ಗ್ಯಾಂಗ್ ರೇಪ್ ಪ್ರಕರಣ: ಎಸ್ ಐಟಿ ತನಿಖೆಗೆ ಆಗ್ರಹಿಸಿ ಜ.20ರಂದು ಹಾವೇರಿಯಲ್ಲಿ ಬೃಹತ್ ಪ್ರತಿಭಟನೆ- ಬೊಮ್ಮಾಯಿ

ಹಾವೇರಿ ಜಿಲ್ಲೆ ಹಾನಗಲ್ ನಲ್ಲಿ ನಡೆದ ಗ್ಯಾಂಗ್ ರೇಪ್ ಪ್ರಕರಣವನ್ನು ಎಸ್ ಐಟಿ ತನಿಖೆಗೆ ವಹಿಸುವಂತೆ ಒತ್ತಾಯಿಸಿ ಜನವರಿ 20 ಹಾವೇರಿ ಎಸ್ಪಿ ಕಚೇರಿ ಎದುರು ಬಿಜೆಪಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ

ಬೆಂಗಳೂರು: ಹಾವೇರಿ ಜಿಲ್ಲೆ ಹಾನಗಲ್ ನಲ್ಲಿ ನಡೆದ ಗ್ಯಾಂಗ್ ರೇಪ್ ಪ್ರಕರಣವನ್ನು ಎಸ್ ಐಟಿ ತನಿಖೆಗೆ ವಹಿಸುವಂತೆ ಒತ್ತಾಯಿಸಿ ಜನವರಿ 20 ಹಾವೇರಿ ಎಸ್ಪಿ ಕಚೇರಿ ಎದುರು ಬಿಜೆಪಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾವೇರಿಯಲ್ಲಿ ನೈತಿಕ ಪೊಲಿಸ್ ಗಿರಿ ಮಾಡಿ ಗ್ಯಾಂಗ್ ರೇಪ್ ಮಾಡಿರುವ ಪ್ರಕರಣವನ್ನು ಪೊಲೀಸರು ಮುಚ್ಚಿ ಹಾಕುವ ಯತ್ನ ಮಾಡಿದ್ದರು. ಹಾವೇರಿ ಎಸ್ಪಿ, ಗೃಹ ಸಚಿವರು ಅದನ್ನು ಒಪ್ಪಿಕೊಳ್ಳಲು ಸಿದ್ದರಿರಲಿಲ್ಲ. ಅಲ್ಲದೇ, ಈಗ ಹಾನಗಲ್ ಪೊಲಿಸರನ್ನು ಅವರೇ ಅಮಾನತು ಮಾಡಿದ್ದಾರೆ‌. ಹೀಗಾಗಿ ಪೊಲಿಸರಿಂದ ಲೋಪವಾಗಿರುವುದನ್ನು ಒಪ್ಪಿಕೊಂಡಂತಾಗಿದೆ ಎಂದು ಹೇಳಿದರು. 

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯಲ್ಲಿ ಕಾಪಾಡುವಲ್ಲಿ ರಾಜಕಾರಣ ಬಹಳ ಪಾತ್ರ ವಹಿಸುತ್ತಿದೆ. ಹಾನಗಲ್ ಪೊಲಿಸರು ಕಾನೂನು ಪ್ರಕಾರ ನಡೆದುಕೊಂಡಿಲ್ಲ.  ಆ ಹೆಣ್ಣು ಮಗಳಿಗೆ ಸರಿಯಾದ ಚಕಿತ್ಸೆ ನೀಡುತ್ತಿಲ್ಲ. ಈ ಬಗ್ಗೆ ಸಿಎಂ ಕೂಡ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಹೀಗಾಗಿ ಎಸ್ ಐಟಿ ತನಿಖೆ ನಡೆಸುವಂತೆ ಆಗ್ರಹಿಸಿ  ಜನವರಿ 20 ರಂದು ಹಾವೇರಿ ಎಸ್ಪಿ ಕಚೇರಿ ಎದುರು ಪ್ರತಿಭಟನೆ ಮಾಡಲು ತೀರ್ಮಾನ ಮಾಡಿದ್ದೇವೆ. ಪ್ರತಿಭಟನೆಯಲ್ಲಿ ವಿಪಕ್ಷ ನಾಯಕ ಆರ್. ಅಶೋಕ್ ಸೇರಿದಂತೆ ಅನೇಕ ನಾಯಕರು ಹಾಗೂ ಜಿಲ್ಲಾ ಮುಖಂಡರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು. 

