ಕರ್ನಾಟಕ ಬಜೆಟ್‌ 2024: ಪ್ರತಿ ಜಿಲ್ಲೆಯಲ್ಲೂ ಕಿಮೊಥೆರಪಿ ಕೇಂದ್ರ ಸ್ಥಾಪನೆ; ರಾಜ್ಯ ಬಜೆಟ್ ನಲ್ಲಿ ಆರೋಗ್ಯ ಕ್ಷೇತ್ರಕ್ಕೆ ಸಿಕ್ಕಿದ್ದೇನು?

ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಸಕ್ತ ಸಾಲಿನ ಕರ್ನಾಟಕ ಬಜೆಟ್‌ 2024 ಮಂಡಿಸುತ್ತಿದ್ದು, ಈ ಬಾರಿಯ ಬಜೆಟ್‌ನಲ್ಲಿ ಹಲವು ಪ್ರಮುಖ ಘೋಷಣೆಗಳನ್ನು ಮಾಡುವ ಮೂಲಕ ಗಮನ ಸೆಳೆದಿದ್ದಾರೆ.

ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಯೋಜನೆಗೆ ಸಂಬಂಧಿಸಿ ಹತ್ತಾರು ಯೋಜನೆಗಳನ್ನು ಘೋಷಿಸಿದ್ದು, ಅದರಲ್ಲಿ ಕ್ಯಾನ್ಸರ್‌ ರೋಗಿಗಳಿಗೆ ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ಕಿಮೋಥೆರಪಿ ಕೇಂದ್ರ, ಮಹಿಳೆಯರಲ್ಲಿ ಹೆಚ್ಚುತ್ತಿರುವ ಸ್ತನ ಕ್ಯಾನ್ಸರ್ ಮತ್ತು ಗರ್ಭಕಂಠದ ಕ್ಯಾನ್ಸರ್ ಅನ್ನು ಪ್ರಾರಂಭಿಕ ಹಂತದಲ್ಲಿಯೇ ಪತ್ತೆ ಹಚ್ಚಿ ಚಿಕಿತ್ಸೆ ನೀಡಲು 20 ಜಿಲ್ಲಾ ಆಸ್ಪತ್ರೆಗಳಲ್ಲಿ ಡಿಜಿಟಲ್‌ ಮ್ಯಾಮೊಗ್ರಫಿ ಯಂತ್ರ ಅಳವಡಿಕೆ, ತೀವ್ರ ಹೃದ್ರೋಗ ಹಾಗೂ ಪಾರ್ಶ್ವವಾಯು ಚಿಕಿತ್ಸೆಗಾಗಿ ಥ್ರಂಬೋಲಿಟಿಕ್ ಔಷಧಗಳ ಸಂಗ್ರಹಣೆ ಹೀಗೆ ಹಲವು ಯೋಜನೆಗಳನ್ನು ಘೋಷಿಸಿದ್ದಾರೆ,

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಸಿಕ್ಕ ಪ್ರಮುಖ ಕೊಡುಗೆಗಳು ಇಂತಿವೆ...

  • ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆ ಮತ್ತು ನಿರಂತರ ಅನುಸರಣೆಗಾಗಿ ಬಹುತೇಕ ಜಿಲ್ಲೆಗಳಲ್ಲಿ ಕಿಮೊಥೆರಪಿ ಚಿಕಿತ್ಸಾ ಕೇಂದ್ರಗಳು ಲಭ್ಯವಿರದ ಕಾರಣ, ಸರ್ಕಾರವು 20 ಕೋಟಿ ರೂಪಾಯಿ ವೆಚ್ಚದಲ್ಲಿ ಪ್ರತಿ ಜಿಲ್ಲೆಯಲ್ಲಿಯೂ ಒಂದೊಂದು ಡೇ-ಕೇರ್ ಕಿಮೋಥೆರಪಿ ಕೇಂದ್ರವನ್ನು ಸ್ಥಾಪನೆ.

