ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ
ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಬೆಂಗಳೂರಿಗೆ ಮೊದಲ ಸ್ಥಾನ: ಸಿಎಂ ಸಿದ್ದರಾಮಯ್ಯ

ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಬೆಂಗಳೂರು ಮೊದಲ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
Published on

ಬೆಂಗಳೂರು: ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಬೆಂಗಳೂರು ಮೊದಲ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಎಂ.ಎಸ್.ರಾಮಯ್ಯ ಅನ್ವಯಿಕ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ಆರ್ಥಿಕ ಸಂಯುಕ್ತ ತತ್ವ: 16 ನೇ ಹಣಕಾಸು ಆಯೋಗದ ಮುಂದಿರುವ ಸವಾಲುಗಳು ಕುರಿತ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಪಾಲ್ಗೊಂಡು ಮಾತನಾಡಿದ ಮುಖ್ಯಮಂತ್ರಿ, ಬೆಂಗಳೂರು ನಗರ ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ 0.738 ಪಡೆದು ಮೊದಲ ಸ್ಥಾನದಲ್ಲಿದ್ದರೆ, ಯಾದಗಿರಿ, ಕಲಬುರಗಿ ಮತ್ತು ರಾಯಚೂರು ಕ್ರಮವಾಗಿ 0.538, 0.539 ಹಾಗೂ 0.562 ಮಾನವ ಅಭಿವೃದ್ಧಿ ಸೂಚ್ಯಂಕ ಪಡೆದು ಕೊನೆಯ ಮೂರು ಸ್ಥಾನಗಳಲ್ಲಿವೆ. ಮಾನವ ಅಭಿವೃದ್ಧಿಯ ಅಸಮತೋಲನ ಗಮನಾರ್ಹವಾಗಿದೆ ಎಂದರು. 

14 ನೇ ಹಣಕಾಸು ಆಯೋಗದಡಿ ಕರ್ನಾಟಕದ ಪಾಲಿನ ತೆರಿಗೆ ಹಂಚಿಕೆಯು ಶೇ  4.713ರಿಂದ ಶೇ. 3.647 ಕ್ಕೆ  15 ನೇ ಹಣಕಾಸು ಆಯೋಗದಿಂದಾಗಿ ಇಳಿದಿದೆ. ರಾಜ್ಯಗಳ ಪೈಕಿ ಕರ್ನಾಟಕ ಕ್ಕೆ ಅತ್ಯಂತ ದೊಡ್ಡ ಮೊತ್ತ ಅಂದರೆ ಶೇ 1.066 ರಷ್ಟು ಇಳಿಕೆಯಾಗಿದೆ. ಈಗಿನ ವ್ಯವಸ್ಥೆ ಆದಾಯದ ದೂರ ವ್ಯಾಪ್ತಿಯನ್ನು ಪರಿಗಣಿಸುತ್ತಿದ್ದು, ಈ ಪ್ರಕಾರ ಕರ್ನಾಟಕವು ಅತಿ ಹೆಚ್ಚು ತಲಾ ಆದಾಯವಿರುವ ರಾಜ್ಯಕ್ಕೆ ಹೋಲಿಸಿದಾಯ ಕಡಿಮೆ ದೂರವ್ಯಾಪ್ತಿ ಇರುವ ಕಾರಣ ಸೋಲುತ್ತಿದೆ ಎಂದರು. 

ಬೆಂಗಳೂರು ನಗರ ಜಿಲ್ಲೆಯಲ್ಲಿ ರೂ.6,21,131ಗಳ ಹೆಚ್ಚಿನ ತಲಾ ಆದಾಯ ಮಟ್ಟವನ್ನು ಕಾಣಬದಾಗಿದೆ ಎನ್ನುವುದನ್ನು ಪರಿಗಣಿಸುವುದು ಮುಖ್ಯ. ಈ ವ್ಯವಸ್ಥೆ ಕರ್ನಾಟಕಕ್ಕೆ ಕೆಲವು ಜಿಲ್ಲೆಗಳಲ್ಲಿ ಕಡಿಮೆಯಿರುವ ತಲಾ ಆದಾಯದ ಸಮಸ್ಯೆಯನ್ನು ಬಗೆಹರಿಸಲು ಸಾಕಷ್ಟು ಸಂಪನ್ಮೂಲ ವರ್ಗಾವಣೆಯಿಂದ ವಂಚಿತವಾಗಿಸಿದೆ. ದೇಶದಲ್ಲಿಯೇ ಅತಿ ಹೆಚ್ಚು ತೆರಿಗೆ ನೀಡುವ ರಾಜ್ಯಕ್ಕೆ ತನ್ನ ಕೊಡುಗೆಗೆ ತಕ್ಕ ಪ್ರತಿಫಲ ದೊರಕದಿರುವುದು ವಿಪರ್ಯಾಸ. 16ನೇ ಹಣಕಾಸು ಆಯೋಗವು ದಕ್ಷತೆಗೆ ಪ್ರೋತ್ಸಾಹಕಗಳನ್ನು ಹಾಗೂ ವಿತ್ತೀಯ ಕಾರ್ಯಕ್ಷಮತೆಗೆ ನೀಡುವ ಬೆಲೆಯನ್ನು ಹೆಚ್ಚಿಸುವಂತೆ 16 ನೇ ಹಣಕಾಸು ಆಯೋಗವನ್ನು ಒತ್ತಾಯಿಸುವುದಾಗಿ ತಿಳಿಸಿದರು. 

