ನೇಮಕಾತಿಯಲ್ಲಿ ಅಕ್ರಮ: ಮಾಜಿ ಸಚಿವ ಮುರುಗೇಶ್ ನಿರಾಣಿ ವಿರುದ್ಧದ ತನಿಖೆಗೆ ಅಸ್ತು; ಬಂಧನಕ್ಕೆ ನಿರ್ಬಂಧ ವಿಧಿಸಿದ ಹೈಕೋರ್ಟ್‌

ಪ್ರಕರಣ ಸಂಬಂಧ ಪೊಲೀಸರು ತನಿಖೆ ನಡೆಸಬಹುದು. ಆದರೆ, ತನಿಖೆಗೆ ಸಹಕರಿಸಿದರೆ, ಅರ್ಜಿದಾರರನ್ನು ತನಿಖಾಧಿಕಾರಿಗಳು ಬಂಧಿಸುವಂತಿಲ್ಲ ಎಂದು ನಿರ್ದೇಶಿಸಿ ಪೀಠವು ಮಧ್ಯಂತರ ಆದೇಶ ಮಾಡಿತು.
ಸಚಿವ ಮುರುಗೇಶ್ ನಿರಾಣಿ
ಸಚಿವ ಮುರುಗೇಶ್ ನಿರಾಣಿ
Updated on

ಬೆಂಗಳೂರು: ಕೈಗಾರಿಕೆ ಇಲಾಖೆಯ ಮಾರ್ಕೆಟಿಂಗ್‌, ಜಾಹೀರಾತು ಮತ್ತು ಪ್ರಚಾರ ಸಂಸ್ಥೆಯಲ್ಲಿ 2011-15ರಲ್ಲಿ ನಡೆದ ನೇಮಕಾತಿಯಲ್ಲಿ ಅಕ್ರಮ ನಡೆಸಿದ ಆರೋಪದ ಮೇಲೆ ಮಾಜಿ ಸಚಿವ ಮುರಗೇಶ್ ನಿರಾಣಿ ವಿರುದ್ಧದ ತನಿಖೆಗೆ ಶುಕ್ರವಾರ ಅನುಮತಿಸಿರುವ ಹೈಕೋರ್ಟ್‌, ನಿರಾಣಿ ಅವರನ್ನು ಬಂಧಿಸದಂತೆ ಬೆಂಗಳೂರಿನ ಹೈಗ್ರೌಂಡ್ಸ್‌ ಪೊಲೀಸರಿಗೆ ನಿರ್ದೇಶಿಸಿದೆ.

ಪ್ರಕರಣ ಸಂಬಂಧ ತನಿಖೆ ನಡೆಸುವಂತೆ ನಗರದ ಹೈಗ್ರೌಂಡ್ಸ್ ಠಾಣಾ ಪೊಲೀಸರಿಗೆ ನಿರ್ದೇಶಿಸಿರುವ ವಿಶೇಷ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದ ಆದೇಶ ರದ್ದುಪಡಿಸಬೇಕು ಎಂದು ಕೋರಿ ಮಾಜಿ ಸಚಿವ ಮುರುಗೇಶ್‌ ನಿರಾಣಿ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಕೃಷ್ಣ ಎಸ್‌. ದೀಕ್ಷಿತ್‌ ಅವರ ಏಕಸದಸ್ಯ ಪೀಠ ನಡೆಸಿತು.

ಪ್ರಕರಣ ಸಂಬಂಧ ಪೊಲೀಸರು ತನಿಖೆ ನಡೆಸಬಹುದು. ಆದರೆ, ತನಿಖೆಗೆ ಸಹಕರಿಸಿದರೆ, ಅರ್ಜಿದಾರರನ್ನು ತನಿಖಾಧಿಕಾರಿಗಳು ಬಂಧಿಸುವಂತಿಲ್ಲ ಎಂದು ನಿರ್ದೇಶಿಸಿ ಪೀಠವು ಮಧ್ಯಂತರ ಆದೇಶ ಮಾಡಿತು. ಜೊತೆಗೆ, ಅರ್ಜಿಯಲ್ಲಿ ಪ್ರತಿವಾದಿಯಾಗಿರುವ ಪ್ರಕರಣದ ಮೂಲದೂರುದಾರ ಸಾಮಾಜಿಕ ಕಾರ್ಯಕರ್ತ ಟಿ ಜೆ ಅಬ್ರಹಾಂ ಮತ್ತು ಬೆಂಗಳೂರು ಹೈಗ್ರೌಂಡ್ಸ್‌ ಪೊಲೀಸರಿಗೆ ನೋಟಿಸ್‌ ಜಾರಿಗೊಳಿಸಿ ವಿಚಾರಣೆ ಮುಂದೂಡಿತು.

