ಬೆಂಗಳೂರು: ಇತ್ತೀಚೆಗಷ್ಟೇ ವಯನಾಡಿನಲ್ಲಿ ಆನೆ ತುಳಿತಕ್ಕೆ ಬಲಿಯಾದ ಕೇರಳದ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ನೀಡಲು ಕರ್ನಾಟಕ ಒಪ್ಪಿಕೊಂಡಿರುವ ಪರಿಹಾರ ಮೊತ್ತದ ಕುರಿತು ವಿಚಾರಣೆ ನಡೆಸುವುದಾಗಿ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವ ಭೂಪೇಂದರ್ ಯಾದವ್ ಬುಧವಾರ ಹೇಳಿದ್ದಾರೆ.
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೃತರ ಕುಟುಂಬಕ್ಕೆ ಪರಿಹಾರ ನೀಡುವುದು ಕೇರಳ ಸರ್ಕಾರದ ಜವಾಬ್ದಾರಿಯಾಗಿದೆ. "ನಾನು ಅದನ್ನು ಪರಿಶೀಲಿಸುತ್ತೇನೆ ಮತ್ತು ಒಮ್ಮೆ ನಾನು ಎಲ್ಲಾ ವಿವರಗಳನ್ನು ಸಂಪೂರ್ಣವಾಗಿ ಪಡೆದ ನಂತರ ಉತ್ತರಿಸುತ್ತೇನೆ ಎಂದಿದ್ದಾರೆ.
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಬುಧವಾರ ಸಂಜೆ ಭೇಟಿ ನೀಡಿದ ಕೇಂದ್ರ ಅರಣ್ಯ ಸಚಿವ ಭೂಪೇಂದ್ರ ಯಾದವ್, ಕಾಳ್ಗಿಚ್ಚು ಎದುರಿಸಲು ಕೈಗೊಂಡಿರುವ ಸಿದ್ದತೆ ಹಾಗೂ ಕಾಡಂಚಿನಲ್ಲಿ ಮಾನವ– ವನ್ಯಜೀವಿ ಸಂಘರ್ಷ ಕುರಿತು ಅರಣ್ಯಧಿಕಾರಿಗಳ ಸಭೆ ನಡೆಸಿದರು.
ಬಂಡೀಪುರ ಅರಣ್ಯದಲ್ಲಿ ರೇಡಿಯೊ ಕಾಲರ್ ಅಳವಡಿಸಿದ್ದ ಆನೆ ವಯನಾಡಿನಲ್ಲಿ ಇತ್ತೀಚೆಗೆ ದಾಂಧಲೆ ನಡೆಸಿರುವ ಘಟನೆಯ ಬಗ್ಗೆಯೂ ಅಧಿಕಾರಿಗಳಿಂದ ಅವರು ಮಾಹಿತಿ ಪಡೆದರು. ಕೇರಳದ ವಯನಾಡಿಗೆ ಭೇಟಿ ನೀಡಿ ಇತ್ತೀಚೆಗೆ ರೇಡಿಯೊ ಕಾಲರ್ ಅಳವಡಿಸಿದ ಆನೆ ದಾಳಿಯಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬದ ಸದಸ್ಯರನ್ನು ಭೇಟಿಯಾದರು.
ಕಾಡು ಪ್ರಾಣಿಗಳಿಗೆ ಕರ್ನಾಟಕ, ಕೇರಳ, ತಮಿಳುನಾಡು ಎಂಬ ಗಡಿ ಇರುವುದಿಲ್ಲ. ಆನೆಗಳನ್ನು ಯಾವ ಪ್ರದೇಶದಲ್ಲಿ ಬಿಟ್ಟಿದ್ಧೇವೆ ಎಂಬುದನ್ನು ಪರಿಗಣಿಸದೆ ವನ್ಯ ಪ್ರಾಣಿಗಳನ್ನು ರಕ್ಷಿಸುವ ಕೆಲಸವನ್ನು ಅರಣ್ಯ ಅಧಿಕಾರಿಗಳು ಮಾಡಬೇಕು. ವನ್ಯಜೀವಿಗಳು ಅರಣ್ಯದಿಂದ ನಾಡಿನತ್ತ ಬರದಂತೆ ರೈಲ್ವೆ ಬ್ಯಾರಿಕೇಡ್ಗಳನ್ನು ಸಮರ್ಪಕವಾಗಿ ನಿರ್ಮಾಣ ಮಾಡಬೇಕು ಎಂದು ಸೂಚಿಸಿದರು. ಬೇಸಿಗೆ ಇರುವುದರಿಂದ ಕಾಡಿಗೆ ಬೆಂಕಿ ಬೀಳದಂತೆ ಮಾಡಲು ಸ್ಥಳೀಯ ಜನರ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಕಾಡು ಪ್ರಾಣಿಗಳಿಂದ ರೈತರ ಬೆಳೆ ಮತ್ತು ಜಾನುವಾರುಗಳಿಗೆ ತೊಂದರೆಯಾದರೆ, ಶೀಘ್ರವಾಗಿ ಸ್ಪಂದಿಸಿ ಪರಿಹಾರ ನೀಡಬೇಕು ಎಂದರು.
ಜನರು ಮತ್ತು ಪ್ರತಿಪಕ್ಷಗಳಿಂದ ವಿರೋಧ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಕರ್ನಾಟಕ ಸರ್ಕಾರವು ಕೇರಳ ವ್ಯಕ್ತಿ ಕುಟುಂಬಕ್ಕೆ ಇನ್ನೂ 15 ಲಕ್ಷ ರು. ಪರಿಹಾರವನ್ನು ಬಿಡುಗಡೆ ಮಾಡಿಲ್ಲ ಎಂದು ಸಚಿವರಿಗೆ ತಿಳಿಸಲಾಗಿದೆ ಎಂದು ಸಚಿವಾಲಯದ ಮೂಲಗಳು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿವೆ.
Advertisement