ಧಾರವಾಡ: ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಪಲ್ಟಿ, ಎಂಬಿಬಿಎಸ್ ವಿದ್ಯಾರ್ಥಿ ಬಲಿ

 ರಾಷ್ಟ್ರೀಯ ಹೆದ್ದಾರಿಯ ತಿರುವಿನಲ್ಲಿ ಕಾರೊಂದು ಪಲ್ಟಿಯಾದ ಪರಿಣಾಮ ಅದರಲ್ಲಿದ್ದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದ 30 ವರ್ಷದ ಯುವಕ ಸಾವನ್ನಪ್ಪಿರುವ ಘಟನೆ ಶನಿವಾರ ಮುಂಜಾನೆ ನಡೆದಿದೆ
ಪಲ್ಟಿಯಾದ ಕಾರು
ಪಲ್ಟಿಯಾದ ಕಾರು

ಧಾರವಾಡ: ರಾಷ್ಟ್ರೀಯ ಹೆದ್ದಾರಿಯ ತಿರುವಿನಲ್ಲಿ ಕಾರೊಂದು ಪಲ್ಟಿಯಾದ ಪರಿಣಾಮ ಅದರಲ್ಲಿದ್ದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದ 30 ವರ್ಷದ ಯುವಕ ಸಾವನ್ನಪ್ಪಿರುವ ಘಟನೆ ಶನಿವಾರ ಮುಂಜಾನೆ ನಡೆದಿದೆ. ಮೃತನನ್ನು ದೀಪಕ್ ಎಂದು ಗುರುತಿಸಲಾಗಿದ್ದು,  ಅಪಘಾತದಲ್ಲಿ ಗಾಯಗೊಂಡಿರುವ ಆತನ ಸ್ನೇಹಿತ ವಿನಯ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಧಾರವಾಡ ನಗರದ ಹೊರವಲಯದ ಮುಮ್ಮಿಗಟ್ಟಿ ಗ್ರಾಮದ ಬಳಿ ಈ ಘಟನೆ ನಡೆದಿದೆ. ರಸ್ತೆ ದುರಸ್ತಿ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಯಿಂದ ಪರ್ಯಾಯ ಮಾರ್ಗವನ್ನು ಸೂಚಿಸಲಾಗಿತ್ತು. ಆದರೆ, ಕಾರು ಚಾಲಕ ಪರ್ಯಾಯ ಮಾರ್ಗದ ಸೂಚನೆ ಪಾಲಿಸದೆ, ಕಾಮಗಾರಿ ನಡೆಯುತ್ತಿರುವ ರಸ್ತೆ ಪ್ರವೇಶಿಸಿದ್ದಾರೆ.

ಕಾರನ್ನು ನಿಲ್ಲಿಸಲು ಅವರು ಪ್ರಯತ್ನಿಸಿದಾಗ ಅದು ರಸ್ತೆ ಬದಿಗೆ ಹೊಡೆದು ಪಲ್ಟಿಯಾಗಿದೆ. ಪರಿಣಾಮ ದೀಪಕ್ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ದೀಪಕ್ ಯಾದಗಿರಿ ಜಿಲ್ಲೆಯವರಾಗಿದ್ದು, ಧಾರವಾಡದ ಎಸ್‌ಡಿಎಂ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದರು. ಈ ಸಂಬಂಧ ಗರಗ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com