ಸಿಎಂಗೆ ಮೋದಿ ಫೋಬಿಯಾ: ಸಿಎಂ ಸಿದ್ದರಾಮಯ್ಯ ಅವರಿಗೆ ಮೋದಿ ಫೋಬಿಯಾ ಇದೆ.‌ ಇಡಿ ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ದಕ್ಷ ಆಡಳಿತ ನೀಡುತ್ತಿದ್ದಾರೆ. ಎಲ್ಲ ರೀತಿಯ ಅಭಿವೃದ್ಧಿ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ‌. ಮತ್ತೆ ಮೂರನೇ ಬಾರಿಗೆ ಪ್ರಧಾನಿ ಆಗಲಿದ್ದಾರೆ. ಹೀಗಾಗಿ ಅದನ್ನು ಸಹಿಸಿಕೊಳ್ಳಲಾಗದೇ ಸಿದ್ದರಾಮಯ್ಯ ಅವರ ವಿರುದ್ದ ಅನಗತ್ಯ ಆರೋಪ ಮಾಡುತ್ತಾರೆ ಎಂದು ಟೀಕಿಸಿದರು.

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಸೀಟು ಬಂದರೆ ಸಿದ್ದರಾಮಯ್ಯ ಸಿಎಂ ಆಗಿ ಮುಂದುವರೆಯುತ್ತಾರೆ ಅಂತ ಸಿಎಂ ಪುತ್ರ ಯತೀಂದ್ರ  ಹೇಳಿದ್ದಾರೆ. ಕಡಿಮೆ ಸೀಟು ಬಂದರೆ ಸಿಎಂ ಸ್ಥಾನ ಹೋಗುವ ಆತಂಕ ಅವರಿಗೆ ಕಾಡುತ್ತಿದೆ. ಅದಕ್ಕಾಗಿ ರಾಜ್ಯಕ್ಕೆ ಮೋದಿ ಬಂದಾಗೊಮ್ಮೆ ಸುಳ್ಳು ದಾಖಲೆಗಳನ್ನು ನೀಡಿ ಜನರ ದಾರಿ ತಪ್ಪಿಸಿದ್ದಾರೆ. 5 ನೇ ಹಣಕಾಸು ಆಯೋಗದಲ್ಲಿ ರಾಜ್ಯದ ಅನುದಾನ ಶೇ 4.7 ನಿಂದ ಶೇ 3.6 ಗೆ ಇಳಿಯಲು ಸಿದ್ದರಾಮಯ್ಯ ಅವರೇ ಕಾರಣ ಅವರು ಸರಿಯಾಗಿ ರಾಜ್ಯದ ವಸ್ತು ಸ್ಥಿತಿ ಬಗ್ಗೆ ಮಾಹಿತಿ ನೀಡಿಲ್ಲ ಎಂದು ವಾಗ್ದಾಳಿ ನಡೆಸಿದರು.

ಸಂಸದ ಅನಂತಕುಮಾರ್ ಹೆಗಡೆ ಅವರ ಮಾತಿನ ಕುರಿತು ಪ್ರತಿಕ್ರಿಯಿಸಿದ ಬೊಮ್ಮಾಯಿ, ಯಾರೂ ಅವರನ್ನು ಸಮರ್ಥನೆ ಮಾಡಿಕೊಳ್ಳುತ್ತಿಲ್ಲ. ಯಾರ ಬಗ್ಗೆ ಮಾತನಾಡುವಾಗ ಎಚ್ಚರಿಕೆಯಿಂದ ಮಾತನಾಡಬೇಕು. ಸಿಎಂ ಸಿದ್ದರಾಮಯ್ಯ ಅವರು ಭೂಮಿ ಮೇಲೆ ಇರುವ ಎಲ್ಲರ ಬಗ್ಗೆಯೂ ಏಕ ವಚನದಲ್ಲಿ ಮಾತನಾಡುತ್ತಾರೆ. ಆದರೆ, ಅವರ ಬಗ್ಗೆ ಬೇರೆಯವರು ಮಾತನಾಡಿದರೆ ಅದು ತಪ್ಪು ಎನ್ನುತ್ತಾರೆ. ಅದೇ ಈಗ ಪ್ರಶ್ನೆಯಾಗಿದೆ ಎಂದು ಹೇಳಿದರು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com