ಬೆಂಗಳೂರು: ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಡಿಕ್ಕಿಯಾಗಿ ಅಂಧ ದಂಪತಿ ಸಾವು!

ರಸ್ತೆ ದಾಟುತ್ತಿದ್ದ ವೇಳೆ ಬೈಕ್​ ಡಿಕ್ಕಿಯಾಗಿ ಅಂಧ ದಂಪತಿ ಸಾವಿಗೀಡಾಗಿರುವ ಹೃದಯವಿದ್ರಾವಕ ಘಟನೆ ನೆಲಮಂಗಲದ ಬಳಿ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ರಸ್ತೆ ದಾಟುತ್ತಿದ್ದ ವೇಳೆ ಬೈಕ್​ ಡಿಕ್ಕಿಯಾಗಿ ಅಂಧ ದಂಪತಿ ಸಾವಿಗೀಡಾಗಿರುವ ಹೃದಯವಿದ್ರಾವಕ ಘಟನೆ ನೆಲಮಂಗಲದ ಬಳಿ ನಡೆದಿದೆ.

ನೆಲಮಂಗಲ ತಾಲೂಕಿನ ಯಂಟಗಾನಹಳ್ಳಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಈ ಘಟನೆ ನಡೆದಿದೆ. ಮೃತರನ್ನು ಶ್ರೀಧರ್ (52) ಮತ್ತು ಅರ್ಚನಾ (35) ಎಂದು ಗುರುತಿಸಲಾಗಿದೆ. ಶ್ರೀಧರ್ ಮಾಗಡಿ ಬಳಿಯ ಶಾಲೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಬೈಕ್​ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್ ಸವಾರ ವೇಗವಾಗಿ ಹೋಗಿದ್ದರಿಂದ ಅಪಘಾತ ನಡೆದ ಸ್ಥಳದಿಂದ ಸುಮಾರು 100 ಮೀಟರ್ ವರೆಗೆ ಎಳೆದೊಯ್ದು ಬೈಕ್ ಸಮೇತ ಚರಂಡಿಗೆ ಬಿದ್ದಿದ್ದಾನೆ.

ಸಾಂದರ್ಭಿಕ ಚಿತ್ರ
ಬೆಳಗಾವಿ ಜಿಲ್ಲೆಯಲ್ಲಿ ಮತ್ತೊಂದು ಭೀಕರ ಅಪಘಾತ; ಸ್ಥಳದಲ್ಲೇ ಐವರು ಸಾವು

ಬೈಕ್ ಸವಾರನಿಗೂ ಗಂಭೀರ ಗಾಯಗಳಾಗಿದ್ದು, ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಾಹಿತಿ ತಿಳಿದು ಕೂಡಲೇ ಘಟನಾ ಸ್ಥಳಕ್ಕೆ ಆಗಮಿಸಿದ ನೆಲಮಂಗಲ ಸಂಚಾರಿ ಠಾಣಾ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.

ದಂಪತಿ ತಮ್ಮ ಸ್ನೇಹಿತನನ್ನು ಭೇಟಿಯಾಗಲು ಬೆಂಗಳೂರಿಗೆ ಬಸ್ ಹಿಡಿಯಲು ಹೋಗುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಎಂಎನ್‌ಸಿ ಕಂಪನಿಯ ಮ್ಯಾನೇಜರ್ ಆಗಿರುವ ಬೈಕ್ ಸವಾರ ಅಜಿತ್ ನಾಯಕ್ (45) ಬೈಕ್‌ನಲ್ಲಿ ಉಡುಪಿಗೆ ತೆರಳುತ್ತಿದ್ದರು. ನಾಯಕ್ ಹೆಲ್ಮೆಟ್ ಧರಿಸಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚರಂಡಿಯಿಂದ ಹೊರತೆಗೆದ ಪೊಲೀಸರು ಬೈಕ್ ವಶಪಡಿಸಿಕೊಂಡಿದ್ದಾರೆ.

ಅಪಘಾತಗಳು ಸಂಭವಿಸುವ ಸ್ಥಳವಾಗಿರುವುದರಿಂದ ಸಂಚಾರ ಪೊಲೀಸರು ಮುಖ್ಯ ರಸ್ತೆಯ ಎರಡೂ ಬದಿಯಲ್ಲಿ ಬ್ಯಾರಿಕೇಡ್ ಹಾಕಿದ್ದರು. ಆದರೆ ಕೆಲ ಕಿಡಿಗೇಡಿಗಳು ಬ್ಯಾರಿಕೇಡ್‌ಗಳನ್ನು ತೆರೆದು ವಾಹನಗಳು ಮತ್ತು ಜನರು ರಸ್ತೆ ದಾಟುವಂತೆ ಮಾಡಿದ್ದಾರೆ. ಇಬ್ಬರು ಬಲಿಪಶುಗಳು ಒಂದೇ ಪಾಯಿಂಟ್ ನಲ್ಲಿ ರಸ್ತೆ ದಾಟಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com