ಬೆಂಗಳೂರು: ಬಿಜೆಪಿ ವಿರುದ್ಧ "40 ಪರ್ಸೆಂಟ್ ಕಮಿಷನ್" ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರ್ಚ್ 28 ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ಸಿಟಿ ಕೋರ್ಟ್ ಶುಕ್ರವಾರ ಸಮನ್ಸ್ ಜಾರಿ ಮಾಡಿದೆ.
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ತಮ್ಮ ಪಕ್ಷದ ನಾಯಕರ ವಿರುದ್ಧ ಕಾಂಗ್ರೆಸ್ ನಾಯಕರು ಸುಳ್ಳು ಜಾಹೀರಾತುಗಳನ್ನು ನೀಡಿ ಅಪಪ್ರಚಾರ ಮಾಡಿದ್ದಾರೆ. ಈ ಜಾಹೀರಾತಿನಿಂದ ಬಿಜೆಪಿ ಪಕ್ಷಕ್ಕೆ ಹಾನಿಯಾಗಿದೆ ಎಂದು ಆರೋಪಿಸಿ ಬಿಜೆಪಿ ಕೇಸ್ ದಾಖಲಿಸಿತ್ತು.
ಪ್ರಕರಣದ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಧೀಶ ಜೆ.ಪ್ರೀತ್ ಅವರು, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಸೇರಿದಂತೆ ಆರೋಪಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಸೂಚಿಸಿದ್ದಾರೆ.
ಕಳೆದ ವರ್ಷ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್, ಬಿಜೆಪಿ ವಿರುದ್ಧ "40 ಪರ್ಸೆಂಟ್ ಕಮಿಷನ್" ಆರೋಪ ಮಾಡಿತ್ತು ಮತ್ತು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ವಿರುದ್ಧ “ಪೇಸಿಎಂ” ಪೋಸ್ಟರ್ಗಳನ್ನು ಸಹ ಹಾಕಿತ್ತು. ಭ್ರಷ್ಟಾಚಾರ ರೇಟ್ ಕಾರ್ಡ್ ಜಾಹೀರಾತು ನೀಡಿತ್ತು.
ಈ ‘ಸುಳ್ಳು’ ಜಾಹೀರಾತುಗಳು ಬಿಜೆಪಿಯ ಪ್ರತಿಷ್ಠೆಗೆ ಧಕ್ಕೆ ತಂದಿವೆ ಎಂದು ಬಿಜೆಪಿ ಪರ ವಕೀಲ ವಿನೋದ್ ಕುಮಾರ್ ನ್ಯಾಯಾಲಯದಲ್ಲಿ ವಾದ ಮಂಡಿಸಿದರು.
ವಾದವನ್ನು ಆಲಿಸಿದ 42ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್(ಎಸಿಎಂಎಂ) ನ್ಯಾಯಾಲಯ, ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರ್ಚ್ 28 ರಂದು ತನ್ನ ಮುಂದೆ ವಿಚಾರಣೆಗೆ ಹಾಜರಾಗುವಂತೆ ಕಾಂಗ್ರೆಸ್ ನಾಯಕರಿಗೆ ಆದೇಶಿಸಿದೆ.
Advertisement