  • ಮಹಿಳೆಯರಲ್ಲಿ ಹೆಚ್ಚುತ್ತಿರುವ ಸ್ತನ ಕ್ಯಾನ್ಸರ್ ಮತ್ತು ಗರ್ಭಕಂಠದ ಕ್ಯಾನ್ಸರ್ ಅನ್ನು ಪ್ರಾರಂಭಿಕ ಹಂತದಲ್ಲಿಯೇ ಪತ್ತೆ ಹಚ್ಚಿ ಚಿಕಿತ್ಸೆ ನೀಡಲು 20 ಜಿಲ್ಲಾ ಆಸ್ಪತ್ರೆಗಳಲ್ಲಿ ಡಿಜಿಟಲ್‌ ಮ್ಯಾಮೊಗ್ರಫಿ ಯಂತ್ರಗಳ ಅಳವಡಿಕೆ, ಬೆಂಗಳೂರಿನ ಕೆ.ಸಿ. ಜನರಲ್ ಆಸ್ಪತ್ರೆ ಮತ್ತು ಉಡುಪಿ, ಕೋಲಾರ ಹಾಗೂ ದಾವಣಗೆರೆ ಜಿಲ್ಲಾ ಆಸ್ಪತ್ರೆಗಳಿಗೆ ಕಾಲ್ಪಸ್ಕೊಪಿ ಉಪಕರಣಗಳ ಖರೀದಿ 21 ಕೋಟಿ ರೂಪಾಯಿ ಅನುದಾನ.

  • ಮುಂದಿನ ಎರಡು ವರ್ಷಗಳಲ್ಲಿ ರಾಜ್ಯದ ಎಲ್ಲಾ ತಾಲ್ಲೂಕು ಆಸ್ಪತ್ರೆಗಳಿಗೆ ಹಬ್‌ ಅಂಡ್‌ ಸ್ಪೋಕ್‌ ಮಾದರಿಯಲ್ಲಿ ವಿಸ್ತರಿಸುವ ಮೂಲಕ ಸ್ಟೆಮಿ (STEMI- ತೀವ್ರ ಹೃದ್ರೋಗ) ಚಿಕಿತ್ಸೆಯನ್ನು ಬಲಪಡಿಸಲಾಗುವುದು. ಇದಲ್ಲದೇ ಸ್ಟೆಮಿ ಹಾಗೂ ಸ್ಟ್ರೋಕ್‌ ಚಿಕಿತ್ಸೆಗಾಗಿ ಥ್ರಂಬೋಲಿಟಿಕ್ ಔಷಧಗಳ (Thrombolytic Drugs) ಸಂಗ್ರಹಣೆಗಾಗಿ 32 ಕೋಟಿ ರೂಪಾಯಿಗಳು.

  • ರಾಜ್ಯದಲ್ಲಿ ತೀವ್ರ ಅಸ್ವಸ್ಥತೆಯಿಂದ ಬಳಲುತ್ತಿರುವ ರೋಗಿಗಳಿಗೆ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡಿ ಪ್ರಾಣ ಉಳಿಸುವ ಉದ್ದೇಶದಿಂದ ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಆಧುನಿಕ ಕ್ರಿಟಿಕಲ್ ಕೇರ್ ಬ್ಲಾಕ್‌ಗಳನ್ನು ಸ್ಥಾಪಿಸಲಾಗುತ್ತದೆ. ಈಗಾಗಲೇ 15 ಜಿಲ್ಲೆಗಳಲ್ಲಿ ನಿರ್ಮಾಣ ಕಾರ್ಯ ಪ್ರಾರಂಭವಾಗಿದ್ದು, ಪ್ರಸಕ್ತ ಸಾಲಿನಲ್ಲಿ ಉಡುಪಿ, ದಾವಣಗೆರೆ, ವಿಜಯಪುರ, ಮೈಸೂರು, ಮಂಡ್ಯ, ಧಾರವಾಡ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ 187 ಕೋಟಿ ರೂ. ವೆಚ್ಚದಲ್ಲಿ ಕಟ್ಟಡ ಕಾಮಗಾರಿಗಳನ್ನು ಪ್ರಾರಂಭಿಸಲಾಗುವುದು. ಮುಂದಿನ ಸಾಲಿನಲ್ಲಿ ಉಳಿದ 9 ಜಿಲ್ಲೆಗಳಲ್ಲಿಯೂ ಕ್ರಿಟಿಕಲ್ ಕೇರ್ ಬ್ಲಾಕ್‌ಗಳನ್ನು ಸ್ಥಾಪಿಸಲಾಗುವುದು.

  • ತಾಲ್ಲೂಕು ಆಸ್ಪತ್ರೆಗಳಿಲ್ಲದ ಆನೇಕಲ್, ನೆಲಮಂಗಲ, ಹೊಸಕೋಟೆ, ಶೃಂಗೇರಿ, ಖಾನಾಪುರ, ಶಿರಹಟ್ಟಿ ಮತ್ತು ಯಳಂದೂರು ತಾಲ್ಲೂಕುಗಳಲ್ಲಿ ಪ್ರಸಕ್ತ ಸಾಲಿನಲ್ಲಿ 100 ಹಾಸಿಗೆ ಸಾಮರ್ಥ್ಯದ ತಾಲ್ಲೂಕು ಆಸ್ಪತ್ರೆಗಳನ್ನು 280 ಕೋಟಿ ರೂ. ಗಳ ವೆಚ್ಚದಲ್ಲಿ ನಿರ್ಮಿಸಲಾಗುವುದು ಎಂದು ಇಂದಿನ ಬಜೆಟ್‌ ತಿಳಿಸಿದ್ದಾರೆ.

