ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ
ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ

ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ: ಕನ್ನಡಿಗರ ಕ್ಷಮೆ ಕೋರಿದ ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ

ಉದ್ಘಾಟನಾ ಸಮಾರಂಭಕ್ಕೆ ಬರಲು ಆಗದ್ದರಿಂದ ಕುಮಾರಸ್ವಾಮಿ ಅವರು ಸಮಾರೋಪ ಸಮಾರಂಭಕ್ಕೆ ಆಗಮಿಸಿದ್ದರು.
Published on

ಮಂಡ್ಯ: ಮಂಡ್ಯದಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕೇಂದ್ರ ಸಚಿವ ಹಾಗೂ ಮಂಡ್ಯ ಸಂಸದ ಹೆಚ್‌.ಡಿ.ಕುಮಾರಸ್ವಾಮಿ ಅವರು ಕನ್ನಡಗಿರ ಕ್ಷಮೆ ಕೋರಿದ ಪ್ರಸಂಗ ನಡೆಯಿತು.

ಉದ್ಘಾಟನಾ ಸಮಾರಂಭಕ್ಕೆ ಬರಲು ಆಗದ್ದರಿಂದ ಕುಮಾರಸ್ವಾಮಿ ಅವರು ಸಮಾರೋಪ ಸಮಾರಂಭಕ್ಕೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಕುಮಾರಸ್ವಾಮಿಯವರು ರಾಜ್ಯದಲ್ಲಿ ಕಡಿಮೆ ಶುಲ್ಕದಲ್ಲಿ 1,000 ಆಂಗ್ಲ ಮಾಧ್ಯಮ ಶಾಲೆಗಳನ್ನು ಆರಂಭಿಸಿದ್ದಕ್ಕೆ ಕನ್ನಡಿಗರ ಕ್ಷಮೆಯಾಚಿಸಿದರು.

ಕರ್ನಾಟಕದಲ್ಲಿ 10ನೇ ತರಗತಿವರೆಗೆ ಇಂಗ್ಲೀಷ್‌ ಮಾಧ್ಯಮ ಶಾಲೆಗಳನ್ನು ಆರಂಭಿಸಬೇಡಿ. ಕನ್ನಡ ಮಾಧ್ಯಮ ಶಿಕ್ಷಣಕ್ಕೆ ಒತ್ತು ನೀಡಿ ಎಂದು ಸಮ್ಮೇಳನಾಧ್ಯಕ್ಷ ಗೊರು ಚನ್ನಬಸಪ್ಪ ಅವರು 2 ದಿನದ ಹಿಂದೆ ಸಮ್ಮೇಳನದ ತಮ್ಮ ಭಾಷಣದ ಮೂಲಕ ಹಕ್ಕೊತ್ತಾಯ ಮಂಡಿಸಿದ್ದರು, ಅವರ ಉಪಸ್ಥಿತಿಯಲ್ಲಿಯೇ ಕುಮಾರಸ್ವಾಮಿ ಅವರು ಕ್ಷಮೆ ಕೋರಿದರು.

ಗ್ರಾಮೀಣ ಮಕ್ಕಳು ಆಂಗ್ಲ ಭಾಷೆ ಕಲಿಯಬೇಕು, ಕನ್ನಡ ಭಾಷೆಗೆ ಧಕ್ಕೆಯಾಗಬಾರದು ಎಂಬ ಉದ್ದೇಶದಿಂದ ರಾಜ್ಯದಲ್ಲಿ ಕಡಿಮೆ ಶುಲ್ಕದಲ್ಲಿ 1000 ಆಂಗ್ಲ ಮಾಧ್ಯಮ ಶಾಲೆಗಳನ್ನು ಆರಂಭಿಸಿದ್ದೆ. ಇದನ್ನು ಬಿಟ್ಟು ಬೇರೆ ಉದ್ದೇಶ ನನಗೆ ಇರಲಿಲ್ಲ. ಇದಕ್ಕಾಗಿ ಕನ್ನಡಿಗರ ಕ್ಷಮೆ ಕೋರುವೆ ಎಂದು ಹೇಳಿದರು.

