಂಗಳಿಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಅನುಷಾಗೆ ಆಪರೇಷನ್ ಮಾಡಲಾಗಿತ್ತು. ಶಸ್ತ್ರಚಿಕಿತ್ಸೆ ಆದ ನಂತರ ಮನೆಗೆ ತೆರಳಿದಾಗ ಬಾಣಂತಿಯ ಕೈ ಕಾಲಿನಲ್ಲಿ ಊತ ಕಾಣಿಸಿಕೊಂಡಿತ್ತು. ಹೀಗಾಗಿ ಆಕೆಯನ್ನು ಮತ್ತೆ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಪರಿಶೀಲಿಸಿದ ವೈದ್ಯರು, ಆರೋಗ್ಯ ಸಹಜವಾಗಿದೆ. ಏನೂ ಸಮಸ್ಯೆ ಇಲ್ಲ ಎಂದಿದ್ದರು ಎಂದು ಕುಟುಂಬದವರು ತಿಳಿಸಿದ್ದಾರೆ.
ಆದರೂ ಅನುಷಾ ಆರೋಗ್ಯ ಚೇತರಿಸದ ಕಾರಣ ಮತ್ತೆ ಸ್ಥಳೀಯ ಆಸ್ಪತ್ರೆಗೆ ಅವರನ್ನು ಕರೆದೊಯ್ದಿದ್ದಾರೆ. ಅಲ್ಲಿನ ವೈದ್ಯರು, ಅನುಷಾಗೆ ಜಾಂಡಿಸ್ ಇದೆ ಎಂದಿದ್ದರು. ಸ್ಥಳೀಯ ಆಸ್ಪತ್ರೆ ವೈದ್ಯರ ಸಲಹೆಯಂತೆ ಅನುಷಾರನ್ನು ಕುಟುಂಬಸ್ಥರು ಬೆಂಗಳೂರಿಗೆ ಕರೆತಂದು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿ ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ.
Advertisement