  • ಆರೋಗ್ಯ ಇಲಾಖೆಯ ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳ ದುರಸ್ತಿ ಮತ್ತು ಉನ್ನತೀಕರಣಕ್ಕೆ 75 ಕೋಟಿ ರೂ. ಗಳ ಅನುದಾನ. ಬೆಂಗಳೂರಿನ ಕೆ.ಸಿ. ಜನರಲ್ ಆಸ್ಪತ್ರೆ ಆವರಣದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡ ಮತ್ತಿತರ ಮೂಲಸೌಕರ್ಯಕ್ಕಾಗಿ 150 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿಗಳನ್ನು ಪ್ರಾರಂಭ.

  • ಮುಂದಿನ 2 ವರ್ಷಗಳಲ್ಲಿ ಗ್ರಾಮೀಣ ಪ್ರದೇಶದ ಜನರಿಗೆ 24x7 ತುರ್ತು ಆರೋಗ್ಯ ಸೇವೆಯನ್ನು ನೀಡಲು 350 ಕೋಟಿ ರೂ.ಗಳ ವೆಚ್ಚದಲ್ಲಿ 25 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳನ್ನಾಗಿ ಮೇಲ್ದರ್ಜೆಗೇರಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ 15 ಸಮುದಾಯ ಆರೋಗ್ಯ ಕೇಂದ್ರಗಳನ್ನು ಮಾನವ ಸಂಪನ್ಮೂಲದೊಂದಿಗೆ ಕಾರ್ಯಗತಗೊಳಿಸಲಾಗುವುದು. ಲ್ಯಾಣ ಕರ್ನಾಟಕ ಭಾಗದಲ್ಲಿ 221 ಕೋಟಿ ರೂಪಾಯಿ ವೆಚ್ಚದಲ್ಲಿ 46 ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಕೆಕೆಆರ್‌ಡಿಬಿ ಮೂಲಕ ಸ್ಥಾಪಿಸಲಾಗುವುದು.

  • ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಗುಣಮಟ್ಟದ ಆರೋಗ್ಯ ಸೇವೆಯನ್ನು ನೀಡಲು 6,493 ಆರೋಗ್ಯ ಕ್ಷೇಮ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿ 199 ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳ ಕಟ್ಟಡ ಕಾಮಗಾರಿಗಾಗಿ 130 ಕೋಟಿ ರೂ. ಗಳ ಅನುದಾನವನ್ನು ಒದಗಿಸಲಾಗುವುದು.

  • ಜಿಲ್ಲಾ ಆಸ್ಪತ್ರೆಗಳು ಮತ್ತು ವೈದ್ಯಕೀಯ ಕಾಲೇಜುಗಳಲ್ಲಿರುವ ಮಕ್ಕಳ ತಜ್ಞರು, ಮತ್ತು ಕ್ರಿಟಿಕಲ್ ಕೇರ್ ಮೆಡಿಸಿನ್ ತಜ್ಞ ಮತ್ತಿತರ ತಜ್ಞ ವೈದ್ಯರುಗಳ ಸೇವೆಯನ್ನು ಟೆಲಿ-ಐಸಿಯು ವ್ಯವಸ್ಥೆಯ ಮೂಲಕ ತಾಲ್ಲೂಕು ಆಸ್ಪತ್ರೆಗಳಿಗೆ ಒದಗಿಸಲಾಗುವುದು.

  • ರಾಜ್ಯದ ಜಿಲ್ಲಾ ಆಸ್ಪತ್ರೆಗಳನ್ನು ಅಗ್ನಿ ಅವಘಡಗಳಿಂದ ರಕ್ಷಿಸಲು 6 ಕೋಟಿ ರೂ.ಗಳ ವೆಚ್ಚದಲ್ಲಿ 13 ಜಿಲ್ಲಾ ಆಸ್ಪತ್ರೆಗಳಲ್ಲಿ ಅಗ್ನಿಶಾಮಕ ವ್ಯವಸ್ಥೆಯನ್ನು ಅಳವಡಿಸಲಾಗುವುದು.