ಅತ್ಯುತ್ತಮ ವಿತ್ತೀಯ ಕಾರ್ಯಕ್ಷಮತೆ ಹೊಂದಿರುವ ರಾಜ್ಯ ಎಂದು ದಾಖಲೆ ಹೊಂದಿರುವ ರಾಜ್ಯಕ್ಕೆ ಅದರ ದಕ್ಷತೆಗಾಗಿ ಯಾವುದೇ ಪ್ರೋತ್ಸಾಹಕಗಳು ದೊರೆಯುತ್ತಿಲ್ಲ. ಕರ್ನಾಟಕದ ಭಾರಿ ವಿತ್ತೀಯ ಕಾರ್ಯಕ್ಷಮತೆ  ಗಮನಾರ್ಹವಾಗಿದ್ದು ವಿತ್ತೀಯ ಹೊಣೆಗಾರಿಕೆ ಕಾಯ್ದೆಯನ್ನು ಘೋಷಿಸಿದ  ಮೊದಲ ರಾಜ್ಯವೆಂದು ಹೆಗ್ಗಳಿಕೆ ಪಡೆದಿದೆ. ಭಾರತದ ರಾಜ್ಯ ಸರ್ಕಾರಗಳಿಗೆ ಪ್ರಮುಖ ವೆಚ್ಚ ಹೊಣೆಗಾರಿಕೆಗಳಿದ್ದು, ಬಹುತೇಕ ಸಂದರ್ಭದಲ್ಲಿ ಅಗತ್ಯ ರಾಜಸ್ವ ಸಂಪನ್ಮೂಲಗಳ ಲಭ್ಯತೆ ಇರುವುದಿಲ್ಲ. ವಿತ್ತೀಯ ಸ್ವಾಯತ್ತತೆಯನ್ನು ಉಳಿಸಿಕೊಳ್ಳುತ್ತಲೇ ರಾಜ್ಯ ಮಟ್ಟದಲ್ಲಿ  ವೆಚ್ಚ ಹೊಣೆಗಾರಿಕೆಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಈ ಸಂದಭದಲ್ಲಿ ಹಣಕಾಸು ಆಯೋಗಗಳ ಸಂಪನ್ಮೂಲ ವರ್ಗಾವಣೆಗೆ ಹೆಚ್ಚಿನ ಪ್ರಾಮುಖ್ಯತೆ ಇದೆ ಎಂದರು. 

