ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಂಗನ ಕಾಯಿಲೆ ಪ್ರಕರಣಗಳಲ್ಲಿ ಹೆಚ್ಚಳವಾಗುತ್ತಿದ್ದು, ಬುಧವಾರ ಮತ್ತೆ 6 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ.
ಸೋಂಕಿಗೆ ಈವರೆಗೂ ಓರ್ವ ವ್ಯಕ್ತಿ ಬಲಿಯಾಗಿದ್ದಾರೆ. 12 ಮಂದಿ ಸೋಂಕಿತರು ಚೇತರಿಸಿಕೊಂಡಿದ್ದಾರೆ. ರೋಗ ತಡೆಗೆ ಆರೋಗ್ಯ ಇಲಾಖೆ ಹಾಗೂ ಜಿಲ್ಲಾಡಳಿತ ಎಲ್ಲ ಕ್ರಮಗಳನ್ನು ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಿಳಿಸಿದ್ದಾರೆ.
ಈ ನಡುವೆ ಆರೋಗ್ಯ ಇಲಾಖೆ ಹಾಗೂ ತಹಶೀಲ್ದಾರ್ ಹೋಂಸ್ಟೇ ಮಾಲೀಕರು ಹಾಗೂ ಬೆಳೆಗಾರರೊಂದಿಗೆ ಸಭೆ ನಡೆಸಿದ್ದು, ಸೋಂಕು ಕುರಿತು ಮಾಹಿತಿ ಹಾಗೂ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಅಲ್ಲದೆ, ಮಂಗಗಳು ಸತ್ತಿರುವ ಪ್ರದೇಶಗಳಿಗೆ ಭೇಟಿ ನೀಡದಂತೆ ಹಾಗೂ ಕಟ್ಟಿಗೆಗಳ ಸಂಗ್ರಹಿಸಲು ಅರಣ್ಯಕ್ಕೆ ಹೋಗುವಾಗ ಡಿಎಂಪಿ ಅಥವಾ ಬೇವಿನ ಎಣ್ಣೆಯಂತಹ ತೈಲವನ್ನು ಬಳಕೆ ಮಾಡುವಂತೆ ಸ್ಥಳೀಯ ನಿವಾಸಿಗಳಿಗೆ ಸೂಚನೆ ನೀಡಿದ್ದಾರೆ.
ಮಂಗಗಳ ಸಾವುಗಳ ಬಗ್ಗೆ ತಿಳಿಯುತ್ತಿದ್ದಂತೆಯೇ ಅರಣ್ಯ ಮತ್ತು ಆರೋಗ್ಯ ಇಲಾಖೆ, ಪಶುಸಂಗೋಪನೆ ಮತ್ತು ಪಶುವೈದ್ಯರ ಗಮನಕ್ಕೆ ತರುವಂತೆಯೂ ತಿಳಿಸಿದ್ದಾರೆ.
ಜಿಲ್ಲಾ ಆರೋಗ್ಯಾಧಿಕಾರಿ ಡಾ.ಅಶ್ವಥಬಾಬು ಮಾತನಾಡಿ, ಕೆಎಫ್ಡಿ ಪಾಸಿಟಿವ್ ಕಂಡುಬಂದಲ್ಲಿ ತಾಲೂಕು ಅಥವಾ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುವುದು. ಆಯುಷ್ಮಾನ್ ಭಾರತ್ ಆರೋಗ್ಯ ಯೋಜನೆಯಡಿ ಮಣಿಪಾಲ್ ಆಸ್ಪತ್ರೆ ಮತ್ತು ಶಿವಮೊಗ್ಗದ ಮೆಕ್ಗನ್ ಆಸ್ಪತ್ರೆಯಲ್ಲಿಯೂ ಉಚಿತವಾಗಿ ಚಿಕಿತ್ಸೆ ನೀಡಲಾಗುತ್ತದೆ ಎಂದರು.
Advertisement