ಮಂಗಳೂರು: ಮಂಗಳೂರಿನ ಜೆಪ್ಪುವಿನಲ್ಲಿರುವ ಸೇಂಟ್ ಜೆರೋಸಾ ಆಂಗ್ಲ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇರೆಗೆ ಶಾಲೆಬಳಿ ಪ್ರತಿಭಟನೆ ನಡೆಸಿದ್ದ ಬಿಜೆಪಿ ಶಾಸಕರ ವಿರುದ್ಧ ಪ್ರಕರಣ ದಾಖಲಾಗಿದೆ.
ಬಿಜೆಪಿ ಶಾಸಕರಾದ ಡಿ ವೇದವ್ಯಾಸ್ ಕಾಮತ್ ಮತ್ತು ಭರತ್ ಶೆಟ್ಟಿ, ವಿಎಚ್ಪಿ ಮುಖಂಡ ಶರಣ್ ಪಂಪ್ವೆಲ್ ಮತ್ತು ಇತರರ ವಿರುದ್ಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು, ಕಾನೂನುಬಾಹಿರ ಸಭೆ, ಧಾರ್ಮಿಕ ಭಾವನೆಗಳಿಗೆ ಧಕ್ಕೆ, ಕ್ರಿಮಿನಲ್ ಬೆದರಿಕೆ ಮತ್ತು ಇತರರ ವಿರುದ್ಧ ಸೇಂಟ್ ಜೆರೋಸಾ ಶಾಲೆಯ ಮುಂದೆ ಗಲಾಟೆ ಮಾಡಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ.
ಶಿಕ್ಷಕಿ ಶ್ರೀ ಪ್ರಭಾ ಅವರು ತರಗತಿಯಲ್ಲಿ ಹಿಂದೂ ಧರ್ಮ ಮತ್ತು ಅದರ ದೇವರುಗಳ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿ ಶಾಸಕರು ಮತ್ತು ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದ್ದರು. ಅನಿಲ್ ಜೆರಾಲ್ಡ್ ಲೋಬೋ ಅವರು ಮಂಗಳೂರು ದಕ್ಷಿಣ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಬಿಜೆಪಿ ಮತ್ತು ವಿಎಚ್ಪಿ ಮುಖಂಡರು ಶಾಲೆ ಎದುರು ಅಕ್ರಮವಾಗಿ ಪ್ರತಿಭಟನೆ ನಡೆಸಿ ಜೈ ಶ್ರೀರಾಮ್ ಘೋಷಣೆ ಕೂಗಿ, ಕ್ರೈಸ್ತ ಧರ್ಮದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ, ವಿದ್ಯಾರ್ಥಿಗಳನ್ನು ನಿಯಮ ಉಲ್ಲಂಘಿಸುವಂತೆ ಪ್ರಚೋದನೆ ನೀಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಅಲ್ಲದೆ ಶಾಲೆಯ ಮತ್ತು ಶಾಲಾ ಆಡಳಿತವನ್ನು ಬೆದರಿಸುತ್ತಿದ್ದಾರೆ. ಹಿಂದೂ-ಕ್ರೈಸ್ತರ ನಡುವೆ ಗಲಭೆ ಉಂಟು ಮಾಡಿ ದಕ್ಷಿಣ ಕನ್ನಡ ಜಿಲ್ಲೆಯ ಶಾಂತಿಗೆ ಧಕ್ಕೆ ತರುವ ಉದ್ದೇಶದಿಂದ ಹೇಳಿಕೆ ನೀಡುತ್ತಿದ್ದಾರೆ ಎಂಬ ಆರೋಪವೂ ಅವರ ಮೇಲಿದೆ.
Advertisement