ಇದೇ ವೇಳೆ ತಮ್ಮ ಅಧಿಕಾರಾವಧಿಯಲ್ಲಿ ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆಯನ್ನು ಪಟ್ಟಿ ಮಾಡಿದ ಅವರು, ಜೆಡಿಎಸ್-ಬಿಜೆಪಿ ಸರ್ಕಾರದ ಅವಧಿಯಲ್ಲಿ 189 ಪ್ರಥಮ ದರ್ಜೆ ಕಾಲೇಜುಗಳು ಮತ್ತು 500 ಜೂನಿಯರ್ ಕಾಲೇಜುಗಳನ್ನು ತೆರೆಯಲಾಯಿತು. 56,000 ಶಿಕ್ಷಕರು ಮತ್ತು ಉಪನ್ಯಾಸಕರನ್ನು ನೇಮಿಸಲಾಯಿತು. ಪ್ರತಿ ಶಾಲಾ ಕಟ್ಟಡ ನವೀಕರಣಕ್ಕೆ ರೂ.2 ಕೋಟಿ ನೀಡಲಾಗಿದೆ ಎಂದರು.

ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ
ನಿಖಿಲ್ ಕುಮಾರಸ್ವಾಮಿ ಭವಿಷ್ಯದ ನಾಯಕ; ರಾಜ್ಯಾದ್ಯಂತ ಪಕ್ಷದ ಬಲವರ್ಧನೆ: ಹೆಚ್.ಡಿ ಕುಮಾರಸ್ವಾಮಿ

ಮಂಡ್ಯಜಿಲ್ಲೆಯಲ್ಲಿ ನಿರುದ್ಯೋಗ ಸಮಸ್ಯೆ ಇದೆ. ಮುಂದಿನ ದಿನಗಳಲ್ಲಿ ಭದ್ರಾವತಿಯಲ್ಲಿರುವ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಸ್ಥಾವರವನ್ನು 15,000 ಕೋಟಿ ವೆಚ್ಚದಲ್ಲಿ ಪುನರುಜ್ಜೀವನಗೊಳಿಸಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಈ ಮೂಲಕ ನಿರುದ್ಯೋಗ ಸಮಸ್ಯೆ ನಿವಾರಣೆಗೆ ಕ್ರಮ ವಹಿಸಲಾಗುವುದು ಎಂದು ಹೇಳಿದರು.

ಮಂಡ್ಯ ಜಿಲ್ಲೆಗೆ ಐಐಟಿ ಬೇಕು ಎಂಬ ಎಂಎಲ್ಸಿ ದಿನೇಶ್ ಗೂಳಿಗೌಡ ಅವರ ಬೇಡಿಕೆಗೆ ಪ್ರತಿಕ್ರಿಯಿಸಿ, ಹಾಸನದಲ್ಲಿ ಐಐಟಿ ಸ್ಥಾಪಿಸುವಂತೆ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರಿಂದ ಬೇಡಿಕೆ ಇದೆ. ಮಂಡ್ಯದಲ್ಲಿ ಐಐಟಿ ಸ್ಥಾಪಿಸಲು ಕೇಂದ್ರ ಸಚಿವರೊಂದಿಗೆ ಚರ್ಚಿಸುತ್ತೇವೆ, ನವದೆಹಲಿಯಲ್ಲಿ ಕನ್ನಡ ಸಮ್ಮೇಳನವನ್ನು ಆಯೋಜಿಸುವಂತೆ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಡಾ.ಮಹೇಶ್ ಜೋಶಿ ಅವರಿಗೆ ಮನವಿ ಮಾಡುತ್ತೇನೆ ಎಂದು ಹೇಳಿದರು.

ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಮಾತನಾಡಿ, ಸಮಾವೇಶದ ಸಂದರ್ಭದಲ್ಲಿ ಕೈಗೊಂಡ ನಿರ್ಣಯವನ್ನು ಜಾರಿಗೊಳಿಸಬೇಕು. ‘ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಮಹೇಶ ಜೋಶಿ ಅವರು 88ನೇ ಸಮ್ಮೇಳನದಲ್ಲಿ ಕೈಗೊಂಡಿರುವ ಕ್ರಮಗಳ ವರದಿಯನ್ನು ಬಿಡುಗಡೆ ಮಾಡಬೇಕು’ ಎಂದು ಒತ್ತಾಯಿಸಿದರು.

ನಂತರ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಮಹೇಶ್ ಜೋಶಿ ಅವರು, ಗಡಿ ಜಿಲ್ಲೆ ಬಳ್ಳಾರಿಯಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ ಎಂದು ಘೋಷಿಸಿದರು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Google Preferred source

Advertisement

X
Kannada Prabha
www.kannadaprabha.com