ಸಿಲಿಂಡರ್ ಸ್ಫೋಟ: 9 ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳಿಗೆ ಗಂಭೀರ ಗಾಯ, KMC ಆಸ್ಪತ್ರೆಗೆ ದಾಖಲು!

ಹುಬ್ಬಳ್ಳಿಯ ಸಾಯಿನಗರದ ಅಚ್ಚವ್ವನ ಕಾಲೊನಿಯ ಈಶ್ವರ ದೇವಸ್ಥಾನದಲ್ಲಿ ಈ ಘಟನೆ ನಡೆದಿದ್ದು, ಅಡುಗೆ ಅನಿಲದ ಸಿಲಿಂಡರ್ ಸ್ಫೋಟಗೊಂಡು 9 ಅಯ್ಯಪ್ಪ ಮಾಲಾಧಾರಿಗಳು ತೀವ್ರ ಗಾಯಗೊಂಡಿದ್ದಾರೆ.
Cylinder Blast in Hubballi
ಹುಬ್ಬಳ್ಳಿಯಲ್ಲಿ ಸಿಲಿಂಡರ್ ಸ್ಫೋಟ (ಸಾಂದರ್ಭಿಕ ಚಿತ್ರ)
Updated on

ಹುಬ್ಬಳ್ಳಿ: ಸಿಲಿಂಡರ್ ಸ್ಫೋಟಗೊಂಡ ಪರಿಣಾಮ 9 ಮಂದಿ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಹುಬ್ಬಳ್ಳಿಯ ಸಾಯಿನಗರದ ಅಚ್ಚವ್ವನ ಕಾಲೊನಿಯ ಈಶ್ವರ ದೇವಸ್ಥಾನದಲ್ಲಿ ಈ ಘಟನೆ ನಡೆದಿದ್ದು, ಅಡುಗೆ ಅನಿಲದ ಸಿಲಿಂಡರ್ ಸ್ಫೋಟಗೊಂಡು 9 ಅಯ್ಯಪ್ಪ ಮಾಲಾಧಾರಿಗಳು ತೀವ್ರ ಗಾಯಗೊಂಡಿದ್ದಾರೆ. ಬಹುತೇಕ ಎಲ್ಲರ ದೇಹ ಶೇ 50 ರಷ್ಟು ಸುಟ್ಟು ಹೋಗಿದ್ದು, 58 ವರ್ಷದ ಅಜ್ಜಾಸ್ವಾಮಿ ಅವರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಮೂಲಗಳ ಪ್ರಕಾರ ಭಾನುವಾರ ತಡರಾತ್ರಿ 1.30ರ ವೇಳೆ ಈ ಘಟನೆ ನಡೆದಿದ್ದು, ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ. ಗಾಯಗೊಂಡ ಮಾಲಾಧಾರಿಗಳನ್ನು ಕೆಎಂಸಿ-ಆರ್‌ಐಗೆ ದಾಖಲಿಸಲಾಗಿದೆ.

ಗಾಯಾಳುಗಳನ್ನು ರಾಜು ಹರ್ಲಾಪುರ(21), ಸಂಜಯ ಸವದತ್ತಿ(20), ವಿನಾಯಕ ಬಾತಕೇರ(12), ಪ್ರಕಾಶ ಬಾತಕೇರ(42), ಮಂಜು ತೋರದ(22), ಅಜ್ಜಾಸ್ವಾಮಿ(58), ಪ್ರವೀಣ ಚಲವಾದಿ(24), ತೇಜಸ್ ರೆಡ್ಡಿ(26) ಮತ್ತು ಶಂಕರ ರಾಯನಗೌಡ್ರ(29) ಎಂದು ಗುರುತಿಸಲಾಗಿದ್ದು, ಇವರೆಲ್ಲ ಸಾಯಿನಗರದ ನಿವಾಸಿಗಳು ಎಂದು ತಿಳಿದುಬಂದಿದೆ.

ನಿದ್ದೆಗಣ್ಣಿನಲ್ಲಿ ಸಿಲಿಂಡರ್ ಬೀಳಿಸಿದ ಅಯ್ಯಪ್ಪ ಮಾಲಾಧಾರಿ

ಇನ್ನು ಈ ದುರಂತಕ್ಕೆ ಅಯ್ಯಪ್ಪ ಮಾಲಾಧಾರಿಯೊಬ್ಬರ ನಿದ್ದೆಗಣ್ಣು ಕಾರಣ ಎಂದು ಹೇಳಲಾಗಿದ್ದು, ಅಯ್ಯಪ್ಪ ಮಾಲೆ ಧರಿಸಿ ವೃತ ಅಚರಿಸುತ್ತಿದ್ದ ಇವರು, ಈಶ್ವರ ದೇವಸ್ಥಾನದಲ್ಲಿ ವಾಸ್ತವ್ಯ ಹೂಡಿದ್ದರು. ರಾತ್ರಿ ಮಲಗಿದ್ದಾಗ ಮಾಲಾಧಾರಿಯೊಬ್ಬರ ಕಾಲು ಸಿಲಿಂಡರ್‌ಗೆ ತಾಗಿ ಅದು ಉರುಳಿದೆ. ಈ ವೇಳೆ ರೆಗ್ಯೂಲೇಟರ್ ಸಡಿಲಗೊಂಡು ಗ್ಯಾಸ್ ಸೋರಿಕೆಯಾಗಿದೆ.

ಇದೇ ವೇಳೆ ದೇವಸ್ಥಾನದಲ್ಲಿ ಹಚ್ಚಿದ್ದ ದೀಪಕ್ಕೆ ಗ್ಯಾಸ್ ತಾಗಿ ಬೆಂಕಿ ಹೊತ್ತುಕೊಂಡು ಸಿಲಿಂಡರ್ ಸ್ಫೋಟವಾಗಿದೆ. ದೇವಸ್ಥಾನದ ಪ್ರಾಂಗಣದಲ್ಲೆಲ್ಲಾ ಬೆಂಕಿಹೊತ್ತುಕೊಂಡಿದ್ದು, ಸ್ಥಳೀಯರು ಬೆಂಕಿಗೆ ತುತ್ತಾಗಿದ್ದ ಅಯ್ಯಪ್ಪ ಮಾಲಾಧಾರಿಗಳನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಡಿಸಿಪಿ ನಂದಗಾವಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com