ಕೊಪ್ಪಳ: ಮೊರಾರ್ಜಿ ದೇಸಾಯಿ ವಸತಿ ಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಿಂದ ರ‍್ಯಾಗಿಂಗ್; ಖಾಸಗಿ ಅಂಗಗಳಿಗೆ ಗಾಯ!

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೇಮಗುಡ್ಡದಲ್ಲಿರುವ ಮೊರಾರ್ಜಿ ದೇಸಾಯಿ ಅಲ್ಪಸಂಖ್ಯಾತರ ವಸತಿ ಶಾಲೆಯಲ್ಲಿ ಎಸ್​ಎಸ್​ಎಲ್​ಸಿ ಮಕ್ಕಳಿಂದ, ಜ್ಯೂನಿಯರ್ ವಿದ್ಯಾರ್ಥಿಗಳಿಗೆ ರ‍್ಯಾಗಿಂಗ್ ಮಾಡಿರುವ ಆರೋಪ ಕೇಳಿ ಬಂದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಕೊಪ್ಪಳ: ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೇಮಗುಡ್ಡದಲ್ಲಿರುವ ಮೊರಾರ್ಜಿ ದೇಸಾಯಿ ಅಲ್ಪಸಂಖ್ಯಾತರ ವಸತಿ ಶಾಲೆಯಲ್ಲಿ ಎಸ್​ಎಸ್​ಎಲ್​ಸಿ ಮಕ್ಕಳಿಂದ, ಜ್ಯೂನಿಯರ್ ವಿದ್ಯಾರ್ಥಿಗಳಿಗೆ ರ‍್ಯಾಗಿಂಗ್ ಮಾಡಿರುವ ಆರೋಪ ಕೇಳಿ ಬಂದಿದೆ.