ಸಚಿವ ಮುರುಗೇಶ್ ನಿರಾಣಿ
ವೈಯಕ್ತಿಕ ದಾಳಿ ನಿಲ್ಲಿಸಿ, ನಿಮ್ಮ ಕರಾಳ ರಹಸ್ಯ ಬಯಲು ಮಾಡುತ್ತೇನೆ: ಕೂಡಲಸಂಗಮ ಶ್ರೀಗೆ ಮುರುಗೇಶ್ ನಿರಾಣಿ ಎಚ್ಚರಿಕೆ

ಅರ್ಜಿದಾರರ ಪರ ವಕೀಲ ಟಿ ಅಜಯ್‌ ಕಡಕೋಳ ಅವರು “2011ರಲ್ಲಿ ಮರುಗೇಶ್‌ ನಿರಾಣಿ ಅವರು ರಾಜ್ಯದ ಬೃಹತ್‌ ಕೈಗಾರಿಕೆ ಸಚಿವರಾಗಿದ್ದರು. ಈ ವೇಳೆ ಕೈಗಾರಿಕೆ ಇಲಾಖೆಯ ಮಾರ್ಕೆಂಟಿಂಗ್‌, ಜಾಹೀರಾತು ಮತ್ತು ಪ್ರಚಾರ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿತ್ತು. ನೇಮಕಾತಿ ಮತ್ತು ಸೇವಾ ಕಾಯಂ ಪ್ರಕ್ರಿಯೆ 2011ರಿಂದ 15ರವರೆಗೆ ನಡೆದಿದೆ. ಸಚಿವರಾಗಿದ್ದ ಮುರುಗೇಶ್‌ ನಿರಾಣಿ ಅವರು ಈ ನೇಮಕಾತಿಗೆ ಅಕ್ರಮವಾಗಿ ಅನುಮತಿ ನೀಡಿದ್ದಾರೆ ಎಂದು ಆರೋಪಿಸಿ ಹತ್ತು ವರ್ಷಗಳ ನಂತರ ಖಾಸಗಿ ದೂರುದಾರರು ವಿಚಾರಣಾಧೀನ ನ್ಯಾಯಾಲಯಕ್ಕೆ ದೂರು ದಾಖಲಿಸಿದ್ದಾರೆ. ಅದನ್ನು ಪರಿಗಣಿಸಿದ ನ್ಯಾಯಾಲಯವು ತನಿಖೆ ನಡೆಸಲು ಹೈಗ್ರೌಂಡ್ಸ್‌ ಪೊಲೀಸರಿಗೆ ನಿರ್ದೇಶಿಸಿದೆ. ಅದರಂತೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆʼ ಎಂದು ವಿವರಿಸಿದರು.

ಮುಂದುವರಿದು, ಪ್ರಕರಣದಲ್ಲಿ ನೇಮಕಾತಿ ನಡೆಸಲು ನಿರಾಣಿ ಅವರು ಅಕ್ರಮವಾಗಿ ಅನುಮತಿ ನೀಡಿಲ್ಲ. ಹೀಗಿದ್ದರೂ ದುರದ್ದೇಶಪೂರ್ವಕವಾಗಿ ಅವರ ವಿರುದ್ಧ ದೂರು ದಾಖಲಿಸಲಾಗಿದೆ. ಪ್ರಕರಣದ ಸತ್ಯಾಂಶಗಳನ್ನು ಪರಿಗಣಿಸದೆ ವಿಚಾರಣಾಧೀನ ನ್ಯಾಯಾಲಯವು ತನಿಖೆಗೆ ಆದೇಶಿಸಿದೆ. ಈ ಕ್ರಮವು ಕಾನೂನುಬಾಹಿರವಾಗಿದ್ದು, ಖಾಸಗಿ ದೂರು ಮತ್ತು ಅದಕ್ಕೆ ಸಂಬಂಧಿಸಿದ ವಿಚಾರಣಾಧೀನ ನ್ಯಾಯಾಲಯದ ವಿಚಾರಣೆ ರದ್ದುಪಡಿಸಬೇಕು” ಎಂದು ಕೋರಿದರು.

ಸರ್ಕಾರದ ಪರವಾಗಿ ಹೆಚ್ಚುವರಿ ಸರ್ಕಾರಿ ಅಭಿಯೋಜಕರಾದ ಬಿ ಎನ್‌ ಜಗದೀಶ್‌ ಇದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com