ಸೇಂಟ್ ಜೆರೋಸಾ ಶಾಲೆ ಪ್ರಕರಣ: ಐಎಎಸ್ ಅಧಿಕಾರಿ ನೇತೃತ್ವದಲ್ಲಿ ತನಿಖೆಗೆ ಆದೇಶ
ಮಂಗಳೂರು: ಸೇಂಟ್ ಜೆರೋಸಾ ಶಾಲೆಯ ಘಟನೆ ದುರದೃಷ್ಟಕರ ಎಂದಿರುವ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು, ಈ ಕುರಿತು ಐಎಎಸ್ ಅಧಿಕಾರಿ ನೇತೃತ್ವದಲ್ಲಿ ಸಮಗ್ರ ತನಿಖೆಗೆ ಆದೇಶಿಸಲಾಗಿದೆ ಎಂದು ಶನಿವಾರ ತಿಳಿಸಿದ್ದಾರೆ.
ಜೆರೋಸಾ ಶಾಲೆ ಶಿಕ್ಷಕಿಯಿಂದ ಹಿಂದೂ ಧರ್ಮದ ಅವಹೇಳನ ಆರೋಪ ಸಂಬಂಧ ಸಮಗ್ರ ತನಿಖೆ ನಡೆಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಐಎಎಸ್ ಅಧಿಕಾರಿ ಆಕಾಶ್ ಕೆ ನೇತೃತ್ವದಲ್ಲಿ ತನಿಖೆ ನಡೆಯಲಿದೆ ಎಂದು ಆರೋಗ್ಯ ಸಚಿವರು ಹೇಳಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ದೂರು ಆಧರಿಸಿ ಎಫ್ಐಆರ್ ದಾಖಲಿಸಲಾಗಿದೆ. ಶೀಘ್ರದಲ್ಲೇ ಸತ್ಯಾಂಶ ತಿಳಿಯುತ್ತದೆ. ತುರ್ತಾಗಿ ತನಿಖೆ ಮಾಡಿ ವರದಿ ಸಲ್ಲಿಸಲು ಸೂಚನೆ ನೀಡಲಾಗಿದೆ. ನಮ್ಮ ಅಭಿಪ್ರಾಯ, ಅವರ ಅಭಿಪ್ರಾಯ ಏನೇ ಇರಲಿ, ಕಾನೂನು ಮತ್ತು ಸಂವಿಧಾನ ಮುಖ್ಯ. ಶಾಸಕರು ಮತ್ತು ಇತರರ ನಡವಳಿಕೆಯಿಂದ ನಮಗೆ ಬಹಳಷ್ಟು ನೋವಾಗಿದೆ. ಧಾರ್ಮಿಕವಾಗಿ ಸಮಾಜವನ್ನು ಇಬ್ಬಾಗ ಮಾಡಲು ಹೋಗಿದ್ದಾರೆ ಎಂದು ಪ್ರತಿಪಕ್ಷಗಳ ವಿರುದ್ಧ ಕಿಡಿ ಕಾರಿದರು.
ಇದು ಒಳ್ಳೆಯ ಸಂಸ್ಕೃತಿಯಲ್ಲ, ಇಡೀ ದೇಶವೇ ಗಮನಿಸುತ್ತಿದೆ ಮತ್ತು ಶಿಕ್ಷಕರನ್ನು ನಿಂದಿಸಲಾಗುತ್ತಿದೆ. ಪ್ರತಿಯೊಂದು ವಿಷಯದಲ್ಲೂ ಕ್ರೈಸ್ತರು, ಹಿಂದೂಗಳು, ಮುಸ್ಲಿಮರು ಎಂದು ಜನರನ್ನು ಎತ್ತಿಕಟ್ಟಿ ಕೋಮುದ್ವೇಷ ಹರಡುತ್ತಿದ್ದಾರೆ. ಬಿಜೆಪಿ ಶಾಸಕರು ಹಾಗೂ ಪೊಲೀಸರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ವಿಚಾರಣೆಯ ನಂತರ ಕ್ರಮ ಕೈಗೊಳ್ಳುತ್ತೇವೆ. ಅವರು ಕೇಳುತ್ತಾರೆ ಎಂಬ ಕಾರಣಕ್ಕೆ ನಾವು ಪ್ರಕರಣಗಳನ್ನು ಹಿಂಪಡೆಯಲು ಸಾಧ್ಯವಿಲ್ಲ ಎಂದು ದಿನೇಶ್ ಗುಂಡೂರಾವ್ ಅವರು ಹೇಳಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