ಗಾಯಗೊಂಡಿರುವ ಮೂವರು ವಿದ್ಯಾರ್ಥಿಗಳು ಕೊಪ್ಪಳದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿದ್ಯಾರ್ಥಿಗಳ ಖಾಸಗಿ ಭಾಗಗಳಲ್ಲಿ ಗಾಯಗಳಾಗಿದ್ದು, ಆಘಾತದ ಸ್ಥಿತಿಯಲ್ಲಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ. ಎಂಟು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಗುಂಪು 8 ಮತ್ತು 9 ನೇ ತರಗತಿಯ ವಿದ್ಯಾರ್ಥಿಗಳಿಗೆ ಚಿತ್ರ ಹಿಂಸೆ ಕೊಟ್ಟು ರ್ಯಾಗಿಂಗ್ ಮಾಡಿದೆ ಎಂದು ಸಂತ್ರಸ್ತ ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಹಿಂಸೆ ಸಹಿಸಿಕೊಳ್ಳಲಾಗದೆ ಸೋಮವಾರ ಕೆಲವು ವಿದ್ಯಾರ್ಥಿಗಳು ತಮ್ಮ ಪೋಷಕರಿಗೆ ಮಾಹಿತಿ ನೀಡಿದ ನಂತರ ಅಮಾನುಷ ಘಟನೆ ಬೆಳಕಿಗೆ ಬಂದಿದೆ. ಕೊಪ್ಪಳ ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳು ಹಾಸ್ಟೆಲ್‌ಗೆ ಧಾವಿಸಿ ವಿದ್ಯಾರ್ಥಿಗಳ ಹೇಳಿಕೆ ಪಡೆದರು. ಕೆಲವು ಕಿರಿಯ ವಿದ್ಯಾರ್ಥಿಗಳು ಅನುಭವಿಸುತ್ತಿರುವ ದೌರ್ಜನ್ಯದ ಬಗ್ಗೆ ಹಾಸ್ಟೆಲ್ ವಾರ್ಡನ್‌ಗೆ ಮಾಹಿತಿ ನೀಡಲಾಯಿತು, ಆದರೆ ಮನವಿಗಳನ್ನು ನಿರ್ಲಕ್ಷಿಸಲಾಗಿದೆ ಎಂದು ಕೆಲವು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಈ ಬಗ್ಗೆ ವರದಿ ನೀಡುವಂತೆ ಸಮಾಜ ಕಲ್ಯಾಣ ಇಲಾಖೆಗೆ ಜಿಲ್ಲಾಡಳಿತಕ್ಕೆ ಸೂಚಿಸಿದೆ. ಇದುವರೆಗೆ ಯಾವುದೇ ಪೋಷಕರಿಂದ ಪ್ರಕರಣ ದಾಖಲಾಗಿಲ್ಲ ಎಂದು ಕೊಪ್ಪಳ ಪೊಲೀಸರು ತಿಳಿಸಿದ್ದಾರೆ. “ನಾವು ಸಂತ್ರಸ್ತರೊಂದಿಗೆ ಮಾತನಾಡಿದ್ದೇವೆ ಮತ್ತು ರ್ಯಾಗಿಂಗ್ ಆರೋಪ ಹೊತ್ತಿರುವ ವಿದ್ಯಾರ್ಥಿಗಳ ಬಗ್ಗೆಯೂ ವಿಚಾರಿಸಿದ್ದೇವೆ. ಘಟನೆಗೆ ಸಂಬಂಧಿಸಿದಂತೆ ಕೆಲವು ಪೋಷಕರು ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲು ಬಯಸಿದ್ದರು. ಆದರೆ, ಇದುವರೆಗೆ ಯಾವುದೇ ಪ್ರಕರಣ ದಾಖಲಾಗಿಲ್ಲ. ಘಟನೆಯ ಕುರಿತು ಹಿರಿಯ ಪೊಲೀಸ್ ಅಧಿಕಾರಿಗಳು ವರದಿ ಕೇಳಿದ್ದು, ಶೀಘ್ರದಲ್ಲೇ ಸಲ್ಲಿಸಲಾಗುವುದು ಎಂದು ಗಂಗಾವತಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಂತ್ರಸ್ತರ ಪೋಷಕರು ಆಡಳಿತ ಮಂಡಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆಯ ನಂತರ ಕೆಲವು ಪೋಷಕರು ತಮ್ಮ  ಮಕ್ಕಳನ್ನು ಮನೆಗೆ ಕರೆದುಕೊಂಡು ಹೋಗಿದ್ದಾರೆ. ರ್ಯಾಗಿಂಗ್‌ನಲ್ಲಿ ಭಾಗಿಯಾಗಿದ್ದ ಎಲ್ಲಾ ಎಂಟು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳನ್ನು ಹೆಸರುಗಳನ್ನು ಸಂತ್ರಸ್ತ ವಿದ್ಯಾರ್ಥಿಗಳು ತಿಳಿಸಿದ್ದಾರೆ. ಇದು ಅಪರಾಧ ಎಂದು ಗೊತ್ತಿದ್ದರೂ ವಿದ್ಯಾರ್ಥಿಗಳು  ಹೀಗೆ ಮಾಡಿದ್ದಾರೆ. ಯಾವುದೇ ದೂರು ದಾಖಲಿಸಬೇಡಿ ಎಂದು ಆರೋಪಿ ವಿದ್ಯಾರ್ಥಿಗಳ ಪೋಷಕರು ಮನವಿ ಮಾಡಿದ್ದಾರೆ.

ಆದರೆ ನಮ್ಮ ಮಕ್ಕಳ ನರಳಾಟ  ನೋಡಿ ನಾವು ಸುಮ್ಮನಿರುವುದು ಹೇಗೆ? ಲೋಪ ಎಸಗಿರುವ ಹಾಸ್ಟೆಲ್ ಆಡಳಿತದ ವಿರುದ್ಧ ಪ್ರಕರಣ ದಾಖಲಿಸಲು ಮುಂದಾಗಿದ್ದೇವೆ. ಮುಂದೆ ಕಿರಿಯ ವಿದ್ಯಾರ್ಥಿಗಳಿಗೆ ರ್ಯಾಗಿಂಗ್ ಮಾಡುವುದಿಲ್ಲ ಎಂದು ಆರೋಪಿತ ವಿದ್ಯಾರ್ಥಿಗಳಿಂದ ಲಿಖಿತ ಹೇಳಿಕೆ ಬರೆಸಿಕೊಡಬೇಕು ಎಂದು ಸಂತ್ರಸ್ತ ವಿದ್ಯಾರ್ಥಿಯ ಪೋಷರಕರೊಬ್ಬರು ಆಗ್ರಹಿಸಿದ್ದಾರೆ.

ಕಲ್ಯಾಣ ಕರ್ನಾಟಕದ ವಿವಿಧ ಜಿಲ್ಲೆಗಳ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 246 ವಿದ್ಯಾರ್ಥಿಗಳು ಶಾಲೆಯಲ್ಲಿ ಓದುತ್ತಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳು ಶಾಲೆಯ ಆವರಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com