  • 2025 ರೊಳಗೆ ಕ್ಷಯರೋಗ ನಿರ್ಮೂಲನೆಗೊಳಿಸಲು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕ್ಷಯರೋಗ ತಪಾಸಣೆಗಾಗಿ 87 True-Nat Machines ಗಳನ್ನು ಖರೀದಿಸಲು 6 ಕೋಟಿ ರೂ. ಗಳ ಅನುದಾನ ಒದಗಿಸಲಾಗುವುದು.

  • ಕಲ್ಯಾಣ ಕರ್ನಾಟಕದಲ್ಲಿ ಹಿಮೋಫಿಲಿಯಾ ಮತ್ತು ಥಲಸ್ಸೇಮಿಯಾ ರೋಗಿಗಳಿಗೆ ಸೂಕ್ತ ಚಿಕಿತ್ಸಾ ಸೌಲಭ್ಯಗಳ ಕೊರತೆಯಿರುವುದರಿಂದ ಕಲಬುರಗಿ ಮತ್ತು ಕೊಪ್ಪಳದ ಐಸಿಡಿಟಿ ಕೇಂದ್ರಗಳ ಬಲವರ್ಧನೆಗೆ 7 ಕೋಟಿ ರೂ.ಗಳನ್ನು ಒದಗಿಸಲಾಗುವುದು.

  • ಉತ್ತರ ಕರ್ನಾಟಕದ ಹಲವಾರು ಜಿಲ್ಲೆಗಳ First Referral Unit (FRU) ಗಳಲ್ಲಿ ರಕ್ತ ಸಂಗ್ರಹ ಘಟಕಗಳಿಲ್ಲದ ಕಾರಣ, ರೋಗಿಗಳಿಗೆ ತುರ್ತು ಸಮಯದಲ್ಲಿ ರಕ್ತ ಪೂರೈಸಲು ತೊಂದರೆ ಉಂಟಾಗುತ್ತಿದೆ. ಇದನ್ನು ನೀಗಿಸಲು 50 ಹೊಸ ರಕ್ತ ಶೇಖರಣಾ ಘಟಕಗಳನ್ನು ಮುಂದಿನ ಎರಡು ವರ್ಷಗಳಲ್ಲಿ ಸ್ಥಾಪಿಸಲಾಗುವುದು.

  • ಮುಂದಿನ 4 ವರ್ಷಗಳಲ್ಲಿ ಪ್ರತಿ ಜಿಲ್ಲಾ ಆಸ್ಪತ್ರೆಯಲ್ಲಿ ಸಂಯೋಜಿತ ಮತ್ತು ಸಾರ್ವಜನಿಕ ಆರೋಗ್ಯ ಪ್ರಯೋಗಾಲಯವನ್ನು (IPHL) ಸ್ಥಾಪಿಸುವ ಮೂಲಕ ಸಾರ್ವಜನಿಕರಿಗೆ ಕೈಗೆಟಕುವ ದರದಲ್ಲಿ ಉತ್ತಮ ಪ್ರಯೋಗಾಲಯ ಸೇವೆಗಳನ್ನು ನೀಡಲಾಗುವುದು.

  • ಪ್ರಸಕ್ತ ಸಾಲಿನಲ್ಲಿ ಚಿಕ್ಕಮಗಳೂರು, ವಿಜಯನಗರ, ಶಿವಮೊಗ್ಗ, ಬೆಳಗಾವಿ, ಮಂಡ್ಯ, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಮತ್ತು 2025-26 ನೇ ಸಾಲಿನಲ್ಲಿ ಚಿತ್ರದುರ್ಗ, ಬಾಗಲಕೋಟೆ, ಚಾಮರಾಜನಗರ, ಬೀದರ್, ಕೊಪ್ಪಳ, ರಾಯಚೂರು, ಕಲಬುರಗಿ, ಉತ್ತರ ಕನ್ನಡ ಮತ್ತು ಗದಗ ಜಿಲ್ಲೆಗಳಲ್ಲಿ ಪ್ರಯೋಗಾಲಯವನ್ನು (IPHL) ಸ್ಥಾಪಿಸಲಾಗುವುದು. ಇದಲ್ಲದೇ ಪ್ರಸಕ್ತ ಸಾಲಿನಲ್ಲಿ ಹುನಗುಂದ, ಸಿರಾ ಮತ್ತು ಹಗರಿಬೊಮ್ಮನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ ಸಾರ್ವಜನಿಕ ಆರೋಗ್ಯ ಪ್ರಯೋಗಾಲಯಗಳನ್ನು ಸ್ಥಾಪಿಸಲಾಗುವುದು. ಇದಕ್ಕೆ ಒಟ್ಟಾರೆಯಾಗಿ 11 ಕೋಟಿ ರೂ.ಗಳ ಅನುದಾನವನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿಗಳು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com