ಆರ್ಥಿಕ ಬೆಳವಣಿಗೆಯನ್ನು ಸಮತೋಲಿತ ಹಾಗೂ ಒಳಗೊಳ್ಳುವಿಕೆಯನ್ನು ಖಾತ್ರಿ ಪಡಿಸಿಕೊಳ್ಳುತ್ತಲೇ ಅದನ್ನು ಸುಸ್ಥಿರಗೊಳಿಸಲು ರಾಜ್ಯಕ್ಕೆ ಅನೇಕ ಸವಾಲುಗಳಿವೆ. ಇದರೊಂದಿಗೆ, ಕೇಂದ್ರ ಪ್ರಾಯೋಜಿತ ಯೋಜನೆಗಳ ಆಯವ್ಯಯ ಪರಿಣಾಮಗಳನ್ನೂ ರಾಜ್ಯ ಸರಿದೂಗಿಸಬೇಕಾಗಿದೆ. ರಾಜ್ಯದ ಆರ್ಥಿಕ ಹಾಗೂ ಮಾನವ ಸಂಪನ್ಮೂಲದ ಅಭಿವೃದ್ಧಿಗೆ  ಮಾನವ ಮತ್ತು ಭೌತಿಕ ಮೂಲಸೌಲಭ್ಯಗಳ ಮೇಲೆ ಗಮನಾರ್ಹ ಹೂಡಿಕೆಯ ಅಗತ್ಯವಿದೆ. ಕರ್ನಾಟಕ ತನ್ನ ಸ್ವಂತ ತೆರಿಗೆ ಸಂಗ್ರಹದಲ್ಲಿ ಉತ್ತಮ ಪ್ರದರ್ಶನವನ್ನು ಸಾಧಿಸಿದ್ದರೂ, ರಾಜ್ಯದ ಹೆಚ್ಚುತ್ತಿರುವ ಸವಾಲುಗಳನ್ನು ಎದುರಿಸಲು ಹಾಗೂ 2032ರ ವೇಳೆಗೆ ಕರ್ನಾಟಕ ಒಂದು ಟ್ರಿಲಿಯನ್ ಡಾಲರ್ ನ ಜಿಎಸ್ ಡಿಪಿ ಸಾಧಿಸಲು ನಮ್ಮಲ್ಲಿರುವ ಸಂಪನ್ಮೂಲಗಳು ಸಾಕಾಗುತ್ತಿಲ್ಲ ಎಂದು ಮುಖ್ಯಮಂತ್ರಿ ತಿಳಿಸಿದರು. 

ನಗರೀಕರಣ, ನಗರ ಕೇಂದ್ರಗಳಲ್ಲಿ ಮೂಲಸೌಕರ್ಯಗಳು ಹಾಗೂ ಮೂಲ ಸೇವೆಗಳ ಪೂರೈಕೆಯನ್ನು ಬೇಡುತ್ತದೆ. ಆದರೆ ಹೆಚ್ಚುತ್ತಿರುವ ವಲಸೆಯ ಸಮಸ್ಯೆ ನಗರ ಕೇಂದ್ರಗಳಲ್ಲಿ ಒತ್ತಡವನ್ನು ಹೆಚ್ಚಿಸುತ್ತಿದೆ. ನಗರಗಳು, ಒಂದು ರಾಜ್ಯದ ಅಭಿವೃದ್ಧಿಯ ಕೇಂದ್ರಗಳು, ಅದರಲ್ಲಿಯೂ ಬೆಂಗಳೂರಿನಂತಹ ನಗರಕ್ಕೆ ಮೂಲಸೌಕರ್ಯದ ವೃದ್ಧಿ ಅತ್ಯವಶ್ಯವಾಗಿದೆ.  ರಾಜ್ಯದ ಆದಾಯದಲ್ಲಿ ಗಣನೀಯ ಕೊಡುಗೆ ನೀಡುತ್ತಿರುವ ಬೆಂಗಳೂರು ನಗರದ ಸುಸ್ಥಿರ ಬೆಳವಣಿಗೆಗೆ ಸೂಕ್ತ ಸಹಕಾರವನ್ನು ನೀಡುವುದು ರಾಜ್ಯದ ಆದ್ಯತೆಯಾಗಿದೆ ಎಂದರು.

ಸಬಲೀಕೃತ ಸಮಿತಿಗಳ ಅಂದಾಜು ಬಳಸಿ ಮಾಡುವ ಒಟ್ಟು ಪ್ರಯತ್ನದ ಹೊರತಾಗಿಯೂ ರಾಜ್ಯ ಸತತವಾದ ಪ್ರಾದೇಶಿಕ ಅಸಮತೋಲನವನ್ನು ಎದುರಿಸುತ್ತಿದೆ. 2022-23ರ ಆರ್ಥಿಕ ಸಮೀಕ್ಷೆಯ ಪ್ರಕಾರ, 6,21,131 ರೂ.ಗಳ ತಲಾಆದಾಯವನ್ನು ಹೊಂದಿರುವ ಬೆಂಗಳೂರು ನಗರ ಪ್ರಥಮ ಸ್ಥಾನದಲ್ಲಿದ್ದು, 1,24,998 ರೂ.ಗಳ ತಲಾ ಆದಾಯವನ್ನು ಹೊಂದಿರುವ ಕಲಬುರಗಿ ಕೊನೆಯ ಸ್ಥಾನದಲ್ಲಿದೆ ಎಂದುಅವರು ಮಾಹಿತಿ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Advertisement

X
Kannada Prabha
www.kannadaprabha.com