
ಬೆಂಗಳೂರು: ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಮತ್ತು ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಲು ಸಾವಿರಾರು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಮತ್ತು ಎಲ್ಲ ರೀತಿಯ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ ಸೋಮವಾರ ಹೇಳಿದ್ದಾರೆ.
ಸಾರ್ವಜನಿಕರು ಯಾವುದೇ ಅಹಿತಕರ ಘಟನೆಗಳಲ್ಲಿ ಭಾಗಿಯಾಗದಂತೆ ಮನವಿ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಬೆಂಗಳೂರು ನಗರ ಮತ್ತು ಇಡೀ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಲು ಎಲ್ಲ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಗೊಂದಲ ಸೃಷ್ಟಿಸಲು ಬಯಸುವವರಿಗೆ ಎಚ್ಚರಿಕೆ ನೀಡಿದ್ದೇವೆ. ಭದ್ರತೆಗಾಗಿ ಸಾವಿರಾರು ಪೊಲೀಸರನ್ನು ನಿಯೋಜಿಸಲಾಗಿದ್ದು, ಯಾವುದೇ ಅಹಿತಕರ ಘಟನೆಗಳಲ್ಲಿ ಭಾಗಿಯಾಗದಂತೆ ಸಾರ್ವಜನಿಕರಲ್ಲಿ ಮನವಿ ಮಾಡಿಕೊಳ್ಳುತ್ತೇನೆ. ಹೊಸ ವರ್ಷವನ್ನು ಸಂತೋಷದಿಂದ ಆಚರಿಸಿ. ನಿಮ್ಮ ಹೊಸ ವರ್ಷವು ಅತ್ಯಂತ ಸಂತೋಷದಾಯಕವಾಗಿರಲಿ' ಎಂದು ತಿಳಿಸಿದರು.
ಈಮಧ್ಯೆ, ಸುದ್ದಿಸಂಸ್ಥೆ ಪಿಟಿಐ ಜೊತೆಗೆ ಮಾತನಾಡಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಎಲ್ಲ ಇಲಾಖೆಗಳಿಂದ ನಗರದಾದ್ಯಂತ 1000ಕ್ಕೂ ಹೆಚ್ಚು ಕ್ಯಾಮೆರಾಗಳನ್ನು ಅಳವಡಿಸಲಾಗಿದೆ ಮತ್ತು ಯಾವುದೇ ರೀತಿಯ ತೊಂದರೆಗಳನ್ನು ಸಹಿಸುವುದಿಲ್ಲ ಎಂದು ಎಚ್ಚರಿಸಿದ್ದಾರೆ.
ಕಾನೂನು ಸುವ್ಯವಸ್ಥೆ ಕಾಪಾಡಲಾಗುವುದು. ನಾವು ಬಹಳ ಜಾಗರೂಕರಾಗಿರಬೇಕು. ಬೆಂಗಳೂರಿನ ಚಿತ್ರಣವು ಬಹಳ ಮುಖ್ಯವಾಗಿದೆ ಮತ್ತು ಯಾವುದೇ ರೀತಿಯ ತೊಂದರೆ ಉಂಟುಮಾಡಿದರೆ, ಅವುಗಳಿಗೆ ಪೊಲೀಸರು ತಕ್ಕ ಉತ್ತರ ನೀಡುತ್ತಾರೆ' ಎಂದು ಅವರು ಹೇಳಿದರು.
ನಗರದಲ್ಲಿ ಮುಂಬರುವ ಹೊಸ ವರ್ಷಾಚರಣೆಗೆ ಬೆಂಗಳೂರು ಪೊಲೀಸರು ವ್ಯಾಪಕವಾದ ವ್ಯವಸ್ಥೆಗಳನ್ನು ಮಾಡಿದ್ದು, ಸಾರ್ವಜನಿಕರ ಸುರಕ್ಷತೆ ಮತ್ತು ಸುಗಮ ಸಂಚಾರವನ್ನು ಗಮನದಲ್ಲಿಟ್ಟುಕೊಂಡು ಭಾರಿ ಜನಸಂದಣಿ ಇರುವ ಪ್ರದೇಶಗಳಲ್ಲಿ ಬಿಗಿ ಭದ್ರತೆಯನ್ನು ನಿಯೋಜಿಸಲಾಗಿದೆ.
ಸಿವಿಲ್ ಡಿಫೆನ್ಸ್ ಸಿಬ್ಬಂದಿ ಮತ್ತು ಹಿರಿಯ ಅಧಿಕಾರಿಗಳು ಸೇರಿದಂತೆ ಒಟ್ಟು 11,830 ಪೊಲೀಸ್ ಸಿಬ್ಬಂದಿ ನಗರದಾದ್ಯಂತ ಕಟ್ಟುನಿಟ್ಟಿನ ನಿಗಾ ವಹಿಸಲಿದ್ದಾರೆ. ಯಾವುದೇ ಸಂಭಾವ್ಯ ರೇವ್ ಪಾರ್ಟಿಗಳು ಮತ್ತು ಮಾದಕವಸ್ತು ಸಂಬಂಧಿತ ಚಟುವಟಿಕೆಗಳನ್ನು ಮೇಲ್ವಿಚಾರಣೆ ಮಾಡುತ್ತಾರೆ.
ಹೊಸ ವರ್ಷಾಚರಣೆಗೆ ಸರ್ಕಾರವು ಮಧ್ಯರಾತ್ರಿ 1 ಗಂಟೆಯವರೆಗೆ ಮಾತ್ರ ಅನುಮತಿ ನೀಡಿದೆ. ಸಾರ್ವಜನಿಕರಿಗೆ ನಿಗದಿತ ಸಮಯದ ಮಿತಿಯೊಳಗೆ ಮಾತ್ರ ಹೊಸ ವರ್ಷಾಚರಣೆಗೆ ಅವಕಾಶವಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Advertisement