ಬೆಂಗಳೂರು: ರಾಜ್ಯ ಬಜೆಟ್ ಅಧಿವೇಶನ ಸೋಮವಾರದಿಂದ ಆರಂಭವಾಗಲಿದ್ದು, ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವಕು ಫೆಬ್ರವರಿ 16ರಂದು ಬಜೆಟ್ ಮಂಡನೆ ಮಾಡಲಿದ್ದಾರೆ. ಇಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿಧಾನ ಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.
ಅಧಿವೇಶನದಲ್ಲಿ ಕೇಂದ್ರದಿಂದ ತೆರಿಗೆ ಹಂಚಿಕೆಯಲ್ಲಿ ತಾರತಮ್ಯ, ಬರ ಪರಿಹಾರ ಬಿಡುಗಡೆ ವಿಳಂಬ, ಕಾಮಗಾರಿಯಲ್ಲಿ ಶೇಕಡಾ 40ರಷ್ಟು ಕಮಿಷನ್ ಆರೋಪ, ರಾಜ್ಯದ ಹಣಕಾಸು ಸ್ಥಿತಿ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಸದನದಲ್ಲಿ ವಾಕ್ಸಮರ ನಡೆಯುವ ಸಾಧ್ಯತೆ ಇದೆ. ಹಾಗೆಯೇ ಮಂಡ್ಯ ಜಿಲ್ಲೆಯ ಕೆರೆಗೋಡು ಗ್ರಾಮದಲ್ಲಿರುವ ಧ್ವಜಸ್ತಂಭದಲ್ಲಿ ಅನುಮತಿ ಪಡೆಯದೆ ಹಾರಿಸಲಾಗಿದ್ದ ಹನುಮ ಧ್ವಜವನ್ನು ಜಿಲ್ಲಾಡಳಿತ ತೆರವು ಗೊಳಿಸಿದ ಘಟನೆಯನ್ನು ಮುಂದಿಟ್ಟುಕೊಂಡು ರಾಜ್ಯಸರ್ಕಾರದ ವಿರುದ್ಧ ಮುಗಿಬೀಳಲು ಬಿಜೆಪಿ ಸಿದ್ಧತೆ ನಡೆಸಿದೆ.
ಬಜೆಟ್ ಅಧಿವೇಶನ ಶುರುವಾಗುತ್ತಿರುವ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ನಿನ್ನೆ ಬಜೆಟ್ ಪೂರ್ವಭಾವಿ ಸಭೆ ನಡೆಸಿದ್ದರು. ವಾಣಿಜ್ಯ ಸಂಘ-ಸಂಸ್ಥೆಗಳ ಅಹವಾಲು ಪಡೆದಿದ್ದರು. ಸಾರಿಗೆ ಒಕ್ಕೂಟ, ರೈತ ಸಂಘಟನೆಗಳು, ವಾಣಿಜ್ಯ ಸಂಘಟನೆಗಳು, ಐಟಿ, ಕೈಗಾರಿಗಾ ಸಂಘಟನೆಗಳ ಜೊತೆ ಸಿಎಂ ಪೂರ್ವಭಾವಿ ಸಭೆ ನಡೆಸಿ ಬಜೆಟ್ ಕುರಿತಂತೆ ಬೇಡಿಕೆ, ಸಲಹೆ ಪಡೆದರು.
ಈ ವೇಳೆ ರೈತ ಮುಖಂಡರು ಗ್ಯಾರಂಟಿ ಯೋಜನೆಗಳಿಗೆ ಅಭಿನಂದನೆ ಸಲ್ಲಿಸಿದರು. ಸಂಪೂರ್ಣ ಕೃಷಿ ಸಾಲಮನ್ನ ಮಾಡುವಂತೆ ಸಿಎಂಗೆ ಒತ್ತಾಯಿಸಿದರು. ಇನ್ನು ಸಾರಿಗೆ ಸಂಘಟನೆ ಕೂಡ ಹಲವು ಬೇಡಿಕೆಗಳನ್ನ ಇಟ್ಟಿದೆ.
Advertisement