ಬೆಂಗಳೂರು: ನರೇಗಾ ಹಣ ಬಿಡುಗಡೆ ವಿಚಾರದಲ್ಲೂ ಕೇಂದ್ರ ಸರ್ಕಾರ ರಾಜ್ಯಕ್ಕೆ ಮಲತಾಯಿ ಧೋರಣೆ ತೋರುತ್ತಿದೆ ಎಂದು ರಾಜ್ಯ ಸರ್ಕಾರ ಕಿಡಿಕಾರಿದೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರು, ನರೇಗಾ ಹಣ ಬಿಡುಗಡೆ ವಿಚಾರದಲ್ಲಿ ಕೇಂದ್ರ ಸರ್ಕಾರ ಅನ್ಯಾಯ ಮಾಡುತ್ತಿದೆ. ತಮ್ಮ ವರ್ತನೆಯಿಂದ ಕಾರ್ಮಿಕರಿಗೆ ನೋವು ನೀಡುತ್ತಿದೆ. ಜನರು ಇದೀಗ ವಲಸೆ ಹೋಗುತ್ತಿದ್ದಾರೆ. ನರೇಗಾದಲ್ಲಿ ಪಾಲ್ಗೊಳ್ಳಲು ಬಯಸುತ್ತಿಲ್ಲ. ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ 676 ಕೋಟಿ ರೂ. ಬಾಕಿ ನೀಡಬೇಕಿದೆ ಎಂದು ಹೇಳಿದ್ದಾರೆ.
ಪ್ರಿಯಾಂಕ್ ಖರ್ಗೆಯವರ ಈ ಹೇಳಿಕೆಗೆ ರಾಜ್ಯದ ಇತರೆ ಕಾಂಗ್ರೆಸ್ ನಾಯಕರು ದನಿಗೂಡಿಸಿದ್ದಾರೆ. ಕೇಂದ್ರ ಸರ್ಕಾರದ ವರ್ತನೆ ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿದೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ನ ಮಾಜಿ ರಾಜ್ಯಸಭಾ ಸಂಸದ ಪ್ರೊ.ರಾಜೇಗೌಡ ಅವರು ಮಾತನಾಡಿ. ನರೇಗಾ ಯೋಜನೆಯಲ್ಲಿ ಹಣ ಲಭ್ಯವಿಲ್ಲದಿದ್ದರೆ ಅದು ಬಡವರ ಮೇಲೆ ಪರಿಣಾಮ ಬೀರಲಿದೆ. ಬಡವರ ಬಗ್ಗೆ ಕರುಣೆ ಇದೆ ಎಂದು ಹೇಳಿಕೊಳ್ಳುವ ಯಾವುದೇ ಕೇಂದ್ರ ಸರ್ಕಾರ ಈ ರೀತಿ ನಡೆದುಕೊಳ್ಳುವುದು ಸರಿಯಲ್ಲ ಎಂದು ತಿಳಿಸಿದ್ದಾರೆ.
ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಮಾತನಾಡಿ, ಕೇಂದ್ರ ಸರ್ಕಾರ ರಾಜ್ಯದ ಬಗ್ಗೆ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿದ್ದಾರೆ.
15ನೇ ಹಣಕಾಸು ಆಯೋಗದಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿದೆ. ಕರ್ನಾಟಕವನ್ನು ಬಿಜೆಪಿ ಆಡಳಿತವಿರುವ ಗುಜರಾತ್ಗೆ ಹೋಲಿಸಿದರೆ, ಕೇಂದ್ರದಿಂದ ಹಣದ ಹರಿವಿನ ಬಗ್ಗೆ ಮಲ ತಾಯಿಯ ವರ್ತನೆ ಸ್ಪಷ್ಟವಾಗಿ ಗೋಚರವಾಗುತ್ತಿದೆ. ಕರ್ನಾಟಕದ ಪ್ರಮುಖ ಯೋಜನೆಗಳಾದ ಮಹದಾಯಿ, ಮೇಕೆದಾಟು ಮತ್ತಿತರ ಯೋಜನೆಗಳಿಗೆ ಹಣದ ಅಗತ್ಯವಿದೆ. ಕೇಂದ್ರ ಸರ್ಕಾರವು ಅಗತ್ಯ ಅನುಮತಿ ಮತ್ತು ಹಣವನ್ನು ಏಕೆ ನೀಡುತ್ತಿಲ್ಲ? ಪ್ರಶ್ನಿಸಿದ್ದಾರೆ.
ಬರ ಮತ್ತು ಅತಿವೃಷ್ಟಿ ಪರಿಹಾರಕ್ಕಾಗಿ ಕೇಂದ್ರ ಸರ್ಕಾರ ಕರ್ನಾಟಕದ ನೆರವಿಗೆ ಬರುವಲ್ಲಿ ವಿಫಲವಾಗಿದೆ ಎಂದು ಕಿಡಿಕಾರಿದ್ದಾರೆ.
Advertisement